ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

7 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

7 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

10 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago