ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ಕುಮಟಾದ ವಾಹನದ ಮೇಲೆ ಸಿನಿಮೀಯ ರೀತಿ ದರೋಡೆ ಯತ್ನ!

ಕುಮಟಾ: ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ನಡೆದ ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧವನ್ನು ಕೈಯಲ್ಲಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಿದ್ದವೇ ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಸಮಾಧಾನದಲ್ಲಿ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದೆ.

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

ಪ್ರಯಾಣಿಕರಿಗೆ ಎಚ್ಚರಿಕೆ:

ಶಿರಡಿ, ಅಯೋಧ್ಯೆ ಸೇರಿದಂತೆ ಉತ್ತರ ಭಾರತಕ್ಕೆ ಪ್ರವಾಸ ಹೋಗುವವರು, ವಿಶೇಷವಾಗಿ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆ ಪ್ರಯಾಣಿಸುವಾಗ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ:

 * ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಿ.

 * ಅಪರಿಚಿತ ಸ್ಥಳಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಲ್ಲಿ ವಾಹನ ನಿಲ್ಲಿಸಬೇಡಿ.

 * ಯಾರಾದರೂ ಅಪಘಾತದ ನೆಪದಲ್ಲಿ ವಾಹನ ಅಡ್ಡಗಟ್ಟಿದರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

 * ಪ್ರಯಾಣದುದ್ದಕ್ಕೂ ವಾಹನದ ಬಾಗಿಲುಗಳನ್ನು ಲಾಕ್ ಮಾಡಿಕೊಳ್ಳಿ.

 * ಅನುಮಾನಾಸ್ಪದವಾಗಿ ಯಾರಾದರೂ ಹಿಂಬಾಲಿಸುತ್ತಿದ್ದರೆ, ವಾಹನದ ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago