ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ ದ್ವಾರದಲ್ಲೇ ಕಸದ ರಾಶಿ ಹಾಗೂ ದುರ್ವಾಸನೆ ಸಾರ್ವಜನಿಕರನ್ನು ಸ್ವಾಗತಿಸುವಂತಾಗಿದೆ. ಶಾಲೆ, ಅಂಗನವಾಡಿ, ದೇವಸ್ಥಾನ, ಅಂಗಡಿಗಳು ಹಾಗೂ ವಸತಿ ಪ್ರದೇಶದ ಸಮೀಪದಲ್ಲೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೇಶ ದ್ವಾರದಲ್ಲೇ ತ್ಯಾಜ್ಯವನ್ನು ಅಸಮರ್ಪಕವಾಗಿ ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಸದ ರಾಶಿಯಿಂದ ದುರ್ವಾಸನೆ ವ್ಯಾಪಿಸುತ್ತಿದ್ದು, ನೊಣ ಮತ್ತು ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ವ್ಯಕ್ತವಾಗಿದೆ.

ಅತ್ಯಂತ ಆತಂಕಕಾರಿ ಸಂಗತಿಯೆಂದರೆ, ಶಾಲೆ ಹಾಗೂ ಅಂಗನವಾಡಿ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ಮಕ್ಕಳು ಪ್ರತಿದಿನ ದುರ್ವಾಸನೆಯ ಮಧ್ಯೆಯೇ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧರು, ಮಹಿಳೆಯರು ಹಾಗೂ ರೋಗಿಗಳ ಆರೋಗ್ಯಕ್ಕೂ ಇದು ಗಂಭೀರ ಅಪಾಯವನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹೋಟೆಲ್‌ಗಳ ಆಹಾರ ತ್ಯಾಜ್ಯ ಹಾಗೂ ಮಾಂಸದಂಗಡಿಗಳ ತ್ಯಾಜ್ಯವನ್ನು ಇಲ್ಲಿ ಸುರಿಯಲಾಗುತ್ತಿರುವುದರಿಂದ ಬೀದಿ ನಾಯಿಗಳ ಕಾಟವೂ ಹೆಚ್ಚಾಗಿದೆ. ಕಸದ ರಾಶಿಯ ಸುತ್ತಮುತ್ತ ನಾಯಿಗಳು ಗುಂಪುಗೂಡುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ಆತಂಕದಲ್ಲೇ ಓಡಾಡುವಂತಾಗಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಗಾಯತ್ರಿ ಮಂಜುನಾಥ್ ಮಾತನಾಡಿ, ಕಸದ ಸಮಸ್ಯೆ ನಿವಾರಣೆಗೆ ಹಲವು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದೇವೆ. ಸಿಸಿಟಿವಿ ಅಳವಡಿಸಿ ಕಸ ಎಸೆಯುವವರಿಗೆ ದಂಡ ವಿಧಿಸುವಂತೆ ಕೂಡ ಒತ್ತಾಯಿಸಿದ್ದೇವೆ. ಆದರೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪಂಚಾಯಿತಿ ಸಿಬ್ಬಂದಿ ಪ್ರತಿದಿನ ಮನೆಮನೆಗೆ ತೆರಳಿ ಕಸ ಸಂಗ್ರಹಿಸಬೇಕು. ಆದರೆ ವಾರಕ್ಕೊಮ್ಮೆ ಮಾತ್ರ ಕಸ ಸಂಗ್ರಹಿಸುತ್ತಿದ್ದಾರೆ. ಇದರಿಂದ ಜನರು ಎಲ್ಲೆಂದರಲ್ಲಿ ಕಸ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಹಾಗೂ ಮೂರನೇ ವಾರ್ಡ್‌ಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹೆಚ್ಚಿದ್ದು, ಅವರಲ್ಲೂ ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಪಾಲನಜೋಗಿಹಳ್ಳಿಯ ಸ್ವಚ್ಛತೆಗೆ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಹೆಚ್ಚಿನ ಆದ್ಯತೆ ನೀಡಬೇಕು. ತ್ಯಾಜ್ಯ ವಿಲೇವಾರಿ ಸ್ಥಳವನ್ನು ತಕ್ಷಣ ಸ್ಥಳಾಂತರಿಸಿ, ಚರಂಡಿಗಳ ದುರಸ್ತಿ, ನಿಯಮಿತ ಕಸ ಸಂಗ್ರಹಣೆ ಹಾಗೂ ಸ್ವಚ್ಛತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago