ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.
‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ.
ಜನರ ಸಹನೆ ಎನ್ನುವುದು ಖಂಡಿತ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.
ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…