ವಿಶೇಷ ಚೇತನ ಮತ್ತು ಹಿರಿಯ ನಾಗರಿಕರ ಬಳಕೆಗೆ ನಿರ್ಮಿಸಿರುವ ಸೌಲಭ್ಯಗಳಿಗಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ : ಈ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಕೊಡಮಾಡುವ “ಪ್ರವೇಶ ವರ್ಧಕ ಮಾನ್ಯತೆ” (ಎಇಎ) ಕಾರ್ಯಕ್ರಮದ ಅಡಿಯಲ್ಲಿ 1ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಸುಲಲಿತವಾಗಿ ಸಂಚರಿಸಲು ಹಾಗೂ ಇತರ ಸೌಲಭ್ಯಗಳನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತ ವ್ಯವಸ್ಥೆ ನಿರ್ಮಿಸಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕ ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಇಎ ಮಾನ್ಯತೆ ಪಡೆಯಲು ಕಾರಣವಾಗಿದೆ.

ಎಇಎ ಮಾನ್ಯತೆಯು ಜಾಗತಿಕ ಬೇಡಿಕೆಗೆ ಅನುಗುಣವಾಗಿ ಸಾರ್ವತ್ರಿಕ ವಿನ್ಯಾಸ, ಲಭ್ಯವಿರುವ ಸೌಲಭ್ಯಗಳ ಮೌಲ್ಯಮಾಪನ, ಸುಧಾರಣೆಗಳನ್ನು ಕಾರ್ಯಗತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಗುಣಮಟ್ಟವನ್ನು ವಿಮಾನ ನಿಲ್ದಾಣದಲ್ಲಿ ರೂಢಿಗತಗೊಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.
ಮೂರು ಪ್ರಗತಿಶೀಲ ಹಂತಗಳನ್ನು ಒಳಗೊಂಡಿರುವ “ಪ್ರವೇಶ ವರ್ಧಕ ಮಾನ್ಯತೆ”(AEA) ಕಾರ್ಯಕ್ರಮವು ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮಗಳು ಮತ್ತು ಅವುಗಳಿಂದ ದೊರೆಯುವ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಂದರ್ಶಕರು ಮತ್ತು ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯವನ್ನು ಆಧರಿಸಿ ಈ ಮಾನ್ಯತೆಯನ್ನು ನೀಡಲಾಗುತ್ತದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಡಿಮೆ ಚಲನಶೀಲತೆ ಹೊಂದಿರುವ (PRM) ಮತ್ತು ದಿವ್ಯಾಂಗ ವ್ಯಕ್ತಿಗಳಿಗೆ (PwDs) ಅನುಗುಣವಾಗಿ ಸೌಲಭ್ಯ, ಸಾರಿಗೆ ಮತ್ತು ಇತರ ಸೇವೆಗಳನ್ನು ಒದಗಿಸುವ ಕುರಿತು ಸಮಿತಿಯೊಂದು ಮೀಸಲಾಗಿದ್ದು, ಇದು ವಿಮಾನ ನಿಲ್ದಾಣದಲ್ಲಿ ದೊರೆಯುವ ಸೇವೆಗಳ ಮೇಲ್ವಿಚಾರಣೆ ಮಾಡುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಬೆಂಬಲ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಲಾಗುತ್ತದೆ. ಜೊತೆಗೆ, ವಿಮಾನ ಪ್ರಯಾಣವನ್ನು ಎಲ್ಲರಿಗೂ ಒತ್ತಡ ಮುಕ್ತ ಮತ್ತು ಉಲ್ಲಾಸಮಯಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಸಹಕರಿಸುತ್ತದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಈ ಕುರಿತು ಮಾತನಾಡಿ, “ಎಸಿಐನಿಂದ ಪ್ರವೇಶ ವರ್ಧಕ ಮಾನ್ಯತೆ ದೊರೆತಿರುವುದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಸೌಲಭ್ಯ ಒದಗಿಸಲಾಗುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ. ಎಲ್ಲ ಟರ್ಮಿನಲ್‌ಗಳಲ್ಲಿ ನಮ್ಮ ಸಿಬ್ಬಂದಿಯನ್ನು ಸಬಲೀಕರಣಗೊಳಿಸಲು ಮತ್ತು ವಿಮಾನ ನಿಲ್ದಾಣದಲ್ಲಿನ ಇತರ ಸಂಸ್ಥೆಗಳ ಜೊತೆ ನಿರಂತರ ಸಹಯೋಗ ಸಾಧಿಸಲು ಕಳೆದ ಕೆಲವು ವರ್ಷಗಳಿಂದ ಹಲವಾರು ಉಪಕ್ರಮಗಳನ್ನು ಪರಿಚಯಿಸಿದ್ದೇವೆ. ವಿಮಾನ ನಿಲ್ದಾಣಕ್ಕೆ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಸತ್ಕರಿಸುವ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಇದೀಗ ಬೆಂಗಳೂರು ವಿಮಾನ ನಿಲ್ದಾಣ ಪಡೆದಿರುವ ಈ ಮಾನ್ಯತೆಯು ನಮ್ಮ ಇತರ ಕಾರ್ಯಕ್ರಮಗಳಾದ “ಬಿ-ಇನ್‌ಕ್ಲೂಡೆಡ್‌ ಮತ್ತು “ಸಹಾಯಕ ಸಾಧನ ನೀತಿ”ಗಳ ಮೂಲಕ ಮತ್ತಷ್ಟು ಬಲಗೊಳ್ಳಲಿದೆ. ಇದು ವೈವಿಧ್ಯಮಯ, ಎಲ್ಲರಿಗೂ ಸಮಾನ ಮತ್ತು ಎಲ್ಲರನ್ನೂ ಒಳಗೊಂಡ ಸಂಸ್ಥೆಯನ್ನು ರಚಿಸುವ ಮತ್ತು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವು 2022 ರಲ್ಲಿ ಸನ್‌ಫ್ಲಾವರ್‌ ಲ್ಯಾನ್ಯಾರ್ಡ್ ಯೋಜನೆಯನ್ನು ಪರಿಚಯಿಸಿದ್ದು, ಇದು ಗೋಚರಿಸದ ಅಂಗವೈಕಲ್ಯ ಹೊಂದಿರುವವರಿಗೆ ಅಗತ್ಯ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಿದೆ.

ಈ ಪ್ರಯತ್ನಗಳು ಸಂಚಾರ ಸಮಸ್ಯೆ ಮತ್ತು ದಿವ್ಯಾಂಗ ಹೊಂದಿರುವ ವ್ಯಕ್ತಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪ್ರಯಾಣದುದ್ದಕ್ಕೂ ಒದಗಿಸುವುದಾಗಿದೆ. ಜೊತೆಗೆ, ಬೆಂಗಳೂರು ವಿಮಾನ ನಿಲ್ದಾಣವು ವಿಮಾನಯಾನ ಕ್ಷೇತ್ರದಲ್ಲಿ ಸಂಚಾರ ಸಮಸ್ಯೆ ಮತ್ತು ದಿವ್ಯಾಂಗತೆ ಹೊಂದಿರುವ ವ್ಯಕ್ತಿಗಳ ಅನುಭವದ ಮಾನದಂಡವನ್ನು ಹೊಸ ಎತ್ತರಕ್ಕೆ ಏರಿಸುವ ಗುರಿಯನ್ನು ಹೊಂದಿದೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

11 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago