ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

5 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

5 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

6 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

8 hours ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

9 hours ago