ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿಯ ಐವಿಸಿ ರಸ್ತೆ ಬಳಿ ಸಂಭವಿಸಿದೆ.
ಮೂಲತಃ ಗುಡಿಬಂಡೆ ತಾಲುಕಿನ ಚಿಕ್ಕತಮ್ಮನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಪುತ್ರಿ ದೀಪಿಕಾ (16) ಎಂಬ ಪ್ರಥಮ ಪಿಯು ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಮೃತಪಟ್ಟಿರುವಾಕೆ.
ಮೃತ ದೀಪಿಕಾ ತನ್ನ ತಂದೆಯ ಮರಣದ ಬಳಿಕ ತಾಯಿಯ ತವರು ಮನೆಯಾದ ತಾಲೂಕಿನ ಉಗನವಾಡಿ ಗ್ರಾಮದಲ್ಲಿ ತಾಯಿ ಮತ್ತು ತಾತನ ಜೊತೆ ವಾಸವಿದ್ದು, ಪ್ರತಿ ದಿನ ಆಕಾಶ್ ಪಿಯು ಕಾಲೇಜಿಗೆ ಗ್ರಾಮದಿಂದ ಡಾಬ ಗೇಟ್ ಬಳಿಗೆ ತಾತನ ಜೊತೆ ದ್ವಿಚಕ್ರವಾಹನದಲ್ಲಿ ಡ್ರಾಪ್ ಮಾಡಿಸಿಕೊಂಡು ನಂತರ ಬಸ್ನಲ್ಲಿ ಹೋಗಿಬರುತ್ತಿದ್ದಳು.
ಎಂದಿನಂತೆ ತಾತ ರಮೇಶ್ ಮೊಮ್ಮಗಳನ್ನು ಮಂಗಳವಾರ ಬೆಳಿಗ್ಗೆ ಗೇಟ್ ಬಳಿ ಬಿಟ್ಟು ಬಸ್ಸಿಗೆ ಹತ್ತಿಸಿ ಹೋಗಿದ್ದರು. ಆಕೆ ಮತ್ತೆ ಮಧ್ಯಾಹ್ನ ಕಾಲೇಜಿನಿಂದ ಬರುವಾಗ ಹಳಿ ದಾಟಲು ಯೋಗ್ಯವಲ್ಲದ ಕಡೆ ರೈಲು ಹಳಿ ದಾಟಲು ಯತ್ನಿಸಿದಾಗ ಚಿಕ್ಕಬಳ್ಳಾಪುರ ಬೆಂಗಳೂರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ದೇವನಹಳ್ಳಿ ಪೊಲೀಸರ ಜೊತೆ ಬಯಪನಹಳ್ಳಿ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಫ್ಲೈಓವರ್ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ
ಘಟನೆ ನಡೆದ ಐವಿಸಿ ರಸ್ತೆ ಮೂಲಕ ಹತ್ತಾರು ಗ್ರಾಮಗಳ ಜನರು ಸಂಚಾರ ನಡೆಸುತ್ತಾರೆ. ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬಳಿ ನಿರ್ಮಿಸಿರುವ ರೈಲ್ವೆ ಅಂಡರ್ಪಾಸ್ ಅವೈಜ್ಞಾನಿಕವಾಗಿದ್ದು, ಹಿಂದಿನ ರೈಲ್ವೆ ದಾಟುವ ಮಾರ್ಗವನ್ನು ಮುಚ್ಚಿರುವುದರಿಂದ ಜನರು ಅನಿವಾರ್ಯವಾಗಿ ಹಳಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಟಿ. ಹೊಸಹಳ್ಳಿ ಗ್ರಾಮದ ಸಂತೋಷ್, ಇದೇ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನನ್ನ 11 ವರ್ಷದ ಮಗ ಸಂಜಯ್ ಕೂಡ ರೈಲು ಅಪಘಾತದಲ್ಲಿ ಮೃತಪಟ್ಟಿದ್ದ. ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ, ಕೇಂದ್ರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದೇಶವಾಗಿದೆ ಎನ್ನಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗದೆ ಇನ್ನೂ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಇಂತಹ ದುರಂತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…