ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ವಿವರಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-07-2026 ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 04-07-2026 ಎಂದು ನಿಗದಿ ಪಡಿಸಲಾಗಿತ್ತು.  ತಾಂತ್ರಿಕ ಸಮಸ್ಯೆಗಳು, ಪ್ರಮಾಣ ಪತ್ರಗಳನ್ನು ಪಡೆಯಲು ವಿಳಂಬ ಹಾಗೂ ಇತರೆ ಅನೇಕ ಕಾರಣಗಳಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ಈಗಾಗಲೇ ಸಲ್ಲಿಸಿದ ಅರ್ಜಿಗಳಲ್ಲಿ ತಪ್ಪಾದ ಮಾಹಿತಿಗಳನ್ನು ನಮೂದಿಸಿದ ಹಿನ್ನಲೆಯಲ್ಲಿ, ಅರ್ಜಿಗಳಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡಬೇಕು ಎಂದು ಕೆಲವು ಅಭ್ಯರ್ಥಿಗಳು ಮನವಿ ಮಾಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಅಭ್ಯರ್ಥಿಗಳ ಅನುಕೂಲತೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇರುವ ಕೊನೆಯ ದಿನಾಂಕವನ್ನು 08 ಜುಲೈ, 2026ರ ಸಂಜೆ 4.00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು 09 ಜುಲೈ, 2026 ರಿಂದ 12 ಜುಲೈ, 2026 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ 596 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದಲ್ಲಿ ನೇಮಕಾತಿ ನಡೆಸಲಾಗುತ್ತಿದೆ. ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಈಗಾಗಲೇ 2,80,216 ಅರ್ಜಿಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದು ರಾಜ್ಯದ ಯುವಜನರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಉತ್ಸಾಹ ಹೆಚ್ಚಿರುವುದನ್ನು ಹಾಗೂ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಅವಕಾಶ ದೊರಕುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯುವಜನರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನೀಡಲಾಗಿರುವ ತಿದ್ದುಪಡಿ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಡೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಮರ್ಥ್ಯಯುತ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯದ ಎಲ್ಲ ಅರ್ಹ ಯುವಜನತೆಗೆ ಅವರ ಆಸಕ್ತಿ, ಪ್ರತಿಭೆ ಹಾಗೂ ಅರ್ಹತೆಗೆ ತಕ್ಕಂತೆ ಉದ್ಯೋಗ ದೊರಕಬೇಕು ಎನ್ನುವುದು ಗ್ಯಾರಂಟಿ ಸರ್ಕಾರದ ಆಶಯವಾಗಿದೆ ಎಂದರು.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

4 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

10 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

11 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago