Categories: ಲೇಖನ

ವಿಶ್ವ ಪರಿಸರ ದಿನ ಎಂಬ ನಾಟಕ….ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್….

ನಮಗಾಗಿ ಪರಿಸರ ಮುಗಿದು,
ಪರಿಸರಕ್ಕಾಗಿ ನಾವು ಎಂಬ ದುಸ್ಥಿತಿಯಲ್ಲಿ………

ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………

ಈ ವರ್ಷದ World environment day
ಜೂನ್ 5………

ಕಳೆದ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ….

ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ…..

ವಿಶ್ವ ಪರಿಸರ ದಿನ ಎಂಬ ನಾಟಕ,
ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ,
ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್,
ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ…..

ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ,
ಆತನ ಅಸ್ತಿತ್ವವದ ಮೂಲವೇ ಪರಿಸರ,
ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ – ಬೂಟಾಟಿಕೆ….

ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ,….

ಹೃದಯವನ್ನು ಇರಿದುಕೊಂಡು ಹೃದಯ ಉಳಿಸಿ ಎಂಬ ಕಣ್ಣೀರೇಕೆ,….

ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಕುಡಿದು ಜೀವ ಉಳಿಸಿ ಎಂದು ಬೇಡುವಂತ ದೈನೇಸಿ ಸ್ಥಿತಿ ಏಕೆ……

ಈ ಮನುಷ್ಯನಿಗೆ ಬೇಕಿರುವುದು ದೊಡ್ಡ ದೊಡ್ಡ, ಉದ್ದುದ್ದದ ವಿಶಾಲ ರಸ್ತೆಗಳು, ಲಕ್ಜುರಿ ಅಪಾರ್ಟ್‌ಮೆಂಟ್ ಗಳು, ಬೃಹತ್ ಕಟ್ಟಡಗಳು, ಜಂಗಲ್ ಲಾಡ್ಜ್ ಗಳು, ಸ್ಮಾರ್ಟ್ ಸಿಟಿಗಳು, ನಿರಂತರ ವಿದ್ಯುತ್, ವಿಮಾನ ನಿಲ್ದಾಣಗಳು, ಭವ್ಯ ಆಸ್ಪತ್ರೆಗಳು, ರಾಸಾಯನಿಕ ಕಾರ್ಖಾನೆಗಳು,….‌

ಮೊಬೈಲ್, ಷೂ, ಲಿಪ್ ಸ್ಟಿಕ್, ಡ್ರೆಸ್, ಕಾರ್, ಕಮೋಡ್ ಗಳಲ್ಲಿ ಅತ್ಯುತ್ತಮ ಕ್ವಾಲಿಟಿ ನಿರೀಕ್ಷಿಸುವ – ಬಯಸುವ ಇದೇ ಮನುಷ್ಯನಲ್ಲಿ ಆತನ ದೇಹ ಮತ್ತು ಮಾನಸಿಕ ಆರೋಗ್ಯದಲ್ಲಿ ಯಾವುದೇ ಕ್ವಾಲಿಟಿ ಇರುವುದಿಲ್ಲ…..

ನೀರನ್ನು, ಗಾಳಿಯನ್ನು, ಆಹಾರವನ್ನು ವಿಷಯುಕ್ತ ಮಾಡಿರುವ ಸರ್ಕಾರಗಳು ಈಗ ವಿಶ್ವ ಪರಿಸರ ದಿನ ಎಂಬ ಜಾಗೃತಿ ಮೂಡಿಸುವ ದಿನವನ್ನು ಆಚರಿಸುವ ನಾಟಕ ಪ್ರದರ್ಶಿಸುತ್ತಿವೆ…..

ಅಭಿವೃದ್ಧಿಯ ಮಾನದಂಡಗಳನ್ನು ತಪ್ಪಾಗಿ ಅರ್ಥೈಸಿ, ಆಧುನಿಕ ತಂತ್ರಜ್ಞಾನ ಉಪಯೋಗಿಸಿಕೊಂಡು ಒಂದು ಕಡೆ ಪರಿಸರ ನಾಶ, ಇನ್ನೊಂದು ಕಡೆ ಮಾನವೀಯ ಮೌಲ್ಯಗಳ ಕುಸಿತಕ್ಕೆ ಕಾರಣವಾಗಿದೆ…..

ಅಭಿವೃದ್ಧಿಯೂ ಬೇಕು, ಆಧುನಿಕತೆಯೂ ಬೇಕು, ತಂತ್ರಜ್ಞಾನವೂ ಬೇಕು, ಬೃಹತ್ ಜನಸಂಖ್ಯೆಯ ಬೇಡಿಕೆಯನ್ನೂ ಪೂರೈಸಬೇಕು, ಅದರಲ್ಲಿ ಯಾವುದೇ ರಾಜಿ ಬೇಡ. ಆದರೆ ಅದರ ಅರ್ಥ ಪರಿಸರ ಮತ್ತು ಮಾನವೀಯತೆಯ ನಾಶ ಎಂದಲ್ಲ. ಅವುಗಳ ಸಮತೋಲನ ಮತ್ತು ಸಮನ್ವಯ…..

ದುರಾದೃಷ್ಟವಶಾತ್ ಇಂದಿನ ಅಭಿವೃದ್ಧಿ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ಆಗಿದೆ…..

ಅಣುವಿನ ಕಣವಾಗಿ
ಪರಿಸರದ ದಿನಕ್ಕಾಗಿ
ನಾ ಕೊಡುವುದಾದರೂ ಏನು…………….

ಈಗಾಗಲೇ ಎಲ್ಲವನ್ನೂ ಕೊಟ್ಟಾಗಿದೆ.
ಈಗೇನಿದ್ದರೂ ಎಲ್ಲವೂ ಪಡೆಯುವುದೆ…..

ಏನೇನು ಪಡೆದಿರುವೆ ಹೇಳಲೆ……

ತಲೆ ತಿರುಗುತ್ತಿದೆ ಕೆಟ್ಟ ಬಿಸಿಲಿನ ಝಳಕ್ಕೆ ಸಿಲುಕಿ,…

ಕಣ್ಣು ಉರಿಯುತ್ತಿದೆ ಧೂಳು ತುಂಬಿದ ಗಾಳಿಗೆ ಸಿಲುಕಿ,….

ಉಸಿರಾಡುವುದೂ ಕಷ್ಟವಾಗುತ್ತಿದೆ ವಿಷಪೂರಿತ ವಾಯುವಿಗೆ ಸಿಲುಕಿ,….

ಕಿವಿ ನೋಯುತ್ತಿದೆ ಕರ್ಕಶ ಶಬ್ದಕ್ಕೆ ಸಿಲುಕಿ,…

ಬಾಯಿ ಹುಣ್ಣಾಗಿದೆ ಕಲುಷಿತ ನೀರಿಗೆ ಸಿಲುಕಿ,…

ನಾಲಿಗೆ ಹೆಪ್ಪುಗಟ್ಟಿದೆ ರಾಸಾಯನಿಕ ಬೆರೆಸಿದ ತಂಪು ಪಾನೀಯಕ್ಕೆ ಸಿಲುಕಿ,…

ಗಂಟಲು ಕೆಟ್ಟಿದೆ ಮಲಿನ ನೀರಿಗೆ ಸಿಲುಕಿ,…

ಹೊಟ್ಟೆ ನೋಯುತ್ತಿದೆ ಕಲಬೆರಕೆ ಆಹಾರಕ್ಕೆ ಸಿಲುಕಿ,…

ಸಾಕೇ ಇನ್ನೂ ಬೇಕೇ….

ಆದರೂ,

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ,
ಆಡಳಿತ ವ್ಯವಸ್ಥೆ ಹದಗೆಡುತ್ತಿದೆ,
ಚುನಾವಣಾ ರಾಜಕೀಯ ಹಳ್ಳ ಹಿಡಿಯುತ್ತಿದೆ,
ನ್ಯೆತಿಕತೆ ಕುಸಿಯುತ್ತಿದೆ,
ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ,….

ಆದರೂ,

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

SMART CITY ಆಗುತ್ತಿದೆ,
BULLET TRAIN ಬರುತ್ತಿದೆ,
E-GOVERNENCE ಆಗುತ್ತಿದೆ,
DIGITAL INDIA ಬರುತ್ತಿದೆ,
HIGHTECH ಆಸ್ಪತ್ರೆ ಆಗುತ್ತಿದೆ,
FIRST CLASS. ರಸ್ತೆಗಳು ಬರುತ್ತಿವೆ,…..

ಶ್ರೀಮಂತರು ಜಾಸ್ತಿಯಾಗುತ್ತಿದ್ದಾರೆ,
ತಂತ್ರಜ್ಞಾನ ಮುಂದುವರಿಯುತ್ತಿದೆ,….

ಆದರೆ,
ಧೈರ್ಯವಾಗಿ ಹೇಳಲು ಸಾಧ್ಯವಾಗುತ್ತಿಲ್ಲ ನಾವು ಮುಂದುವರಿಯುತ್ತಿದ್ದೇವೆಂದು…….

ಈ ಅಭಿವೃದ್ಧಿ,
ಹಣ ಕೇಂದ್ರಿತ, ತಂತ್ರಜ್ಞಾನ ಆಧಾರಿತ, ಅಂಕಿ ಸಂಖ್ಯೆ ಪ್ರೇರಿತ,…..

ವ್ಯಕ್ತಿತ್ವಗಳೇ ಕುಸಿಯುತ್ತಿರುವಾಗ, ಮಾನವೀಯತೆ ಮರೆಯಾಗುತ್ತಿರುವಾಗ,
ಸಮಾನತೆ ಕಾಣದಾದಾಗ, ಪ್ರಬುದ್ಧತೆ ಬೆಳೆಯದಾದಾಗ,
ಅಭಿವೃದ್ಧಿ ತಾತ್ಕಾಲಿಕ ಮತ್ತು ವಿನಾಶಕಾರಕ,….

ಪ್ರಕೃತಿ – ಪರಿಸರಗಳನ್ನೇ ದೇವರೆಂದು ಹೇಳಿ ಅದರ ಹೃದಯಕ್ಕೆ ಬೆನ್ನಿಗೆ ಚೂರಿ ಹಾಕುವ ಈ ಮನುಷ್ಯ ಪ್ರಾಣಿಗೆ ಏನು ಮಾಡುವುದು…..

ಪರಿಸರ ನಾಶ ಮಾಡುತ್ತಾ ಪರಿಸರದ ದಿನ ಆಚರಿಸುವ ಆತ್ಮವಂಚಕ ಮನಸ್ಥಿತಿ ನಮ್ಮದು…..

ತಕ್ಷಣ ಮಾಡಬೇಕಾದ ಕೆಲಸ ಬಹಳಷ್ಟಿದೆ. ಆದರೆ ಮಾಡುವವರು ಯಾರು ಎಂಬ ದೊಡ್ಡ ಪ್ರಶ್ನೆಯೊಂದಿಗೆ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

19 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago