ವಿಶೇಷ ಸಚಿವ ಸಂಪುಟ ಸಭೆ: ಸಚಿವ ಸಂಪುಟ ಸಭೆಯ ಬಳಿಕ ಸಿಎಂ‌ ಸಿದ್ದರಾಮಯ್ಯ ಮಾತು

ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಸಿಎಂ‌ ಸಿದ್ದರಾಮಯ್ಯ ಮಾತುಗಳು ಈ ಕೆಳಕಂಡಂತಿವೆ…

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಳು ನಡೆದು ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ ಇಂದು ಅಂತಿಮವಾಗಿ ಚರ್ಚೆ ಮಾಡಲು ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಇಂದು ಒಂದೇ ವಿಷಯದ ಮೇಲೆ ಚರ್ಚೆ ಮಾಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ಕೈಗೊಂಡು ಮನೆ ಮನೆಗೆ ಭೇಟಿ ನೀಡಿ ಸಲ್ಲಿಸಿರುವ ವರದಿಯಾಗಿದೆ. 2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನರಿದ್ದರು. ಈ ಜನಸಂಖ್ಯೆ 2015 ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನರು ಸಮೀಕ್ಷೆಗೆ ಒಳಪಟ್ಟಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದ್ದು 11.4.2015 ರಂದು ಹಾಗೂ 30-5-2015 ರಂದು ಮುಕ್ತಾಯವಾಗಿದೆ. 1.60 ಲಕ್ಷ ಸಿಬ್ಬಂದಿ ಹಾಗೂ 1.33 ಲಕ್ಷ ಉಪಾಧ್ಯಾಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೆ 2013-2018 ರವರೆಗೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮಗೊಂಡಿರಲಿಲ್ಲ. 2018 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದರು. ಪುಟ್ಟರಂಗಶೆಟ್ಟರು ಅವರು ಹಿಂದುಳಿದ ವರ್ಗಗಳ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು. ಅಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜು ಹಾಗೂ ಸದಸ್ಯರು ಸಚಿವ ಪುಟ್ಟರಂಗಶೆಟ್ಟರನ್ನು ಭೇಟಿ ಮಾಡಿ ವರದಿ ಪಡೆಯಬೇಕು ಎಂದು ಕೋರಿದಾಗ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಒತ್ತಡ ಹಾಕಿ ವರದಿಯನ್ನು ಪಡೆಯಬಾರದು ಎಂದದ್ದರಿಂದ ಅವರು ವರದಿ ಪಡೆಯಲಿಲ್ಲ.

ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗ್ಡೆಯವರನ್ನು ಬಿಜೆಪಿ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಕೂಡ ಬಿಜೆಪಿಯವರೇ ಆಗಿದ್ದರು. ಜಯಪ್ರಕಾಶ್ ಹೆಗ್ಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಶಿಫಾರಸ್ಸುಗಳನ್ನು ಮಾಡಿದರು. ಶಿಫಾರಸ್ಸುಗಳನ್ನು 29-2-2024 ರಂದು ಸರ್ಕಾರಕ್ಕೆ ಸಲ್ಲಿಸಿದರು. ಕಾಂತರಾಜು ಅವರು ಕೂಡ ಈ ಸಂದರ್ಭದಲ್ಲಿ ಇದ್ದರು.

ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿಯ ಬಗ್ಗೆ ಚರ್ಚೆ ಮಾಡಲಾಗಲಿಲ್ಲ. ನಂತರ ನಮ್ಮ ಸರ್ಕಾರ ವರದಿಯನ್ನು ಪಡೆದು 2025 ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವ ಸಂಪುಟದಲ್ಲಿ ಮಂತ್ರಿ ಮ೦ಡಲದ ಸದಸ್ಯರು ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚೆ ಮಾಡಿದ್ದೇವೆ.

ಪಕ್ಷದ ವರಿಷ್ಠರು ನನ್ನನ್ನು ಮತ್ತು ಉಪಮುಖ್ಯಮಂತ್ರಿಗಳನ್ನು ಕರೆದು ವರದಿ ಹತ್ತು ವರ್ಷಗಳಷ್ಟು ಹಳೆಯದಾಗಿದ್ದು, ಕಾನೂನು ಪ್ರಕಾರ ಅನೇಕ ಬದಲಾವಣೆಗಳು ಮತ್ತು ಬೆಳವಣಿಗೆಗಳು ಆಗಿರುತ್ತವೆ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಿದ್ದುಪಡಿ ವಿಧೇಯಕ (2014) ಸೆಕ್ಷನ್ 11 ಕಲಂ (1) ರಂತೆ ರಾಜ್ಯ ಸರ್ಕಾರವು ಯಾವುದೇ ಸಮಯದಲ್ಲಿ ಈ ಅಧಿನಿಯಮ ಜಾರಿಗೆ ಬಂದ ದಿನಾಂಕದಿಂದ 10 ವರ್ಷಗಳ ಅವಧಿ ಮುಕ್ತಾಯವಾದಾಗ, ಮತ್ತು ಅದರ ನಂತರ ಬರುವ ಪ್ರತಿ 10 ವರ್ಷಗಳು ಮುಕ್ತಾಯವಾಗುವಾಗ ಹಿಂದುಳಿದ ವರ್ಗವಾಗಿ ಉಳಿಯದೇ ಹೋಗಿರುವ ವರ್ಗಗಳನ್ನು ಪಟ್ಟಿಯನ್ನು ತೆಗೆದುಹಾಕುವುದು ಅಥವಾ ಹೊಸ ಹಿಂದುಳಿದ ವರ್ಗಗಳನ್ನು ಪಟ್ಟಿಗೆ ಸೇರಿಸುವದು ಎಂದು ಸ್ಪಷ್ಟವಾಗಿದೆ ಹೇಳಿದೆ. ಕಲಂ 2 ರಲ್ಲಿ ಹೇಳಿದಂತೆ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯಕ್ ಅವರ ಸಲಹೆಯನ್ನೂ ಪಡೆಯಲಾಗುವುದು.

ಕಾಯ್ದೆಯ ಸೆಕ್ಷನ್ 11 ರಂತೆ ಹತ್ತು ವರ್ಷಗಳ ನಂತರ ಸಮೀಕ್ಷೆಯ ವರದಿ ಮಾನ್ಯವಾಗುವುದಿಲ್ಲ. ಜನಸಂಖ್ಯೆ, ಶೈಕ್ಷಣಿಕ ಸಾಮಾಜಿಕ ಬೆಳವಣಿಗೆಗಳು ಆಗಿರುತ್ತವೆ.

ನಿವೃತ್ತ ಅಡ್ವಕೇಟ್ ಜನರಲ್ ಮಧುಸೂದನ ನಾಯಕ್ ಅವರು ಹಿ೦ದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಇನ್ನೂ ಸದಸ್ಯರುಗಳ ನೇಮಕ ಆಗಬೇಕಿದೆ. ಸಮೀಕ್ಷೆ ಕುರಿತು ಚರ್ಚಿಸಲು ಅವರನ್ನು ಸಂಪರ್ಕಿಸಲಾಗುವುದು.

ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ- 1995ರ ಸೆಕ್ಷನ್ 9 (2) ರಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಬೇಕು ಎ೦ದು ಹೇಳಿದೆ. ತಿದ್ದುಪಡಿ ಆಗಿರುವುದು 2014ರಲ್ಲಿ. ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಮೇಲ್ವಿಚಾರಣೆ ಮಾಡಬೇಕು ಎಂದು ಸೆಕ್ಷನ್ (3) ರಲ್ಲಿ ಹೇಳಿದೆ. ಸೆಕ್ಷನ್ 9 (1)ರ ಅನ್ವಯ ಅರ್ಜಿಗಳನ್ನು ಪರಿಶೀಲಿಸಿ ಹಿಂದುಳಿದ ವರ್ಗಗಳಿಗೆ ಸೇರಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆಯೋಗಕ್ಕೆ ಇರುತ್ತದೆ ಎಂದು ಹೇಳಲಾಗಿದೆ. ಆದ್ದರಿಂದ ಹೊಸದಾಗಿ ಸಮೀಕ್ಷೆ ನಡೆಸುವ ಕುರಿತು ಇಂದು ಸಚಿವ ಸಂಪುಟದ ನಿರ್ಧಾರ ಆಗಿದ್ದು ಮುಂದಿನ ದಿನಗಳಲ್ಲಿ ಆಯೋಗದ ಸಲಹೆಯನ್ನೂ ಪಡೆಯಲಾಗುತ್ತದೆ.

ಕಾಂತರಾಜು ಅವರ ನೇತೃತ್ವದ ಆಯೋಗ ಸಮೀಕ್ಷೆ ಮಾಡಿ ಹತ್ತು ವರ್ಷಗಳು ಕಳೆದಿದೆ. ಹತ್ತು ವರ್ಷಗಳಾದ ನಂತರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಸೆಕ್ಷನ್ 11(1) ರಲ್ಲಿ ಹೇಳಲಾಗಿದ್ದು ಅದರ ಪ್ರಕಾರ ತೀರ್ಮಾನ ತೆಗೆದುಕೊ೦ಡಿದ್ದೇವೆ.

ಕೇಂದ್ರ ಸರ್ಕಾರವೂ ಎಲ್ಲಿಯೂ ಕೂಡಾ ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ. ನಾವು ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವಿರಾ ಎಂದು ಕೇಳಿದಾಗಲೂ ಉತ್ತರ ಕೊಡಲಿಲ್ಲ. ಹಾಗಾಗಿ ನಾವು ಮಾಡುತ್ತಿದ್ದೇವೆ. ಸಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಅನ್ವಯ ಸಾಮಾಜಿಕ ನ್ಯಾಯ ನೀಡಲು ಬದ್ಧವಾಗಿದೆ. ಸಮೀಕ್ಷೆಯನ್ನು 90 ದಿನಗಳ ಒಳಗೆ ಮಾಡಲು ಆಯೋಗವನ್ನು ಕೋರುತ್ತೇವೆ. ತೆಲಂಗಾಣದಲ್ಲಿ 70 ದಿನಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ.

ಹತ್ತು ವರ್ಷಗಳಲ್ಲಿ ಜನಸಂಖ್ಯೆ ಹೆಚ್ಚಾಗಿರುತ್ತದೆ. ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬದಲಾವಣೆಗಳೂ ಆಗಿರುತ್ತವೆ. ಆದ್ದರಿಂದ ಹತ್ತು ವರ್ಷಗಳ ನಂತರ ಸಮೀಕ್ಷೆ ನಡೆಸಬೇಕೆಂದು ಅಧಿನಿಯಮದಲ್ಲಿ ಹೇಳಿದೆ. ಅದರಂತೆ ನಾವು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago