
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಅವರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ, ಕಾವ್ಯಾರಾಣಿ ಅವರು ತಮ್ಮ ಗುಮಾಸ್ತ ಶಿವಕುಮಾರ್ ಮೂಲಕ ₹5.50 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಹೆಚ್.ಡಿ. ಕೋಟೆ ತಾಲೂಕಿನ 4.5 ಎಕರೆ ಜಮೀನಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿಯನ್ನು ಇತ್ಯರ್ಥಪಡಿಸಲು ಒಟ್ಟು ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಈಗಾಗಲೇ ₹5 ಲಕ್ಷ ಮುಂಗಡವಾಗಿ ಪಡೆದಿದ್ದು, ಉಳಿದ ₹5.50 ಲಕ್ಷವನ್ನು ಗುಮಾಸ್ತ ಶಿವಕುಮಾರ್ ಮೂಲಕ ಸ್ವೀಕರಿಸುವಂತೆ ಸೂಚಿಸಿದ್ದರೆಂದು ತಿಳಿದುಬಂದಿದೆ.
ಹಣ ಸ್ವೀಕರಿಸಲು ಗುಮಾಸ್ತನನ್ನು ಮನೆಗೆ ಕರೆಸಿಕೊಂಡಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣವನ್ನು ವಶಪಡಿಸಿಕೊಂಡು ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಳಿಕ ಹುಣಸೂರು ಎಸಿ ಕಚೇರಿ ಹಾಗೂ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು ಮತ್ತು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಸ್ತುತ ಎಸಿ ಕಾವ್ಯಾರಾಣಿ ಹಾಗೂ ಗುಮಾಸ್ತ ಶಿವಕುಮಾರ್ ಲೋಕಾಯುಕ್ತ ವಶದಲ್ಲಿದ್ದು, ಪ್ರಕರಣ ಸಂಬಂಧ ವಿಚಾರಣೆ ಮುಂದುವರಿದಿದೆ.