“ಸ್ವಾತಂತ್ರ್ಯ ದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ”- ಪಿಎಂ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ Narendra Modi ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನ ವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ನರೇಂದ್ರ ಮೋದಿ ಅವರು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವತಂತ್ರ ಭಾರತದಲ್ಲಿ ಬಿಜೆಪಿ Bharatiya Janata Party (BJP) ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆರ್ ಎಸ್ ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್ ಎಸ್ ಎಸ್ ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನವೂ ರಾಷ್ಟ್ರ ಧ್ವಜದ ಧ್ವಜಾರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್ ಎಸ್ ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ. ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್ ಎಸ್ ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್ ಎಸ್ ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಆರ್ ಎಸ್ ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್ ಎಸ್ ಎಸ್,  ಇಂದಿನ ವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ  ತೊಡಗಿರುವ ಸಂಘಟನೆಯಾಗಿದೆ ಎಂದಿದ್ದಾರೆ.

ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್ ಎಸ್ ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ. ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್ ಎಸ್ ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

6 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

15 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago