ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

 

ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ ನಿರಂತರವಾಗಿ ಗೈರಾಗುತ್ತಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ.

6ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮನೆಮನೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಸ್ಥಿತಿ, ಶಾಲಾ ದಾಖಲಾತಿ ಹಾಗೂ ಶಾಲೆಗೆ ಗೈರಾಗುತ್ತಿರುವುದಕ್ಕೆ ಕಾರಣಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಹಲವು ಕಾರಣಗಳಿಂದ ಶಿಕ್ಷಣದಿಂದ ದೂರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 47 ಸಾವಿರಕ್ಕೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ದಾಖಲಾಗಿದ್ದಾರೆ. ಇದರೊಂದಿಗೆ ಸಾವಿರಾರು ಮಕ್ಕಳು ಖಾಸಗಿ ಶಾಲೆಗಳಲ್ಲೂ ವ್ಯಾಸಂಗ ಮಾಡುತ್ತಿದ್ದಾರೆ. ಆದರೂ ವಿವಿಧ ಕಾರಣಗಳಿಂದ ಯಾವುದೇ ಶಾಲೆಯಲ್ಲಿ ದಾಖಲಾಗದೆ ಉಳಿದಿರುವ ಮಕ್ಕಳೂ ಇದ್ದಾರೆ. ಆರ್ಥಿಕ ಸಮಸ್ಯೆ, ಪೋಷಕರ ವಲಸೆ, ಕುಟುಂಬದ ಪರಿಸ್ಥಿತಿ, ಸಾರಿಗೆ ಸೌಲಭ್ಯದ ಕೊರತೆ, ಬಾಲಕಾರ್ಮಿಕತೆ ಸೇರಿದಂತೆ ಹಲವು ಕಾರಣಗಳಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಕೇವಲ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸುವುದಕ್ಕೆ ಸೀಮಿತವಾಗದೆ, ಅವರ ಕುಟುಂಬದ ಸಮಸ್ಯೆಗಳನ್ನು ಅರಿತು ಅಗತ್ಯ ನೆರವು ಕಲ್ಪಿಸುವತ್ತಲೂ ಇಲಾಖೆ ಗಮನಹರಿಸಿದೆ.

ವಿಶೇಷವಾಗಿ ವಲಸೆ ಕಾರ್ಮಿಕರ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಸ್ಥಳಾಂತರದ ಕಾರಣದಿಂದ ಶಿಕ್ಷಣದಲ್ಲಿ ವ್ಯತ್ಯಯ ಉಂಟಾಗದಂತೆ ಮಕ್ಕಳನ್ನು ಸಮೀಪದ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ನಿರಂತರ ಗೈರಾಗುವ ಮಕ್ಕಳ ಮೇಲೂ ನಿಗಾ

ಶಾಲೆಗೆ ದಾಖಲಾಗಿದ್ದರೂ ನಿರಂತರವಾಗಿ ತರಗತಿಗಳಿಗೆ ಗೈರಾಗುತ್ತಿರುವ ಮಕ್ಕಳ ಬಗ್ಗೆಯೂ ಶಿಕ್ಷಣ ಇಲಾಖೆ ನಿಗಾ ವಹಿಸಿದೆ. ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಹಾಜರಾತಿ ವಿವರಗಳನ್ನು ಪರಿಶೀಲಿಸಿ, ಸತತವಾಗಿ ಗೈರಾಗುತ್ತಿರುವ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಮಕ್ಕಳು ಶಾಲೆಗೆ ಬಾರದಿರುವುದಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳಲು ಪೋಷಕರನ್ನು ಸಂಪರ್ಕಿಸಲಾಗುತ್ತಿದೆ. ಒಂದು ವಾರಕ್ಕೂ ಹೆಚ್ಚು ಕಾಲ ನಿರಂತರವಾಗಿ ಗೈರಾಗಿದ್ದು, ಪೋಷಕರಿಂದ ಸೂಕ್ತ ಮಾಹಿತಿ ದೊರೆಯದ ಸಂದರ್ಭದಲ್ಲಿ ಶಿಕ್ಷಕರು ಮನೆಗಳಿಗೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ಪರಿಶೀಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ಸ್ಯಾಟ್ಸ್‌ನಲ್ಲಿ ಬಾಕಿ ನೋಂದಣಿಗೆ ಕ್ರಮ

2026-27ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಶೈಕ್ಷಣಿಕ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿಯೆಗೂ ಆದ್ಯತೆ ನೀಡಲಾಗಿದೆ. ವಿವಿಧ ಕಾರಣಗಳಿಂದ ಸ್ಯಾಟ್ಸ್‌ನಲ್ಲಿ ನೋಂದಣಿಯಾಗದೆ ಉಳಿದಿರುವ ಮಕ್ಕಳ ಮಾಹಿತಿಯನ್ನು ಶಾಲಾ ಹಂತದಲ್ಲಿ ಪರಿಶೀಲಿಸಲಾಗುತ್ತಿದೆ.

ಅಂತಹ ಮಕ್ಕಳನ್ನು ಗುರುತಿಸಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಮಾಹಿತಿಯು ವ್ಯವಸ್ಥಿತವಾಗಿ ದಾಖಲಾಗುವುದರ ಜತೆಗೆ, ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿರುವ ಮಕ್ಕಳ ಮೇಲೂ ನಿಗಾ ವಹಿಸಲು ಅನುಕೂಲವಾಗಲಿದೆ.

ಗ್ರಾಪಂ ಮಟ್ಟದಲ್ಲೂ ಕಾರ್ಯಪಡೆ ಸಕ್ರಿಯವಾಗಲಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಕರೆತರುವ ಕಾರ್ಯದಲ್ಲಿ ಶಿಕ್ಷಣ ಇಲಾಖೆ ಮಾತ್ರವಲ್ಲದೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಿಕ್ಷಕರು, ಶಾಲಾ ಮುಖ್ಯಶಿಕ್ಷಕರು ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ.

ಗುರುತಿಸಲಾದ ಮಕ್ಕಳ ಪೋಷಕರಿಗೆ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಿ, ಮಕ್ಕಳ ವಯಸ್ಸಿಗೆ ಅನುಗುಣವಾದ ತರಗತಿಗೆ ದಾಖಲಿಸುವುದು, ಶಾಲೆಯಲ್ಲಿ ಅನುಕೂಲಕರ ವಾತಾವರಣ ಕಲ್ಪಿಸುವುದು ಹಾಗೂ ಮಕ್ಕಳು ಮತ್ತೆ ಶಾಲೆ ಬಿಡದಂತೆ ನಿರಂತರವಾಗಿ ಮೇಲ್ವಿಚಾರಣೆ ನಡೆಸುವುದು ಮುಖ್ಯವಾಗಿದೆ.

ಜುಲೈ ಅಂತ್ಯದವರೆಗೆ ನಡೆದ ದಾಖಲಾತಿ ಆಂದೋಲನದ ಬಳಿಕ ಇದೀಗ ಶಾಲೆಯಿಂದ ಹೊರಗುಳಿದ ಹಾಗೂ ನಿರಂತರ ಗೈರಾಗುತ್ತಿರುವ ಮಕ್ಕಳ ಪತ್ತೆಗೆ ಇಲಾಖೆ ಮುಂದಾಗಿರುವುದು, ಜಿಲ್ಲೆಯಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಮಕ್ಕಳ ದಾಖಲಾತಿಯನ್ನು ಸ್ಯಾಟ್ಸ್‌ನಲ್ಲಿ ನೋಂದಾಯಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶಾಲೆಯಿಂದ ದೂರ ಉಳಿದ ಮಕ್ಕಳ ಸಮೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಡಿಡಿಪಿಐ ರಮೇಶ್ ಹೇಳಿದ್ದಾರೆ.

 

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 days ago