ಸ್ವಾತಂತ್ರ್ಯ ಹೋರಾಟಗಾರರು ಸರಳತೆ, ಸಜ್ಜನಿಕೆ, ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ರೂಢಿಸಿಕೊಂಡಿದ್ದರು. ಆದರ್ಶವಾದ ಜೀವನಶೈಲಿ ಹೊಂದಿದ್ದ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಎಂದಿಗೂ ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.
ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಷಯ ಕುರಿತು ಮಾತನಾಡಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಸಿದ್ದಲಿಂಗಯ್ಯ, ಎಚ್.ಮುಗುವಾಳಪ್ಪ, ರುಮಾಲೆ ಚನ್ನಬಸವಯ್ಯ, ರುಮಾಲೆ ಭದ್ರಣ್ಣ, ನಾ.ನಂಜುಂಡಯ್ಯ, ದಾನಪ್ಪ ಮುಂತಾದವರು ರಾಜ್ಯಮಟ್ಟದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಶಿವಪುರದ ಧ್ವಜ ಸತ್ಯಾಗ್ರಹ, ವಿಧುರಾಶ್ವತ್ಥ ಹತ್ಯಾಕಾಂಡ ಸೇರಿದಂತೆ ಹಲವು ಹೋರಾಟದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಸುಭಾಷ್ ಚಂದ್ರ ಬೋಸ್ ಅವರು ಬೆಂಬಲ ನೀಡಿದ್ದರು. ನಂದಿಬೆಟ್ಟಕ್ಕೆ ವಿಶ್ರಾಂತಿಗಾಗಿ ಬಂದಿದ್ದ ಮಹಾತ್ಮಗಾಂಧಿ ಮತ್ತು ಸರ್ದಾರ್ ವಲ್ಲಭಾಯ್ ಪಟೇಲ್ ಅವರನ್ನು ದೊಡ್ಡಬಳ್ಳಾಪುರಕ್ಕೆ ಕರೆತಂದಿದ್ದರು. ಮಹಾತ್ಮಗಾಂಧಿಯವರು ದೊಡ್ಡಬಳ್ಳಾಪುರಕ್ಕೆ ಬಂದು ಸಭೆ ನಡೆಸಿದ ಸ್ಥಳವನ್ನು ಗಾಂಧಿನಗರವೆಂದು ಹೆಸರಿಡಲಾಗಿದೆ. ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ನಾವು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ನಮ್ಮೂರಿನ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು. ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಹಿರಿಯರನ್ನು ಸ್ಮರಿಸಬೇಕು ಎಂದರು.
ಕನ್ನಡ ಮನಸ್ಸುಗಳು ಮತ್ತು ಅಮೃತಹಸ್ತ ಸಂಘಟನೆಯ ಚೈತ್ರ ಮಾತನಾಡಿ, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹೆಮ್ಮೆ, ಪ್ರತಿಷ್ಠೆ, ಗೌರವ ಮತ್ತು ಹೆಮ್ಮೆಯನ್ನು ಯಾವಾಗಲೂ ಕಾಪಾಡಿಕೊಳ್ಳಬೇಕು. ಭಾರತದ ತ್ರಿವರ್ಣ ಧ್ವಜವು ಭಾರತದ ಹೆಮ್ಮೆಯಾಗಿದೆ. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು. ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆ ಪಡೆದುಕೊಳ್ಳಬೇಕು ಎಂದರು.
ಕಾರ್ಯ ಕ್ರಮದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಎಲ್.ಅನ್ನಪೂರ್ಣ, ಎಂ.ಮೃದುಲ, ಡಿ.ಜಿ.ಮನಸ್ವಿನಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.
ಸಮಾರಂಭದಲ್ಲಿ ಶ್ರೀ ವಿದ್ಯಾ ಜಾಗೃತಿ ಟ್ರಸ್ಟ್ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್, ಸಿಇಒ ಬಿ.ಪಿ.ಪ್ರಿಯಾಂಕ, ಕನ್ನಡ ಮನಸ್ಸುಗಳು ಮತ್ತು ಅಮೃತಹಸ್ತ ಸಂಘಟನೆಯ ಜಗದೀಶ್, ಎಂಎಬಿಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ.ನಿರ್ಮಲ, ಸ್ವಾಮಿವಿವೇಕಾನಂದ ಶಾಲೆಯ ಮುಖ್ಯಶಿಕ್ಷಕರಾದ ವೆಂಕಟಲಕ್ಷ್ಮಮ್ಮ, ಗ್ರಾಯಿತ್ರಿದೇವಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ತೂಬಗೆರೆ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಉದಯ ಆರಾಧ್ಯ, ಪುಟ್ಟಸಿದ್ದಪ್ಪ ಎಂಎಬಿಎಲ್ ಮತ್ತು ಸ್ವಾಮಿವಿವೇಕಾನಂದ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.