ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ದಶಕಗಟ್ಟಲೇ ಕಾಯುವ/ವಿಳಂಬಕ್ಕೆ ಮುಕ್ತಿ ನೀಡಲು ದಿಟ್ಟ ಹೆಜ್ಜೆಯನ್ನಿಟ್ಟ ಸರ್ಕಾರ

ಸಿವಿಲ್ ಪ್ರಕರಣಗಳಲ್ಲಾಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅವರು ಅಂಕಿತ ಹಾಕದೇ ರಾಷ್ಟ್ರಪತಿಯವರಿಗೆ ರವಾನಿಸಿದ್ದರು. ಮೇ 19 ರಂದು ರಾಷ್ಟ್ರಪತಿಯವರು ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯ್ದೆ ಜಾರಿಗೆ ಬರಲಿದೆ. ಇನ್ನು ಮುಂದೆ ಸಿವಿಲ್ ಪ್ರಕರಣಗಳ ಇತ್ಯರ್ಥದಲ್ಲಿ ಕ್ರಾಂತಿಕಾರಕ ಪುರೋಗಾಮಿ ಬೆಳವಣಿಗೆಯಾಗಲಿದೆ ಎಂದರು.

ಹೊಸ ನಿಯಮಗಳ ಪ್ರಕಾರ ಸಿವಿಲ್ ಪ್ರಕರಣಗಳಿಗೆ ಆರಂಭದಲ್ಲಿ 2 ತಿಂಗಳ ಕಾಲ ಸಂಧಾನಕ್ಕೆ ಅವಕಾಶ ನೀಡಲಾಗುವುದು. ಅದು ಯಶಸ್ವಿಯಾಗದೇ ಅನಿವಾರ್ಯವಾಗಿ ಪ್ರಕರಣ ದಾಖಲಾದರೆ ಆ ದಿನವೇ ಪ್ರಕರಣದ ವಿಚಾರಣೆ, ಸಾಕ್ಷ್ಯಗಳ ಹಾಜರಿ, ತೀರ್ಪು ಪ್ರಕಟಿಸುವ ದಿನಾಂಕ ಸೇರಿದಂತೆ ಎಲ್ಲದಕ್ಕೂ ವೇಳಾಪಟ್ಟಿ ನಿಗದಿಯಾಗಬೇಕು. ಪ್ರಕರಣ ಇತ್ಯರ್ಥಕ್ಕೆ ಗರಿಷ್ಠ 24 ತಿಂಗಳ ಅವಧಿ ನಿಗದಿಯಾಗಿರುತ್ತದೆ ಎಂದು ಹೇಳಿದರು.

ಒಂದು ವೇಳೆ ಪ್ರತಿವಾದಿ ಸಹಕಾರ ನೀಡದೇ ಇದ್ದರೆ ಅಂತಹ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ನ್ಯಾಯಾಲಯದ ಬಲವನ್ನು ಈ ಕಾಯ್ದೆ ಹೆಚ್ಚಿಸುತ್ತದೆ. ಲಿಖಿತ ಹೇಳಿಕೆ ದಾಖಲಿಸಲು 120 ದಿನಗಳ ಕಾಲಾವಕಾಶವನ್ನು ನೀಡಲಾಗುತ್ತದೆ. ಆ ಅವಧಿಯ ಒಳಗೆ ಲಿಖಿತ ಹೇಳಿಕೆ ದಾಖಲಿಸಲು ಸಹಕರಿಸದಿದ್ದರೆ ಅನಂತರ ಬರುವ ಹೇಳಿಕೆಯನ್ನು ನಿರಾಕರಿಸುವ ಅಧಿಕಾರ ನ್ಯಾಯಾಲಯಕ್ಕಿದೆ. ಈ ಮೂಲಕ ಪ್ರಕರಣಗಳ ನಿರ್ವಹಣೆಯ ವ್ಯವಸ್ಥೆಯನ್ನು ಸಂಪೂರ್ಣ ಪುನ‌ರ್ ವ್ಯಾಖ್ಯಾನ ಮಾಡಲಾಗಿದೆ ಎಂದರು.

ರಾಜ್ಯದ ಕೆಳಹಂತದ ನ್ಯಾಯಾಲಯದಲ್ಲಿ 2023 ರ ವೇಳೆಗೆ 9,37,238 ಪ್ರಕರಣಗಳು ಬಾಕಿ ಇವೆ. ಒಟ್ಟಾರೆ 30.49 ಲಕ್ಷ ಸಿವಿಲ್ ಪ್ರಕರಣಗಳು ಬೇರೆಬೇರೆ ಹಂತದಲ್ಲಿ ಬಾಕಿ ಉಳಿದಿವೆ ಎಂದು ವಿವರಿಸಿದರು.

ಶ್ರೀಸಾಮಾನ್ಯರಿಗೆ ನ್ಯಾಯ ವಿಳಂಬದ ದ್ರೋಹವಾಗುತ್ತಿದೆ. ಇದನ್ನು ತಡೆಯುವುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿ ವಿಧಾನಮಂಡಲದಲ್ಲಿ ಸಿವಿಲ್ ಪ್ರಕ್ರಿಯಾ ಸಂಹಿತೆಗೆ ತಿದ್ದುಪಡಿ ತರುವ ಕ್ರಾಂತಿಕಾರಕ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಇದಕ್ಕೆ ಶಾಸಕಾಂಗ ಸಂಪೂರ್ಣ ಸಹಕಾರ ನೀಡಿದೆ. ನ್ಯಾಯಾಂಗವೂ ಸಹಕಾರ ನೀಡಿ ಕಾಯ್ದೆಯ ಉದ್ದೇಶ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಸಿವಿಲ್‌ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಕೊರತೆಗೂ ಈ ಮಸೂದೆಯ ಜಾರಿಗೂ ಸಂಬಂಧ ಇಲ್ಲ. ನಮ್ಮ ಸರ್ಕಾರ ನೂರಕ್ಕೂ ಹೆಚ್ಚು ಗ್ರಾಮ ನ್ಯಾಯಾಲಯವನ್ನು ಆರಂಭಿಸಿದೆ. 158 ನ್ಯಾಯಾಧೀಶರ 5 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ ಎಂದು ಅವರು ವಿವರಿಸಿದರು.

ಕಾಯ್ದೆಯ ಸಮರ್ಥ ಜಾರಿಯಿಂದ ಶ್ರೀಸಾಮಾನ್ಯ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸುವ ಜೊತೆಗೆ ಆರ್ಥಿಕ ಉಳಿತಾಯಕ್ಕೂ ಅನುಕೂಲವಾಗಲಿದೆ ಎಂದರು.

ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ. ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿ ಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

6 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 day ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago