ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *