ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೇಲು ಕೀಳು ಇರಬಾರದು, ಬಡವ ಬಲ್ಲಿದ ಇರಬಾರದು, ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ, ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದರು.

ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ ಎಂದು ತಿಳಿಸಿದರು.

ಬಸವಾದಿ ಶರಣಗರು 800 ವರ್ಷಗಳ ಹಿಂದಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದರು.

ಪ್ರತಿಯೊಬ್ಬರಿಗೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕದರೆ ಮಾತ್ರ ಜಾತಿ ವ್ಯವಸ್ಥೆ ಹೋಗಬಹುದು. ಇದಕ್ಕಾಗಿಯೇ ಅರಸು ಅವರು ದಲಿತರ, ಮಹಿಳೆಯರ, ರೈತರ, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿದರು. ಮಲ ಹೊರುವ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದರು ಎಂದು ಹೇಳಿದರು.

ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ ಎಂದರು.

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ ಎಂದು ತಿಳಿಸಿದರು.

ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ ಎಂದರು.

ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ ಎಂದರು.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ತಿಳಿಸಿದರು.

ಕರ್ನಾಟಕ ಏಕೀಕರಣ 1956 ನವಂಬರ್‌ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್‌ 1 ರಂದು ಅನಾವರಣಗೊಳಿಸಲಾಗುವುದು ಎಂದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

14 hours ago