ಸನ್ಮಾನ್ಯ ಮುಖ್ಯಮಂತ್ರಿಗಳೇ, ಒಮ್ಮೆ ವೇಷ ಮರೆಸಿಕೊಂಡು ಚಿಂಚೋಳಿ ತಾಲ್ಲೂಕಿನ ಒಂದು ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆಂದು ದಾಖಲಾಗಿ ನೋಡಿ, ದಯವಿಟ್ಟು,…...
ಮಾನ್ಯ ಗೃಹಮಂತ್ರಿಗಳೆ ಒಮ್ಮೆ ಅಪರಿಚಿತರಂತೆ ಶಿಕಾರಿಪುರ ತಾಲ್ಲೂಕಿನ ಯಾವುದಾದರೂ ಒಂದು ಪೋಲಿಸ್ ಸ್ಟೇಷನ್ನಿನ್ನಲ್ಲಿ ನಿಮ್ಮ ಮೇಲೆ ರಾಜಕಾರಣಿಯೊಬ್ಬನಿಂದ ಹಲ್ಲೆಯಾಗಿದೆಯೆಂದು
ದೂರು ಕೊಟ್ಟು ನೋಡಿ, ದಯವಿಟ್ಟು……
ಮಾನ್ಯ ಆಹಾರ ಸಚಿವರೆ, ಒಮ್ಮೆ ಹಿರಿಯೂರಿನಲ್ಲಿ ಯಾರಿಗೂ ನಿಮ್ಮ ಪರಿಚಯ ಗೊತ್ತಾಗದಂತೆ ರೇಷನ್ ಅಂಗಡಿಯಲ್ಲಿ ಸೆಕ್ಯುರಿಟಿಯಾಗಿ ಒಂದು ದಿನ ಕೆಲಸ ಮಾಡಿ ನೋಡಿ, ದಯವಿಟ್ಟು…..
ಮಾನ್ಯ ಕಾರ್ಮಿಕ ಸಚಿವರೆ, ಒಮ್ಮೆ ಹರಿದ ಬಟ್ಟೆ ಹಾಕಿಕೊಂಡು ಹೊಸಕೋಟೆಯಲ್ಲಿ ಬೀಡಿ ಕಟ್ಟುವ ಕೆಲಸಗಾರನಾಗಿ ದುಡಿದು ನೋಡಿ, ದಯವಿಟ್ಟು….
ಮಾನ್ಯ ಮಕ್ಕಳ ಕಲ್ಯಾಣ ಸಚಿವರೆ, ಒಮ್ಮೆ ದಾವಣಗೆರೆಯ ಯಾವುದಾದರೂ ಹೋಟೆಲ್ಲಿನಲ್ಲಿ ನಿಮ್ಮ ಮಗನನ್ನು ತಟ್ಟೆ ಲೋಟ ತೊಳೆಯುವ ಬಾಲಕಾರ್ಮಿಕನಾಗಿ ಕೆಲಸಕ್ಕೆ ಸೇರಿಸಿ ನೋಡಿ, ದಯವಿಟ್ಟು…..
ಮಾನ್ಯ ಶಿಕ್ಷಣ ಸಚಿವರೆ, ಇಂಡಿ ತಾಲ್ಲೂಕಿನ ಒಂದು ಹಳ್ಳಿಯಲ್ಲಿ ಸರ್ಕಾರಿ ಶಾಲೆಯಲ್ಲಿ ನಿಮ್ಮ ಮಗನನ್ನು ಒಂದು ತಿಂಗಳು ಓದಿಸಿ ನೋಡಿ, ದಯವಿಟ್ಟು…..
ಮಾನ್ಯ ಸಮಾಜ ಕಲ್ಯಾಣ ಸಚಿವರೆ, ಮುಳಬಾಗಿಲು ತಾಲ್ಲೂಕಿನ ಸರ್ಕಾರಿ ಹಾಸ್ಟಲಿನಲ್ಲಿ ಒಮ್ಮೆ ಅಡುಗೆ ಭಟ್ಟನಾಗಿ ಕೆಲಸ ಮಾಡಿ ನೋಡಿ, ದಯವಿಟ್ಟು…..
ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರೆ, ಹಳೆಯ ಮಾಸಲು ಬಟ್ಟೆ ತೊಟ್ಟು ಬೆಂಗಳೂರಿನ ಯಾವುದಾದರೂ ಒಂದು ಮಾಲ್ ನಲ್ಲಿ ಒಂದಿಡೀ ದಿನ ಸುತ್ತಾಡಿ ಬನ್ನಿ, ದಯವಿಟ್ಟು…..
ಮಾನ್ಯ ಕೃಷಿ ಸಚಿವರೆ, ಅಮಾಯಕರಂತೆ ಎಪಿಎಂಸಿ ಮಾರುಕಟ್ಟೆಯಲ್ಲಿ ನಾಲ್ಕು ಚೀಲ ಸೊಪ್ಪು ಮಾರಿ ಬನ್ನಿ ಒಮ್ಮೆ, ದಯವಿಟ್ಟು…
ಮಾನ್ಯ ನಗರಾಭಿವೃದ್ಧಿ ಸಚಿವರೆ, ಒಮ್ಮೆ ಯಾರಿಗೂ ತಿಳಿಯದಂತೆ ಬೆಳಗಾವಿಯ ಸ್ಲಂನಲ್ಲಿ ಒಂದು ರಾತ್ರಿ ವಾಸಿಸಿ ಬನ್ನಿ, ದಯವಿಟ್ಟು……
ಮಾನ್ಯ ಮಹಿಳಾ ಕಲ್ಯಾಣ ಸಚಿವರೆ, ಒಮ್ಮೆ ಆಕರ್ಷಕ ಸೀರೆಯುಟ್ಟು ಲಿಪ್ ಸ್ಟಿಕ್ ಹಚ್ಚಿಕೊಂಡು ರಾಜ್ಯದ ಯಾವುದಾದರೂ ಒಂದು ಸರ್ಕಾರಿ ಬಸ್ ನಿಲ್ಲಾಣದ ಬಳಿ ನಿಂತು ಜನರ ನಡವಳಿಕೆ ಗಮನಿಸಿ ಬನ್ನಿ, ದಯವಿಟ್ಟು…..
ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರೆ, ಒಮ್ಮೆ ಕನಕಪುರದ ಸುತ್ತ ಮುತ್ತ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿ ನೋಡಿ, ದಯವಿಟ್ಟು…….
ಇನ್ನೂ ಇನ್ನೂ ಎಲ್ಲಾ ಸಚಿವರೂ ಸಹ ತಮ್ಮ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ವೇಷ ಮರೆಸಿಕೊಂಡು ಪ್ರಯತ್ನಿಸಿ………………………
ಆಗ ತಿಳಿಯುತ್ತದೆ ನಿಮಗೆ ಸರ್ಕಾರದ ಸ್ಥಿತಿ, ಸಮಾಜದ ಪರಿಸ್ಥಿತಿ, ಜನರ ದುಸ್ಥಿತಿ, ಅಧಿಕಾರಿಗಳ ವಿಕೃತಿ, ಜನರ ನಿಜವಾದ ತಿಥಿ…ಛೆ….ಛೆ…..
ವಿಧಾನಸೌಧದ ಅಪಾರ ಭದ್ರತೆಯ, ನೂರಾರು ಸೇವಕರ, ಎಲ್ಲಾ ಅತ್ಯುತ್ತಮ ಸೌಕರ್ಯದ, ನಿಮ್ಮ ಚೇಲಾಗಳು ಸುತ್ತುವರಿದ ಸ್ಥಿತಿಯಲ್ಲಿ ಕುಳಿತು, ಅಂಕಿ ಸಂಖ್ಯೆಗಳ ಅಭಿವೃದ್ಧಿಯ ಆಟವಾಡುತ್ತಾ, ವಾಸ್ತವದಿಂದ, ಜನರ ಸಂಕಷ್ಟಗಳಿಂದ ಬಹಳ ದೂರ ಸರಿದಿದ್ದೀರ. ಸೀಟು ಪಡೆದು ಓಟು ಗಳಿಸಿ ಗೆಲ್ಲುವಲ್ಲಿ ನೀವು ತೋರಿಸುವ ಶ್ರಮ, ಶ್ರದ್ಧೆ, ಚಾಣಕ್ಷತನದ ಶೇಕಡ 10% ರಷ್ಟಾದರೂ ಜನರ ಸೇವೆಗಾಗಿ ಮೀಸಲಿಟ್ಟಿದ್ದರೆ ಸಾಕಿತ್ತು .ನಿಮ್ಮ ಬದುಕು ಸಾರ್ಥಕವಾಗುತ್ತಿತ್ತು…..
ಇರಲಿ, ಅದೃಷ್ಟವಂತರು ನೀವು. ಮೆರೆಯಿರಿ ಇನ್ನಷ್ಟು ದಿನ. ಜನರ ಅಜ್ಞಾನವನ್ನು ದುರುಪಯೋಗಪಡಿಸಿಕೊಂಡು……….
ಆದರೆ ಮುಂದೆ ಖಂಡಿತ ಬದಲಾವಣೆ ಸಮೀಪಿಸುತ್ತಿದೆ ನಿಮ್ಮ ಅಂತ್ಯಕ್ಕೆ,
ಜನ ಜಾಗೃತಗೊಳ್ಳುತ್ತಿದ್ದಾರೆ ಎಚ್ಚರ……….
ಇದು ಯಾವುದೇ ಪಕ್ಷದ ಅಥವಾ ಈಗಿನ ಅಥವಾ ಆಗಿನ ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರದ ಬಗ್ಗೆ ಮಾತ್ರವಲ್ಲ. ಒಟ್ಟು ಸರ್ಕಾರಿ ವ್ಯವಸ್ಥೆಯ ಕುರಿತ ಲೇಖನ………………
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…