
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ತಡರಾತ್ರಿ ಟೇಕ್ಆಫ್ಗೆ ಸಿದ್ಧವಾಗಿದ್ದ ವೇಳೆ, ವಿಮಾನದ ಲ್ಯಾವೆಟರಿಯಲ್ಲಿ “Don’t go. Bomb Hai please” ಎಂದು ಇಂಗ್ಲಿಷ್ನಲ್ಲಿ ಬರೆದಿದ್ದ ಕಾಗದವನ್ನು ಕಿಡಿಗೇಡಿಯೊಬ್ಬ ಇರಿಸಿದ್ದಾನೆ. ವಿಮಾನದ ಸಿಬ್ಬಂದಿಗೆ ಈ ಸಂದೇಶ ಗಮನಕ್ಕೆ ಬಂದ ತಕ್ಷಣ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದರು. ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ತಂಡಗಳು ವಿಮಾನದ ಪ್ರತಿಯೊಂದು ಭಾಗವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದವು.
ಸುದೀರ್ಘ ಪರಿಶೀಲನೆಯ ಬಳಿಕ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದೇ, ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ. ಬಳಿಕ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಯಿತು.
ಈ ಸಂಬಂಧ ಬಾಂಬ್ ಬೆದರಿಕೆ ಸಂದೇಶ ಬರೆದಿಟ್ಟ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆಯಿಂದ ಕೆಲಕಾಲ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.