
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಜತೆಗೆ ಪ್ರಮುಖ ಮಾರ್ಗಸೂಚಿಗಳನ್ನು ಸಹ ತಿಳಿಸಿದ್ದಾರೆ. 2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ಫಲಿತಾಂಶ ದಿನಾಂಕ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ..
ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್ 24 ಕ್ಕೆ ಹೊರಬೀಳಲಿದೆ.
ಈ ಬಾರಿ 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಮತ್ತು 9,02,889 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಲಾಖೆಯು ಫಲಿತಾಂಶ ಪ್ರಕಟಿಸುವ ಸಂಭಾವ್ಯ ದಿನಾಂಕವನ್ನೂ ಈಗಲೇ ತಿಳಿಸಿದೆ. ದ್ವಿತೀಯ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7, 2026 ರಂದು ಹಾಗೂ ಎಸ್ಎಸ್ಎಲ್ಸಿ ಫಲಿತಾಂಶ ಏಪ್ರಿಲ್ 24, 2026 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ-2’ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಲಿದೆ.
ವಿದ್ಯಾರ್ಥಿ ಸ್ನೇಹಿ ಕ್ರಮಗಳು ಏನು?
ಉಚಿತ ಬಸ್ ಪ್ರಯಾಣ: ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆ.ಎಸ್.ಆರ್.ಟಿ.ಸಿ ಮತ್ತು ನಗರ ಸಾರಿಗೆ ಬಸ್ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂತಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸ್ಟೂಡೆಂಟ್ ಕಾರ್ನರ್: ಮಂಡಳಿಯ ವೆಬ್ಸೈಟ್ನಲ್ಲಿ ಸ್ಟೂಡೆಂಟ್ ಕಾರ್ನರ್ ಅಡಿಯಲ್ಲಿ ಬ್ಲೂಪ್ರಿಂಟ್, ಮಾದರಿ ಪ್ರಶ್ನೆ ಪತ್ರಿಕೆಗಳು, ಪ್ರಶ್ನೆ ಕೋಶ ಮತ್ತು ಹಿಂದಿನ ಸಾಲಿನ ಪ್ರಶ್ನೆ ಪತ್ರಿಕೆಗಳನ್ನು ಉತ್ತರಗಳ ಸಮೇತ ಒದಗಿಸಲಾಗಿದೆ.
ಖಾಸಗಿ ಅಭ್ಯರ್ಥಿಗಳಿಗೆ ಆನ್ಲೈನ್ ನೋಂದಣಿ: ಇದೇ ಮೊದಲ ಬಾರಿಗೆ ಖಾಸಗಿ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಹಾಗೂ ಅವರಿಗೆ ತಾಲೂಕು ಮಟ್ಟದಲ್ಲಿ ರಾಂಡಮೈಸ್ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜು/ಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಹಂಚಿಕೆ ಮಾಡಲಾಗಿದೆ.
ನಿಷೇಧಾಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್ಗಳನ್ನು ಮುಚ್ಚಲು ಆದೇಶಿಸಲಾಗಿದೆ.
ವೆಬ್ ಕಾಸ್ಟಿಂಗ್: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ.
ಸಾಮಾಜಿಕ ಜಾಲತಾಣದ ಮೇಲೆ ನಿಗಾ: ವಾಟ್ಸಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹರಿಬಿಡುವವರ ವಿರುದ್ಧ ಮತ್ತು ವದಂತಿ ಹಬ್ಬಿಸುವವರ ವಿರುದ್ಧ ‘ಭಾರತೀಯ ನ್ಯಾಯ ಸಂಹಿತೆ’ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಎಲೆಕ್ಟ್ರಾನಿಕ್ ಉಪಕರಣ ನಿಷೇಧ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.