ಶಕ್ತಿ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು- ಸಚಿವ ಕೆ.ಹೆಚ್.ಮುನಿಯಪ್ಪ

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ‘ಉಚಿತ ಪ್ರಯಾಣ ನಮ್ಮ ಪ್ರಮಾಣ’ ಎಂಬ ಘೋಷ ವಾಕ್ಯದೊಂದಿಗೆ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯಾದ್ಯಂತ ನಗರ ಸಾರಿಗೆ ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಲ್ಪಿಸಲು ವಿದ್ಯಾಭ್ಯಾಸ, ವಿವಿಧ ಸೌಲಭ್ಯಗಳನ್ನು ಒದಗಿಸಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಸದಾ ಬದ್ಧವಾಗಿರುತ್ತದೆ ಈ ನಿಟ್ಟಿನಲ್ಲಿ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿಕೊಡಲು ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ಯಾವುದೇ ರೀತಿಯ ತಾರತಮ್ಯ ಇಲ್ಲದೆ ಈ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದ್ದೇವೆ ಇದರಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಮಹಿಳೆಯರು ಸರ್ಕಾರದಿಂದ ನೀಡಿರುವ ಆಧಾರ್ ಕಾರ್ಡ್, ವೋಟರ್ ಐಡಿ ಮುಂತಾದ ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದು. ಮೂರು ತಿಂಗಳ ಒಳಗಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ವಿತರಿಸಲಾಗುವುದು ನಂತರ ಕರ್ನಾಟಕ ವ್ಯಾಪ್ತಿಯಲ್ಲಿ ಉಚಿತವಾಗಿ ಎಲ್ಲಿಗೆ ಬೇಕಾದರೂ ಸಂಚರಿಸಬಹುದು. ಈ ಶಕ್ತಿ ಯೋಜನೆಯು ರಾಜ್ಯದ ಎಲ್ಲಾ ಮಹಿಳೆಯರಿಗೂ ಅನ್ವಯಿಸುತ್ತದೆ ಎಂದರು.

ನಂತರ ಸ್ವತ: ಸಚಿವರೇ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್‌ಅನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ಹಿರೇಮಠ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಶಕ್ತಿ ಯೋಜನೆಯ ಪ್ರಮುಖ ಅಂಶಗಳನ್ನು ವಿವರಿಸುತ್ತಾ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಈ ಸೌಲಭ್ಯ ಪಡೆಯಲು ಅರ್ಹರು.

ಎಲ್ಲಾ ಮಹಿಳೆಯರಿಗೆ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಂತರ್ ರಾಜ್ಯ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ರಾಜ್ಯದ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಬಹುದು. ಐಶಾರಾಮಿ ಸಾರಿಗೆಗಳಲ್ಲಿ ಈ ಸೌಲಭ್ಯ ಇರುವುದಿಲ್ಲ. ಇ.ಟಿ.ಎಂ ತಂತ್ರಾಂಶದ ಮೂಲಕ ಉಚಿತ ಟಿಕೆಟ್ ವಿತರಣೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿದ್ದು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಗುರುತಿನ ಚೀಟಿ ಪರಿಶೀಲನೆ ನಡೆಸಿ ಶೂನ್ಯ ಟಿಕೆಟ್ ವಿತರಿಸಲಾಗುವುದು. ಅನಿವಾರ್ಯ ಸಂದರ್ಭದಲ್ಲಿ ಇಟಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಲ್ಲಿ ಮ್ಯಾನುಯಲ್ ರೀತಿಯ ಟಿಕೆಟ್ ವಿತರಿಸಲು ಕ್ರಮ ವಹಿಸಲಾಗುವುದು. ಮುಂಗಡ ಬುಕಿಂಗ್ ಸೌಲಭ್ಯ ಇರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಕಲ್ಪಿಸಿ ಕ್ರಮ ಕೈಗೊಳ್ಳಲಾಗಿದೆ.

ಸೇವಾ ಸಿಂಧು ತಂತ್ರಾಂಶದ ಮೂಲಕ 2023 ರ ಜೂನ್ 15ನೇ ತಾರೀಖಿನಿಂದ ಅರ್ಜಿಗಳನ್ನು ಸಲ್ಲಿಸಬಹುದು. ಮುಂದಿನ ಮೂರು ತಿಂಗಳೊಳಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ, ಕರ್ನಾಟಕ ಸರ್ಕಾರದಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸಸ್ಥಳ ಇರುವ ಗುರುತಿನ ಚೀಟಿಯನ್ನು ಶೂನ್ಯ ಟಿಕೆಟ್ ವಿತರಣೆ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ
ಜಿಲ್ಲಾಧಿಕಾರಿ ಆರ್.ಲತಾ, ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ತಹಸೀಲ್ದಾರ್ ಶಿವರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್, ಸಹಾಯಕ ಪೊಲೀಸ್ ಆಯುಕ್ತ ಸಿ.ಬಾಲಕೃಷ್ಣ , ದೇವನಹಳ್ಳಿ ಪುರಸಭಾ ಮುಖ್ಯಾಧಿಕಾರಿ ದೊಡ್ಡಮಲವಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಾಜಿ ಸಂಸದರಾದ ಸಿ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ.ರಾಜಣ್ಣ, ಮಾಜಿ ಪುರಸಭಾ ಅಧ್ಯಕ್ಷರಾದ ಜಗನ್ನಾಥ, ಜಿಪಂ ಮಾಜಿ ಸದಸ್ಯರಾದ ಅಂನಂತಕುಮಾರಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

5 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

14 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

18 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago