ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್

ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಸಮಸ್ಯೆ ತಲೆದೋರಬಹುದಾದ ಕೆಲವು ಪ್ರಮುಖ ಸ್ಥಳಗಳು, ಮೆಟ್ರೋ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಉಂಟಾಗಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಚನೆ, ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ನೀರು ಹರಿಯುವ ಕಾಲುವೆಯಲ್ಲಿ ಹೂಳು ತುಂಬಿತ್ತು. ಜಾಸ್ತಿ ಮಳೆ ಸುರಿದಾಗ ಕಾಲುವೆಯಿಂದ ನೀರು ಉಕ್ಕಿ ಮೇಲಕ್ಕೆ ಬರುತ್ತಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿ.ಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿ.ಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದರು.

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿ.ಮೀ ತೆರವು ಮಾಡಲು ಕ್ರಮ ತೆಗೆದುಕೊಂಡಿತ್ತು. ಅಧಿಕಾರಕ್ಕೆ ಬಂದ ತಕ್ಷಣವೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1,800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2,000 ಕೋಟಿ ರೂಪಾಯಿ ನೀಡಲಿದೆ. 12.15 ಕಿ.ಮೀ ಉದ್ದದ ರಾಜಕಾಲುವೆಗೆ ಸಂಬಂಧಿಸಿದ 12 ಪ್ರಕರಣಗಳು ಸಿವಿಲ್ ನ್ಯಾಯಾಲಯದಲ್ಲಿವೆ. ಸರ್ಕಾರದ ಪರ ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಚರಂಡಿಗಳು – ಕಾಲುವೆಗಳ ಹೂಳೆತ್ತಬೇಕು, ಒಣಗಿರುವ ಮರದ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದರು.

ಸಿಲ್ಕ್ ಬೋರ್ಡ್ ಬಳಿ ಬಿಎಂಆರ್‌ಸಿಎಲ್ ನವರು ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಿದರು.

ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂಬ ಕಾರಣಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದರು.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದೇನೆ.
ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ ಎಂದರು.

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಕೆಲವು ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು‌ ತಿಳಿಸಿದರು.

ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು, ಅದರಂತೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago