Categories: ರಾಜ್ಯ

‘ಷರತ್ತು ಸರ್ಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್’- ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಮೂದಲಿಕೆ

ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ.

ಜನರ ಸಹನೆ ಎನ್ನುವುದು ಖಂಡಿತ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

31 minutes ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

1 hour ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

3 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

9 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

11 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

13 hours ago