ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್

ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಸಮಸ್ಯೆ ತಲೆದೋರಬಹುದಾದ ಕೆಲವು ಪ್ರಮುಖ ಸ್ಥಳಗಳು, ಮೆಟ್ರೋ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಉಂಟಾಗಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಚನೆ, ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ನೀರು ಹರಿಯುವ ಕಾಲುವೆಯಲ್ಲಿ ಹೂಳು ತುಂಬಿತ್ತು. ಜಾಸ್ತಿ ಮಳೆ ಸುರಿದಾಗ ಕಾಲುವೆಯಿಂದ ನೀರು ಉಕ್ಕಿ ಮೇಲಕ್ಕೆ ಬರುತ್ತಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿ.ಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿ.ಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದರು.

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿ.ಮೀ ತೆರವು ಮಾಡಲು ಕ್ರಮ ತೆಗೆದುಕೊಂಡಿತ್ತು. ಅಧಿಕಾರಕ್ಕೆ ಬಂದ ತಕ್ಷಣವೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1,800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2,000 ಕೋಟಿ ರೂಪಾಯಿ ನೀಡಲಿದೆ. 12.15 ಕಿ.ಮೀ ಉದ್ದದ ರಾಜಕಾಲುವೆಗೆ ಸಂಬಂಧಿಸಿದ 12 ಪ್ರಕರಣಗಳು ಸಿವಿಲ್ ನ್ಯಾಯಾಲಯದಲ್ಲಿವೆ. ಸರ್ಕಾರದ ಪರ ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಚರಂಡಿಗಳು – ಕಾಲುವೆಗಳ ಹೂಳೆತ್ತಬೇಕು, ಒಣಗಿರುವ ಮರದ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದರು.

ಸಿಲ್ಕ್ ಬೋರ್ಡ್ ಬಳಿ ಬಿಎಂಆರ್‌ಸಿಎಲ್ ನವರು ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಿದರು.

ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂಬ ಕಾರಣಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದರು.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದೇನೆ.
ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ ಎಂದರು.

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಕೆಲವು ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು‌ ತಿಳಿಸಿದರು.

ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು, ಅದರಂತೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago