ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ ದ್ವಾರದಲ್ಲೇ ಕಸದ ರಾಶಿ ಹಾಗೂ ದುರ್ವಾಸನೆ ಸಾರ್ವಜನಿಕರನ್ನು ಸ್ವಾಗತಿಸುವಂತಾಗಿದೆ. ಶಾಲೆ, ಅಂಗನವಾಡಿ, ದೇವಸ್ಥಾನ, ಅಂಗಡಿಗಳು ಹಾಗೂ ವಸತಿ ಪ್ರದೇಶದ ಸಮೀಪದಲ್ಲೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೇಶ ದ್ವಾರದಲ್ಲೇ ತ್ಯಾಜ್ಯವನ್ನು ಅಸಮರ್ಪಕವಾಗಿ ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಸದ ರಾಶಿಯಿಂದ ದುರ್ವಾಸನೆ ವ್ಯಾಪಿಸುತ್ತಿದ್ದು, ನೊಣ ಮತ್ತು ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ವ್ಯಕ್ತವಾಗಿದೆ.

ಅತ್ಯಂತ ಆತಂಕಕಾರಿ ಸಂಗತಿಯೆಂದರೆ, ಶಾಲೆ ಹಾಗೂ ಅಂಗನವಾಡಿ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ಮಕ್ಕಳು ಪ್ರತಿದಿನ ದುರ್ವಾಸನೆಯ ಮಧ್ಯೆಯೇ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧರು, ಮಹಿಳೆಯರು ಹಾಗೂ ರೋಗಿಗಳ ಆರೋಗ್ಯಕ್ಕೂ ಇದು ಗಂಭೀರ ಅಪಾಯವನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹೋಟೆಲ್‌ಗಳ ಆಹಾರ ತ್ಯಾಜ್ಯ ಹಾಗೂ ಮಾಂಸದಂಗಡಿಗಳ ತ್ಯಾಜ್ಯವನ್ನು ಇಲ್ಲಿ ಸುರಿಯಲಾಗುತ್ತಿರುವುದರಿಂದ ಬೀದಿ ನಾಯಿಗಳ ಕಾಟವೂ ಹೆಚ್ಚಾಗಿದೆ. ಕಸದ ರಾಶಿಯ ಸುತ್ತಮುತ್ತ ನಾಯಿಗಳು ಗುಂಪುಗೂಡುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ಆತಂಕದಲ್ಲೇ ಓಡಾಡುವಂತಾಗಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಗಾಯತ್ರಿ ಮಂಜುನಾಥ್ ಮಾತನಾಡಿ, ಕಸದ ಸಮಸ್ಯೆ ನಿವಾರಣೆಗೆ ಹಲವು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದೇವೆ. ಸಿಸಿಟಿವಿ ಅಳವಡಿಸಿ ಕಸ ಎಸೆಯುವವರಿಗೆ ದಂಡ ವಿಧಿಸುವಂತೆ ಕೂಡ ಒತ್ತಾಯಿಸಿದ್ದೇವೆ. ಆದರೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪಂಚಾಯಿತಿ ಸಿಬ್ಬಂದಿ ಪ್ರತಿದಿನ ಮನೆಮನೆಗೆ ತೆರಳಿ ಕಸ ಸಂಗ್ರಹಿಸಬೇಕು. ಆದರೆ ವಾರಕ್ಕೊಮ್ಮೆ ಮಾತ್ರ ಕಸ ಸಂಗ್ರಹಿಸುತ್ತಿದ್ದಾರೆ. ಇದರಿಂದ ಜನರು ಎಲ್ಲೆಂದರಲ್ಲಿ ಕಸ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಹಾಗೂ ಮೂರನೇ ವಾರ್ಡ್‌ಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹೆಚ್ಚಿದ್ದು, ಅವರಲ್ಲೂ ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಪಾಲನಜೋಗಿಹಳ್ಳಿಯ ಸ್ವಚ್ಛತೆಗೆ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಹೆಚ್ಚಿನ ಆದ್ಯತೆ ನೀಡಬೇಕು. ತ್ಯಾಜ್ಯ ವಿಲೇವಾರಿ ಸ್ಥಳವನ್ನು ತಕ್ಷಣ ಸ್ಥಳಾಂತರಿಸಿ, ಚರಂಡಿಗಳ ದುರಸ್ತಿ, ನಿಯಮಿತ ಕಸ ಸಂಗ್ರಹಣೆ ಹಾಗೂ ಸ್ವಚ್ಛತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago