ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago