ಶಾಸಕ ಮಾಡಾಳ್ ಪುತ್ರನ ಲಂಚಾವತಾರ; ಮುಖ್ಯಮಂತ್ರಿ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್‌ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು, ಜಾರ್ಜ್‌ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ.

ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ?

ರಾಜ್ಯ ಬಿಜೆಪಿ ಸರ್ಕಾರ ಅಡಿಯಿಂದ ಮುಡಿವರೆಗೆ 40% ಕಮಿಷನ್‌ನಲ್ಲಿ ಮುಳುಗಿದೆ ಎಂಬ ನಮ್ಮ ಆರೋಪಗಳಿಗೆ ದಾಖಲೆ ಕೇಳುತ್ತಿದ್ದ ಮುಖ್ಯಮಂತ್ರಿಗಳಿಗೆ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದ ದಾಖಲೆ ಸಾಕಲ್ಲವೇ?
ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆ, ಗೌರವವನ್ನಾದರೂ ಉಳಿಸಲಿ ಎಂದು ಒತ್ತಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್‌ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ?

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ.

ಮರ್‌ ಜಾ ಮೋದಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ ಎಂದು ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್‌ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ? ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತೆ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್‌,ಎಸ್‌,ಎಸ್‌ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ.

ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ?

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್‌ ಹಗರಣದ ಬಗ್ಗೆ ಮಾತನಾಡಿ ಸರ್‌ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ.

ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತೆ, ಗುತ್ತಿಗೆದಾರರ ಸುಲಿಗೆ ನಿಲ್ಲುತ್ತೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

8 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

21 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

24 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago