ಹಿಂದುಳಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚು ಗಮನ ಹರಿಸಬೇಕು-ದಯಾನಂದಪುರಿ ಸ್ವಾಮೀಜಿ

ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಉನ್ನತ ಹಂತದ ಹುದ್ದೆಗಳನ್ನು ಹೊಂದುವ ಮಹತ್ವಾಕಾಂಕ್ಷೆಯನ್ನು ಹೊಂದಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿ ಪೀಠಾಧ್ಯಕ್ಷ ದಯಾನಂದಪುರಿ ಸ್ವಾಮೀಜಿ ಹೇಳಿದರು.

ಇಲ್ಲಿನ ಪಿಸಿವಿ ಚಾರಿಟಬಲ್ ಟ್ರಸ್ಟ್‌ನ ನೇತೃತ್ವದಲ್ಲಿ ನಡೆದ 2024ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಕಾಲೀನ ಕಾಲಘಟ್ಟದಲ್ಲಿ ತಾಂತ್ರಿಕ ಜ್ಞಾನ ಮತ್ತು ಕೌಶಲವನ್ನು ಉತ್ತೇಜಿಸುವ ಕೆಲಸ ಆಗಬೇಕು. ಸಾಧನೆ ನಿಂತ ನೀರಾಗಬಾರದು. ಅದು ಹರಿಯುವ ನದಿಯಂತೆ ನಿರಂತರತೆಯನ್ನು ಕಾಯ್ದುಕೊಳ್ಳಬೇಕು. ದೇವಾಂಗ ಸಮುದಾಯದ ಶೈಕ್ಷಣಿಕ ಸಬಲೀಕರಣಕ್ಕೆ ಪೂರಕವಾಗಿ ಉನ್ನತ ಸ್ತರಗಳಲ್ಲಿ ತಮ್ಮ ಅಸ್ತಿತ್ವವನ್ನು ಪ್ರತಿಪಾದಿಸುವುದು ಅಗತ್ಯ ಎಂದರು.

ಪುಷ್ಪಾಂಡಜಮುನಿ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ಸಾಧನೆ ಎಂದಿಗೂ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಾಗುವುದಿಲ್ಲ. ಪರಿಶ್ರಮ, ಆಸಕ್ತಿ ಮತ್ತು ಅದಕ್ಕೆ ಪೂರಕವಾದ ಉತ್ತೇಜನ ದೊರೆತಾಗ ಸಾಧನೆ ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಾಧನೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸತತ 11 ವರ್ಷಗಳಿಂದ ಪಿಸಿವಿ ಚಾರಿಟಬಲ್ ಟ್ರಸ್ಟ್‌ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಮುಖ್ಯಅತಿಥಿಯಾಗಿ ಪಾಲ್ಗೊಂಡ ಬೆಂ.ಗ್ರಾ ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ದೊಡ್ಡಬಳ್ಳಾಪುರದಂತಹ ಸಂಕೀರ್ಣ ಪ್ರದೇಶದಲ್ಲಿ ಇಂದು ಶೈಕ್ಷಣಿಕವಾದ ನಿಶ್ಯಬ್ದ ಕ್ರಾಂತಿ ನಡೆಯುತ್ತಿದೆ. ಇಲ್ಲಿನ ಬಹುತೇಕ ಮನೆಗಳಲ್ಲಿ ಪದವೀಧರರಿದ್ದಾರೆ. ಅದರಲ್ಲೂ ಹೆಣ್ಣು ಮಕ್ಕಳು ಉತ್ತಮ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿರುವುದು ವಿಶೇಷ. ಜ್ಞಾನಾಧಾರಿತ ಅಧ್ಯಯನ ಮತ್ತು ಸಾಧನೆಯ ಜೊತೆಗೆ ಕೌಶಲ್ಯಾಧಾರಿತ ಅಧ್ಯಯನ ಮತ್ತು ಸಾಧನೆಯನ್ನು ಉತ್ತೇಜಿಸುವ ಅಗತ್ಯವಿದೆ. ಸಿಇಟಿ, ನೀಟ್‌ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮ ವಿದ್ಯಾರ್ಥಿಗಳನ್ನು ಗುಣಾತ್ಮಕವಾಗಿ ಸಜ್ಜುಗೊಳಿಸುವುದು ಅಗತ್ಯವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಿಸಿವಿ ಚಾರಿಟಬಲ್‌ ಟ್ರಸ್ಟ್‌ನ ಅಧ್ಯಕ್ಷ ಪಿ.ಸಿ.ವೆಂಕಟೇಶ್, ಕಳೆದ 11 ವರ್ಷಗಳಿಂದ ತಮ್ಮ ಟ್ರಸ್ಟ್‌ನ ಮೂಲಕ ಶೈಕ್ಷಣಿಕ ಸಾಧಕರನ್ನು ಗುರ್ತಿಸಿ ಉತ್ತೇಜನ ನೀಡಲಾಗುತ್ತಿದೆ. ಶಿಕ್ಷಣದ ಅರಿವಿನ ಜೊತೆಗೆ ಸಾಮಾಜಿಕ ಕಾಳಜಿಯನ್ನೂ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಅರಿವು, ಪರಂಪರೆಯ ಸಂರಕ್ಷಣೆ ಸಂಕಲ್ಪವನ್ನು ಮಾಡಬೇಕು ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ 180ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕ್ರೀಡಾ ಪ್ರತಿಭೆಗಳು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಎಂಎಬಿಎಲ್‌ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂ.ಬಿ.ಗುರುದೇವ್, ಪಿಸಿವಿ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಪಿ.ವಿ.ಪ್ರಶಾಂತ್, ಖಜಾಂಚಿ ಪುಷ್ಪಲತಾ, ಟ್ರಸ್ಟಿ ಅನುಶ್ರೀ, ಡಾ.ಚಂದನ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago