ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ ರಸ್ತೆ ದಾಟುವಿಕೆಗೆ 17 ಸ್ಕೈವಾಕ್‌ಗಳನ್ನು ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ಇನ್ನೂ ಪೂರ್ಣಗೊಳ್ಳದೇ ಉಳಿದಿದೆ. ಕಾಮಗಾರಿ ಆರಂಭವಾಗಿ ಸಾಕಷ್ಟು ಸಮಯ ಕಳೆದರೂ ಬಹುತೇಕ ಸ್ಕೈವಾಕ್‌ಗಳು ಅರ್ಧಕ್ಕೆ ನಿಂತಿದ್ದು, ಹೆದ್ದಾರಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಜೀವದ ಹಂಗು ತೊರೆದು ರಸ್ತೆ ದಾಟುವ ದುಸ್ಥಿತಿ ಎದುರಿಸುತ್ತಿದ್ದಾರೆ.

ಈ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ಕಾರುಗಳು, ಬಸ್‌ಗಳು ಹಾಗೂ ಭಾರೀ ಸರಕು ಸಾಗಾಣಿಕೆ ವಾಹನಗಳು ಸಂಚರಿಸುತ್ತವೆ. ವೇಗವಾಗಿ ಚಲಿಸುವ ವಾಹನಗಳ ನಡುವೆ ರಸ್ತೆ ದಾಟುವುದು ಸಾರ್ವಜನಿಕರಿಗೆ ನಿತ್ಯದ ಸವಾಲಾಗಿದೆ. ವಿಶೇಷವಾಗಿ ಬೆಳಗ್ಗೆ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಸಂಜೆ ಮನೆಗೆ ಮರಳುವ ವೇಳೆ ಅಪಾಯದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ.

ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ

ಹೆದ್ದಾರಿಯ ಹಲವು ಕಡೆಗಳಲ್ಲಿ ಸ್ಕೈವಾಕ್ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ. ಕೆಲವೆಡೆ ಪಿಲ್ಲರ್ ನಿರ್ಮಾಣದ ಹಂತದಲ್ಲೇ ಕೆಲಸ ಸ್ಥಗಿತಗೊಂಡಿದ್ದರೆ, ಇನ್ನೂ ಕೆಲವೆಡೆ ಮೇಲ್ಭಾಗದ ರಚನೆ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬದಿಂದ ಯೋಜನೆಯ ಮೂಲ ಉದ್ದೇಶವೇ ಹಿನ್ನಡೆ ಅನುಭವಿಸಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.

ಅವೈಜ್ಞಾನಿಕ ನಿರ್ಮಾಣದ ಆರೋಪ

ಕೆಲವು ಸ್ಕೈವಾಕ್‌ಗಳ ನಿರ್ಮಾಣದಲ್ಲಿ ತಾಂತ್ರಿಕ ದೋಷಗಳಿರುವ ಆರೋಪವೂ ಕೇಳಿಬರುತ್ತಿದೆ. ಸ್ಕೈವಾಕ್‌ಗಳ ಎತ್ತರ ಹಾಗೂ ವಿನ್ಯಾಸ ಸಮರ್ಪಕವಾಗಿಲ್ಲದ ಕಾರಣ, ಭಾರೀ ಗಾತ್ರದ ಸರಕು ಸಾಗಾಣಿಕೆ ವಾಹನಗಳು ಮೇಲ್ಭಾಗಕ್ಕೆ ತಾಗಿ ಹೆದ್ದಾರಿಯಲ್ಲೇ ನಿಲ್ಲುವ ಘಟನೆಗಳು ನಡೆದಿವೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುವುದರ ಜೊತೆಗೆ ಅಪಘಾತಗಳ ಅಪಾಯವೂ ಹೆಚ್ಚುತ್ತಿದೆ.

ಶಾಲಾ ಮಕ್ಕಳಿಗೆ ಹೆಚ್ಚಿದ ಆತಂಕ

ಸ್ಕೈವಾಕ್‌ಗಳಿಲ್ಲದ ಕಾರಣ ಶಾಲಾ ಮಕ್ಕಳು ಪ್ರತಿದಿನ ಪೋಷಕರ ನೆರವಿನಿಂದಲೇ ಹೆದ್ದಾರಿ ದಾಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳ ನಿರಂತರ ಸಂಚಾರದಿಂದ ಮಕ್ಕಳು ಸುರಕ್ಷಿತವಾಗಿ ರಸ್ತೆ ದಾಟುವುದು ಕಷ್ಟಕರವಾಗಿದ್ದು, ಪೋಷಕರು ಆತಂಕದಲ್ಲಿದ್ದಾರೆ.

ರೈತರಿಗೂ ಸಂಕಷ್ಟ

ಮಳೆಗಾಲ ಆರಂಭವಾಗಿರುವುದರಿಂದ ರೈತರು ತಮ್ಮ ಹೊಲ-ತೋಟಗಳಿಗೆ ತೆರಳಲು ಹಾಗೂ ಜಾನುವಾರುಗಳನ್ನು ಹೆದ್ದಾರಿ ದಾಟಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಬೇಕಾಗಿದೆ. ಸುರಕ್ಷಿತ ದಾಟುವ ವ್ಯವಸ್ಥೆ ಇಲ್ಲದ ಕಾರಣ ರೈತರು ಪ್ರತಿದಿನ ಅಪಾಯವನ್ನು ಎದುರಿಸುತ್ತಿದ್ದಾರೆ.

ಪ್ರತಿಭಟನೆಗಳಾದರೂ ಫಲವಿಲ್ಲ

ಸ್ಕೈವಾಕ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಪ್ರತಿಭಟನೆ ನಡೆಸಿ, ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಆದರೂ, ಕಾಮಗಾರಿ ವೇಗ ಪಡೆಯದೇ ಇರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆ ಸಂಸ್ಥೆ ತಕ್ಷಣ ಕ್ರಮ ಕೈಗೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಯೋಜನಾ ನಿರ್ದೇಶಕರ ನಿರ್ಲಕ್ಷ್ಯ?

ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರ ಸ್ಕೈವಾಕ್ ಕಾಮಗಾರಿ ವಿಳಂಬ, ಪ್ರಗತಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಯ್ ಕುಮಾರ್ ಅವರನ್ನು ಪ್ರತಿನಿಧಿ ವರದಿಗಾರರು ದೂರವಾಣಿ ಮೂಲಕ ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಅವರು ಕರೆ ಸ್ವೀಕರಿಸದೇ, ಬಳಿಕವೂ ವಾಪಸ್ ಕರೆ ಮಾಡದೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಾರ್ವಜನಿಕ ಹಿತದ ಮಹತ್ವದ ವಿಷಯದಲ್ಲಿ ಅಧಿಕಾರಿಯ ಈ ನಿರ್ಲಕ್ಷ್ಯ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಆರಂಭಗೊಂಡ 17 ಸ್ಕೈವಾಕ್ ಯೋಜನೆ ಇಂದು ವಿಳಂಬದ ಸಂಕೇತವಾಗಿ ಪರಿಣಮಿಸಿದೆ. ಅಪೂರ್ಣ ಕಾಮಗಾರಿ ಮತ್ತು ತಾಂತ್ರಿಕ ದೋಷಗಳಿಂದ ಜನರು ಪ್ರತಿದಿನ ಜೀವದ ಹಂಗು ತೊರೆದು ಹೆದ್ದಾರಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳು, ರೈತರು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ, ಅಗತ್ಯ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಹೆದ್ದಾರಿಯನ್ನು ಸುರಕ್ಷಿತಗೊಳಿಸಬೇಕೆಂಬುದು ಸ್ಥಳೀಯರ ಒಕ್ಕೊರಲಿನ ಆಗ್ರಹವಾಗಿದೆ.

ನಮ್ಮೂರ ಬಳಿ ಹೆದ್ದಾರಿ ಆದ ನಂತರ ರಸ್ತೆ ದಾಟುವುದೇ ದೊಡ್ಡ ಸಮಸ್ಯೆಯಾಗಿದೆ. ರಸ್ತೆ ದಾಟುವಷ್ಟರಲ್ಲಿ ಬಸ್ ಹೋಗಿಬಿಡುತ್ತದೆ. ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ವಾಹನಗಳು ವೇಗ ಕಡಿಮೆ ಮಾಡದೇ ದೌಡಾಯಿಸುತ್ತವೆ. ಕೂಡಲೇ ಸ್ಕೈವಾಕ್ ಅಥವಾ ಅಂಡರ್‌ಪಾಸ್ ನಿರ್ಮಿಸಬೇಕು ಎಂದು ವಿದ್ಯಾರ್ಥಿನಿ ಇಂದು ಹೇಳಿದರು.

ರಸ್ತೆ ದಾಟಲು ಕೆಲವೊಮ್ಮೆ ಅರ್ಧ ಗಂಟೆಯಾದರೂ ಕಾಯಬೇಕಾಗುತ್ತದೆ. ಪ್ರತಿದಿನ ಜೀವ ಕೈಯಲ್ಲಿ ಹಿಡಿದು ಹೆದ್ದಾರಿ ದಾಟುತ್ತಿದ್ದೇವೆ. ಅಂಗವಿಕಲರು, ಮಕ್ಕಳು, ಬಾಣಂತಿಯರು ಮತ್ತು ವೃದ್ಧರಿಗೆ ರಸ್ತೆ ದಾಟುವುದೇ ಅಸಾಧ್ಯವಾಗಿದೆ. ಅನೇಕ ಅಪಘಾತಗಳು ನಡೆದಿದ್ದರೂ ಸಂಬಂಧಪಟ್ಟವರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ವಿದ್ಯಾರ್ಥಿನಿ ರಕ್ಷಿತಾ ತಿಳಿಸಿದರು.

ಮನೆ ಒಂದು ಕಡೆ, ಹೊಲ ಇನ್ನೊಂದು ಕಡೆ ಇದೆ. ಹೆದ್ದಾರಿ ದಾಟುವುದು ಅನಿವಾರ್ಯ. ಸ್ಕೈವಾಕ್ ಕಾಮಗಾರಿ ಆರಂಭವಾಗಿ ಬಹಳ ದಿನಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಜಾನುವಾರುಗಳೊಂದಿಗೆ ರಸ್ತೆ ದಾಟುವುದು ದೊಡ್ಡ ಸಾಹಸವಾಗಿದೆ ಎಂದು ರೈತ ಮಹಿಳೆ ಗಾಯತ್ರಮ್ಮ ಹೇಳಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

14 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

18 hours ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

19 hours ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago

ಹೆದ್ದಾರಿಯಿಂದ ನಗರ ಬೀದಿವರೆಗೆ ಶುಭಾಶಯ, ಸ್ವಾಗತ ಬ್ಯಾನರ್‌ಗಳದ್ದೇ ಆರ್ಭಟ: ನ್ಯಾಯಾಲಯದ ನಿರ್ದೇಶನಕ್ಕೂ ಸೊಪ್ಪು ಹಾಕದ ಅನಧಿಕೃತ ಫ್ಲೆಕ್ಸ್‌ಗಳು: ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರಕ್ಕೆ ದೊಡ್ಡ ಸವಾಲು

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್‌ಬೋರ್ಡ್‌ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…

2 days ago