2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027 ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದ್ದು ಈ ಭಾಗದ ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಸಿಗಲಿದೆ ಎಂದು ಆಹಾರ ನಾಗರಿಕ ಸರಬರಾಜು,ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ)ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಂದಿ ಗಿರಿಧಾಮದಲ್ಲಿ ನಡೆದ 14 ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ ಎತ್ತಿನಹೊಳೆ ಯೋಜನೆಗೆ ಪರಿಷ್ಕೃತ ವೆಚ್ಚದ ಬಗ್ಗೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅದರಂತೆ ಅನುದಾನ ಶೀಘ್ರ ಬಿಡುಗಡೆಯಾಗಿ ಮುಂದಿನ 2027 ಕ್ಕೆ ಕೋಲಾರ ಭಾಗದ ವರೆಗೆ ಎತ್ತಿನಹೊಳೆ ನೀರು ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಾಗಿ ಈ ಭಾಗದ ಜನರ ಆಶಾಭಾವನೆ. ಮೊದಲು ಕುಡಿಯುವ ನೀರು ಕೊಟ್ಟು ನಂತರ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಲಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ಆಗಿದ್ದು ರೈತರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10000 ನಿವೇಶನ ನೀಡುವ ಗುರಿ ಹೊಂದಲಾಗಿದೆ. ಬಡವರಿಗೆ ಮನೆ ಸೈಟು ನೀಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ನಿವೇಶನ ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗಿದೆ. ಹಂತ ಹಂತವಾಗಿ ನಿವೇಶನ ಹಂಚಲಾಗುವುದು. ಈಗಾಗಲೇ 2500 ಮನೆಗಳು ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ಇದನ್ನು ಕೂಡ ಬಡವರಿಗೆ ಹಂಚಲಾಗುತ್ತದೆ ಎಂದರು.

ಜಿಲ್ಲಾ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆ ಗಳಿಂದ 250 ಹಾಸಿಗೆ ಸಾಮರ್ಥ್ಯದ ವರೆಗೆ ಮೇಲ್ದರ್ಜೆಗೇರಿಸಲು ಚರ್ಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಸಮಗ್ರ ಕೃಷಿ ಉತ್ಪಾದನೆ ಹೆಚ್ಚಿಸಲು ಸಂಬಂಧಿಸಿದ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಒಂದು ಸಮಗ್ರ ವರದಿ ಸಿದ್ಧಪಡಿಸಿ ನಮಗೆ ನೀಡಿ ಮುಂದಿನ ಕ್ರಮದ ಬಗ್ಗೆ ಕೃಷಿ ಸಚಿವರೊಟ್ಟಿಗೆ ಚರ್ಚಿಸುತ್ತೇನೆ ಎಂದರು.

*ಪಡಿತರ ವಿತರಣೆ ವೇಳಾಪಟ್ಟಿ ಪ್ರದರ್ಶಿಸಿ*
ಪಡಿತರ ವಿತರಿಸುವ ದಿನಾಂಕ, ಸಮಯ, ಒಬ್ಬ ಫಲಾನುಭವಿಗೆ ಎಷ್ಟು ಆಹಾರಧಾನ್ಯ ವಿತರಿಸಲಾಗುವುದು ಎಂಬುದರ ಬಗ್ಗೆ ಪ್ರತಿ ಪಡಿತರ ಅಂಗಡಿ ಮುಂದೆ ಸಾರ್ವಜನಿಕರಿಗೆ ಕಾಣುವ ಹಾಗೆ ಪ್ರದರ್ಶಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಗ್ರಾಮೀಣ ಪ್ರದೇಶದಲ್ಲಿ 500 ರೇಷನ್ ಕಾರ್ಡ್ ಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಕಾರ್ಡ್ ಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.

ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚಿನ ಬೇಡಿಕೆ ಇದೆ. ಎಲ್ಲೆಲ್ಲಿ ಉಳಿಕೆ ಸೀಟುಗಳು ಖಾಲಿ ಇದೆಯೋ ಅಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಿ. ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ ಹೊಸದಾಗಿ ವಸತಿ ಶಾಲೆಗಳನ್ನು ತೆರೆಯಲು ಶೀಘ್ರ ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರದ ಹಂತದಲ್ಲಿ ಚರ್ಚಿಸಿ ಅನುಮೋದಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪೋಡಿ ಆಂದೋಲನ ಹಾಗೂ ಫವತಿ ಖಾತೆ ಆಂದೋಲನ ತ್ವರಿತಗತಿಯಲ್ಲಿ ಆಗಬೇಕಿದೆ. ಪೋಡಿ ಆಂದೋಲನದಲ್ಲಿ ಜಿಲ್ಲೆ ಮೊದಲಿತ್ತು ಅದನ್ನು ಹಾಗೇ ಮುಂದುವರಿಸಿಕೊಂಡು ಹೋಗಿ ಎಂದರು.

ಅಗತ್ಯವಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಸ್ಕೈವಾಕ್ ನಿರ್ಮಾಣ ಮಾಡವಂತೆ ಹಾಗೂ ಬೆಂಗಳೂರು ಮತ್ತು ಕುಣಿಗಲ್ ಮಾರ್ಗದಲ್ಲಿ ರಜೆ ದಿನಗಳಲ್ಲಿ ಅತೀ ಹೆಚ್ಚು ವಾಹನಗಳು ಓಡಾಡುತ್ತದೆ. ಅಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿರುತ್ತದೆ ಅದಕ್ಕಾಗಿ ಟ್ರಾಫಿಕ್ ಜಾಮ್ ಅನ್ನು ಕಡಿಮೆ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಕಸ ವಿಲೇವಾರಿ ಘಟಕದಲ್ಲಿ ಯಾವುದೇ ಮಾನದಂಡಗಳನ್ನು ಅನುಸರಿಸದೇ, ಗ್ರಾಮ ಪಂಚಾಯಿತಿಯಿಂದ ಅನುಮತಿ ಇಲ್ಲದೆ, ದಿನ ನಿತ್ಯ ಟನ್ ಗಟ್ಟಲೆ ಬಿಬಿಎಂಪಿ ಕಸ ಸುರಿಯುತ್ತಿದೆ. ಸುತ್ತಮುತ್ತಲಿನ ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಹಲವು ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡಿದೆ, ಪರಿಸರ, ವಾಯು ಮಾಲಿನ್ಯ ಹೆಚ್ಚಾಗಿದೆ. ಇದರ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ವರದಿ ನೀಡಿದ್ದರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಚಿವರಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ಸರ್ಕಾರದ ಹಂತದಲ್ಲಿ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಸಭೆ ಕರೆದು ನಿಮ್ಮನ್ನು ಆಹ್ವಾನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ ಅವರು ಮಾತನಾಡಿ ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಗ್ಯಾರಂಟಿ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ. ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದೀವಿ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದೆ. ಸೌಲಭ್ಯ ವಂಚಿತ ಅರ್ಹ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದರು.

ಸಭೆಯಲ್ಲಿ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕರಾದ ಶ್ರೀನಿವಾಸ್, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಎಂಎಲ್ಸಿ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ, ಉಪಾಧ್ಯಕ್ಷ ಸೂರಜ್ ಎಂ ಹೆಗಡೆ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೆಡಿಪಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 hour ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 hour ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

4 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

7 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

9 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

13 hours ago