ವಾಹನ ಚಲಾಯಿಸುವವರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಪ್ರಯತ್ನಿಸಬೇಕು ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ ತಿಳಿಸಿದರು.
ನಗರದ ಕಾರ್ಮಲ್ ಜ್ಯೋತಿ ಶಾಲೆಯಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಸ್ತೆ ಸುರಕ್ಷತೆ ಬಗೆಗಿನ ಜಾಗೃತಿ ಕಾರ್ಯಕ್ರಮಗಳು ಒಂದೇ ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕೂಡ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರು ದ್ವಿಚಕ್ರ ವಾಹನ ಚಲಾಯಿಸುವ ವೇಳೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ಅದರಲ್ಲೂ ಐಎಸ್ಐ ಗುರುತು ಇರುವ ಹೆಲ್ಮೆಟ್ ಬಳಸಬೇಕು. ಇದರಿಂದ ಅಪಘಾತಗಳು ನಡೆದ ಸಂದರ್ಭದಲ್ಲಿ ರಕ್ಷಣೆ ಸಿಗುತ್ತದೆ. ಇನ್ನು ರಸ್ತೆಗಳಲ್ಲಿ ಅಳವಡಿಸಲಾಗುವ ಸೂಚನಾ ಸಿಗ್ನಲ್ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾಕಷ್ಟು ಸಾವು-ನೋವುಗಳು ಕಂಡುಬರುತ್ತಿವೆ. ಗಾಯಗಳಾದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿಯನ್ನು ಚಿಕಿತ್ಸೆಗಾಗಿ ಬಳಸಬೇಕಾ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಈ ಬಗ್ಗೆ ಸಾಕಷ್ಟು ಎಚ್ಚರವಹಿಸಬೇಕು. ಸಂಚಾರಿ ನಿಯಮಗಳು ಅದರ ಪಾಲನೆಗಾಗಿ ಮಕ್ಕಳು ಮನೆಗಳಲ್ಲಿ ತಮ್ಮ ಪೋಷಕರಿಗೆ ತಿಳಿಸಬೇಕು. ಈ ಮೂಲಕ ಮನೆಯಿಂದಲ್ಲೇ ಬದಲಾವಣೆ ಆರಂಭವಾಗಬೇಕು ಎಂದರು.
ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಸಂಚಾರಿ ನಿಯಮಗಳ ಪಾಲನೆಯೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖವಾಗಿದೆ.
ಈ ಬಗ್ಗೆ ಶಾಲಾ, ಕಾಲೇಜು ಹಂತಗಳಲ್ಲಿ ಜಾಗೃತಿ ಮೂಡಿಸುವುದರಿಂದ ಮಕ್ಕಳು ತಾವು ಕಲಿಯುವುದರೊಂದಿಗೆ ತಮ್ಮ ಮನೆ, ನೆರೆಹೊರೆಯವರಿಗೂ ತಿಳಿಸುವಂತೆ ಜಾಗೃತಿ ಮೂಡಿಸಬೇಕು. ವಾಹನ ಚಲಾವಣೆಯ ಸಂದರ್ಭದಲ್ಲಿ ವೇಗ ಮಿತಿ ಇರಬೇಕು. ಜತೆಗೆ ಹೆಲ್ಮೆಟ್, ಸೀಟ್ ಬೆಲ್ಟ್ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮಕ್ಕಳು ರಸ್ತೆಯಲ್ಲಿ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಬಗ್ಗೆ ಸಂಚಾರಿ ನಿಯಮಗಳ ಪಾಲಿಸುವಂತೆ ಮನವಿ ಮಾಡಲಾಯಿತು.
ಈ ವೇಳೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಆಯುಕ್ತರು ಅರುಣಾಮಾಲ್, ಸಹಾಯಕ ಜಿಲ್ಲಾ ಆಯುಕ್ತರು ವೆಂಕಟರಾಜು, ಜಿಲ್ಲಾ ಆಯೋಜಕ ಶಿವಕುಮಾರ್, ತಾಲೂಕು ಕಾರ್ಯದರ್ಶಿ ಆಂಜಿನಪ್ಪ , ತಾಲೂಕು ಖಜಾಂಜಿ ಜೈಕುಮಾರ್ , ಕಾರ್ಮಲ್ ಜ್ಯೋತಿ ಶಾಲೆಯ ಮುಖಂಡ ಅಪೂರ್ವ ಪ್ರಭಾಕರ್, ಈ ವೇಳೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ನ ವತ್ಸಲ, ನಗರಸಭಾ ಸದಸ್ಯೆ ವತ್ಸಲ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.