
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ ವಿನಯ್ ಗುರೂಜಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ವಿನಯ್ ಗುರೂಜಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ಸಮೃದ್ಧರಾಗಲಿ, ಬರಪೀಡಿತ ಪ್ರದೇಶಗಳಲ್ಲಿ ಮಳೆ ಸುರಿಯಲಿ ಎಂಬ ಸಂಕಲ್ಪದೊಂದಿಗೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದಿದ್ದೇವೆ. ಸುಬ್ರಹ್ಮಣ್ಯ ಎಂದರೆ ಶಕ್ತಿ. ಸ್ಕಂದನನ್ನು ಪ್ರಾರ್ಥಿಸಬೇಕು ಎಂಬ ಭಾವನೆ ಮೂಡಿದ ಕಾರಣ ಶರವಣ ಅವರೊಂದಿಗೆ ಈ ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ್ದೇವೆ. ರೈತರ ಸುಭಿಕ್ಷೆ ಹಾಗೂ ಲೋಕದ ಕಲ್ಯಾಣಕ್ಕಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ರೈತರನ್ನು ಕಡೆಗಣಿಸದೆ ಅವರೊಂದಿಗೆ ಕುಳಿತು ಮಾತುಕತೆ ನಡೆಸಬೇಕು. ಎಲ್ಲರ ಸಹಮತ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು. ಶಾಂತಿಯುತ ವಾತಾವರಣದಲ್ಲೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.