Categories: ಲೇಖನ

ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ…..

ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ, ಕಷ್ಟದಿಂದ ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಗೋಳಾಡುತ್ತಿದ್ದಾರೆ……

ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಈಗ
ಎಂ ಎಲ್ ಸಿ ಯಾಗಿ ಮುಂದೆ ತನ್ನ ತಂದೆಯ ನಂತರ ರಾಜ್ಯದಲ್ಲಿ ಮಂತ್ರಿಯಾಗಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ…..

ಒಂದು ಕಡೆ ದಾವಣಗೆರೆಯ ಹಣ್ಣಿನ ಅಂಗಡಿಯ ಇಬ್ರಾಹಿಂ ಅವರ ಮಗ ನಿನ್ನೆ ನಡೆದ ಗಣೇಶ ಉತ್ಸವದ ಗಲಾಟೆಯ ಸಂದರ್ಭದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಈಗ ಜೈಲು ಸೇರಿದ್ದಾನೆ. ಅವನ ಬಿಡುಗಡೆಗಾಗಿ ಅವರ ತಂದೆ ಇಬ್ರಾಹಿಂ ಕಣ್ಣೀರು ಸುರಿಸುತ್ತಾ ಓಡಾಡುತ್ತಿದ್ದಾರೆ…….

ಮತ್ತೊಂದು ಕಡೆ ಕರ್ನಾಟಕ ಸರ್ಕಾರದ ಮಂತ್ರಿಗಳು ಹಾಗೂ ಮುಸ್ಲಿಂ ಸಮುದಾಯದ ನಾಯಕರು ಆದ ಜಮೀರ್ ಅಹ್ಮದ್ ಅವರ ಪುತ್ರ ಹಿಂದೆ ಒಂದು ಸಿನಿಮಾದಲ್ಲಿ ಅಭಿನಯ ಮಾಡಿ ಈಗ ನಾಯಕನಾಗಿ ಮತ್ತೊಂದು ದೊಡ್ಡ ಬಜೆಟ್ಟಿನ ಸಿನಿಮಾ ಮಾಡಲು ಸಿದ್ಧತೆಯಲ್ಲಿ ತೊಡಗಿ ಅದಕ್ಕಾಗಿ ತುಂಬಾ ಶ್ರಮವಹಿಸುತ್ತಿದ್ದಾರೆ…….

ಒಂದು ಕಡೆ ನಾಗಮಂಗಲದ ರೈತರಾದ ಕೃಷ್ಣಪ್ಪರನವರ ಮಗ ಅದೇ ಗಣೇಶನ ಮೆರವಣಿಗೆಯಲ್ಲಿ ಭಾಗವಹಿಸಿ ಆರೋಪಿಯಾಗಿ ಜೈಲು ಸೇರಿದ್ದಾನೆ. ಕೃಷ್ಣಪ್ಪನವರು ಅದೇ ಕೊರಗಿನಲ್ಲಿ ಹಾಸಿಗೆ ಹಿಡಿದಿದ್ದಾರೆ. ಅವರ ಬಂಧುಗಳು ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ……

ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿಗಳು ಮತ್ತು ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ತಮ್ಮ ಪಕ್ಷದ ಗೆಲುವಿಗಾಗಿ, ಮುಂದೆ ತಮ್ಮ ಪಕ್ಷವನ್ನು ರಾಜ್ಯಾದ್ಯಂತ ಬೆಳೆಸುವ ನಿಟ್ಟಿನಲ್ಲಿ ಅದರ ಅಧ್ಯಕ್ಷರಾಗಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ….

ಒಂದು ಕಡೆ ದಾವಣಗೆರೆಯ ಬಟ್ಟೆ ಅಂಗಡಿ ಕಲೀಲ್ ಸಾಬರ ಮಗ ಮತ್ತೆ ಅದೇ ಗಣೇಶೋತ್ಸವದ ಗಲಾಟೆಯ ಆರೋಪದಲ್ಲಿ ಜೈಲು ಪಾಲಾಗಿದ್ದಾನೆ. ಖಲೀಲ್ ಸಾಬರು ಇದ್ದ ಒಂದಷ್ಟು ಹಣ ಕೂಡಿಸಿ ಸಾಲ ಮಾಡಿ ಮಗನನ್ನು ಬಿಡಿಸಿಕೊಳ್ಳಲು ವಕೀಲರ ಮನೆ ಬಾಗಿಲು ಸುತ್ತುತ್ತಿದ್ದಾರೆ…..

ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಮಗ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ಮುಂದೆ ಪಕ್ಷವನ್ನು ಅಧಿಕಾರಕ್ಕೆ ತಂದು ತಾವೇ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಸಾಕಷ್ಟು ಶ್ರಮ ಪಡುತ್ತಿದ್ದಾರೆ……

ಒಂದು ಕಡೆ ನಾಗಮಂಗಲದ ಬಿಇ ಓದಿದ್ದ ಕೆಂಚೇಗೌಡರ ಮಗ ಈ ಗಲಭೆಯಲ್ಲಿ ಆರೋಪಿಯಾಗಿ ಜೈಲಿಗೆ ಸೇರಿದ್ದಾನೆ. ಅವನನ್ನು ವಿದೇಶದಲ್ಲಿ ಓದಿಸಬೇಕೆಂದು ಕನಸುಕಂಡಿದ್ದ ಕೆಂಚೇಗೌಡರು ಅವನ ಮುಂದಿನ ಭವಿಷ್ಯ, ಪಾಸ್ ಪೋರ್ಟ್, ವೀಸಾಗೆ ಈ ಬಂಧನ ಎಷ್ಟರಮಟ್ಟಿಗೆ ತೊಂದರೆ ಕೊಡಬಹುದು ಎಂಬ ಚಿಂತೆಯಲ್ಲಿ ಕೊರಗುತ್ತಿದ್ದಾರೆ……

ಮತ್ತೊಂದು ಕಡೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಗಳು ಒಂದು ಬೃಹತ್ ಉದ್ದಿಮೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ, ಅದನ್ನು ಇನ್ನೂ ದೇಶ ವಿದೇಶಗಳಲ್ಲಿ ಬೆಳೆಸಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ…..

ಈ ಎಲ್ಲಾ ಹೆಸರುಗಳು ಕೇವಲ ಸಾಂಕೇತಿಕ. ನಿಮ್ಮ ಮನಸ್ಸಿನಲ್ಲಿ ಸುಳಿದಾಡುವ ಯಾವುದೇ ರಾಜಕಾರಣಿ ಅಥವಾ ಪತ್ರಕರ್ತರು ಅಥವಾ ಧಾರ್ಮಿಕ ಮುಖಂಡರು ಅಥವಾ ದೊಡ್ಡ ಹುದ್ದೆಯ ಅಧಿಕಾರಿಗಳು ಅಥವಾ ಸಿನಿಮಾ ನಟರು ಅಥವಾ ವಿಜ್ಞಾನಿಗಳು ಅಥವಾ ಸಾಹಿತಿಗಳು ಅಥವಾ ಯಾರೇ ಆಗಿರಲಿ ದೊಡ್ಡವರ ಮಕ್ಕಳು ಎಂದಿಗೂ ಕಲ್ಲು ಎಸೆಯುವುದಿಲ್ಲ. ಮಚ್ಚು ಹಿಡಿದು ಹೊಡೆದಾಡುವುದಿಲ್ಲ. ಈ ರೀತಿಯ ಉತ್ಸವಗಳ ಗಲಭೆಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಬಡವರು, ಮಧ್ಯಮ ವರ್ಗದವರು ಹುಚ್ಚು ಹಿಡಿದವರಂತೆ, ಅಜ್ಞಾನದಿಂದ, ತಮ್ಮ ಧರ್ಮಗಳ, ದೇವರುಗಳ ರಕ್ಷಣೆ ಮಾಡುತ್ತೇವೆ ಎನ್ನುವ ಭ್ರಮೆಗೆ ಒಳಗಾಗಿ ಜೈಲು ಪಾಲಾಗುತ್ತಿರುವುದು ನಮ್ಮ ಕಣ್ಣ ಮುಂದೆ ನಡೆಯುತ್ತಿದೆ……

ಅಷ್ಟು ದೊಡ್ಡ ದೊಡ್ಡ ಮಾತನಾಡುವ ಎರಡೂ ಕಡೆಯ ಧರ್ಮ ರಕ್ಷಕರು ತಮ್ಮ ಮಕ್ಕಳನ್ನು ಹೊಡೆದಾಟಗಳಿಗೆ ಕಳುಹಿಸಲಿ ನೋಡೋಣ. ಅನೇಕ ಮೇಲ್ವರ್ಗದ ಜನ ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸಿ ಅಲ್ಲಿಯೇ ವಾಸಿಸುವಂತೆ ಮಾಡಿ ಈಗ ಇಲ್ಲಿ ಧರ್ಮ ರಕ್ಷಣೆಗೆ ಬಡ ಮತ್ತು ಮಧ್ಯಮ ವರ್ಗದ ಜನರನ್ನ ಉಪಯೋಗಿಸಿಕೊಂಡು ರೊಚ್ಚಿಗೆಬ್ಬಿಸಿ ಅವರನ್ನು ಜೈಲು ಪಾಲು ಮಾಡುತ್ತಿದ್ದಾರೆ……

ಈಗ ಯೋಚಿಸುವ ಸರದಿ ನಮ್ಮದು. ಇದೆಲ್ಲವೂ ಬೇಕೆ. ಒಮ್ಮೆ ಆರೋಪಿಯಾಗಿ ಕೋರ್ಟ್ ಕಟಕಟೆ ಹತ್ತಿ ಅಲ್ಲಿಂದ ಜೈಲು ಸೇರಿದ ಮೇಲೆ ನಮ್ಮ ಜೀವನದಲ್ಲಿ ಆ ದಾಖಲೆ ಶಾಶ್ವತವಾಗಿ ಉಳಿದುಬಿಡುತ್ತದೆ. ಯಾವುದೇ ಪಾಸ್ ಪೋರ್ಟ್, ವೀಸಾ ಅಥವಾ ಸರ್ಕಾರಿ ನೌಕರಿ ಪಡೆಯಬೇಕೆಂದಾಗ ಈ ಒಂದು ವಿಷಯ ಸದಾ ಅಡ್ಡಿಪಡಿಸುತ್ತದೆ. ಆಗ ಯಾವ ದೇವರು, ಧರ್ಮವು, ರಾಜಕೀಯ ನಾಯಕರು, ಧಾರ್ಮಿಕ ನಾಯಕರು ನಮ್ಮ ರಕ್ಷಣೆಗೆ ಬರುವುದಿಲ್ಲ. ಇದನ್ನು ಗಂಭೀರವಾಗಿ ಯೋಚಿಸಿ…..

ಧರ್ಮ ರಕ್ಷಣೆ ಮಾಡಲು, ಹೊಡೆದಾಡಲು ಸಿ ಟಿ ರವಿ, ಸಂತೋಷ್ ಲಾಡ್, ಆರ್. ಅಶೋಕ್, ಪ್ರತಾಪ್ ಸಿಂಹ, ದಿನೇಶ್ ಗುಂಡೂರಾವ್ ಮುಂತಾದ ಯಾರು ಬರುವುದಿಲ್ಲ. ಈಶ್ವರ್ ಕಂಡ್ರೆ ಅವರ ಮಗ, ಸತೀಶ್ ಜಾರಕಿಹೊಳಿ ಅವರ ಮಗಳು, ಮೈಸೂರಿನ ಮಹಾರಾಜ, ಯಡಿಯೂರಪ್ಪನವರ ಇನ್ನೊಬ್ಬ ಮಗ, ಕುಮಾರಸ್ವಾಮಿಯವರ ಪತ್ನಿ ಇಂತಹವರೇ ಎಂಎಲ್ಎ ಎಂಪಿಗಳಾಗುತ್ತಾರೆ. ಇವರು ಬಂದು ಹೊಡೆದಾಡಲಿ ನೋಡೋಣ…..

ದಯವಿಟ್ಟು ಮತ್ತೆ ಮತ್ತೆ ಅರ್ಥ ಮಾಡಿಕೊಳ್ಳಿ. ರಾಜಕಾರಣಿಗಳೇ ಗಲಭೆ ಮಾಡಿಕೊಳ್ಳಲಿ. ನಾವು ನಮ್ಮ ನಮ್ಮ ಹಂತದಲ್ಲಿ ಪ್ರೀತಿ, ಸೌಹಾರ್ದತೆ, ಸಮನ್ವಯ ಮಾಡಿಕೊಂಡು ಬಾಂಧವ್ಯ ಬೆಸೆದು ನೆಮ್ಮದಿಯಾಗಿರೋಣ. ಪ್ರತಿ ಗಣೇಶ ಹಬ್ಬದಲ್ಲೋ ಅಥವಾ ಈದ್ ಮಿಲಾದ್, ರಂಜಾನ್ ಬಕ್ರೀದ್ ಸಂದರ್ಭದಲ್ಲಿ ಈ ರೀತಿ ಒಬ್ಬರಿಗೊಬ್ಬರು ಹೊಡೆದಾಟ ಮಾಡಿಕೊಂಡು ಬಡವರೇ ಜೈಲು ಪಾಲಾಗುವ ಈ ವ್ಯವಸ್ಥೆಯನ್ನು ಇನ್ನು ಮುಂದಾದರು ತಡೆಯೋಣ…..

ಅಧಿಕಾರ ಅನುಭವಿಸುವವರು, ಧರ್ಮದ, ಜಾತಿಯ ಹೆಸರೇಳಿ ಉನ್ನತ ಸ್ಥಾನ ಪಡೆಯುವವರು ಬೇಕಾದರೆ ಹೊಡೆದಾಡಿಕೊಳ್ಳಲಿ. ನಮಗ್ಯಾಕೆ ಆ ಚಿಂತೆ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

7 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

7 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

8 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

13 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

19 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago