ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

7 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

8 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

8 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

14 hours ago