16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿ ಸಲ್ಲಿಕೆ

16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪನಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೆಹಲಿಯಲ್ಲಿ ಇಂದು 16ನೇ ಹಣಕಾಸು ಆಯೋಗದ ಜೊತೆಗಿನ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.5 ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180ರ ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು, ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಲಾಗಿದೆ‌ ಎಂದರು.

ಕರ್ನಾಟಕ ರಾಜ್ಯ ಪ್ರತಿ ವರ್ಷ 4.5 ಲಕ್ಷ ಕೋಟಿ ತೆರಿಗೆ ನೀಡುತ್ತದೆ. ಒಂದು ರೂ.ಗಳು ನೀಡಿದರೆ 15 ಪೈಸೆ ನಮಗೆ ವಾಪಸ್ಸು ಬರುತ್ತದೆ. ಈ ಅನ್ಯಾಯ 16ನೇ ಹಣಕಾಸು ಆಯೋಗದಲ್ಲಿ ಆಗಬಾರದು. 14ನೇ ಹಣಕಾಸು ಆಯೋಗದಲ್ಲಿ ನಮ್ಮ ತೆರಿಗೆ ಪಾಲು 4.713% ಕ್ಕೆ ಮತ್ತು 15 ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು 3.647%ಕ್ಕೆ ಇಳಿಕೆ ಮಾಡಿದ್ದರಿಂದ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ಒಟ್ಟಾರೆ 23% ರಷ್ಟು ಇಳಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ ಎಂದು ಹೇಳಿದರು.

ಇದರೊಂದಿಗೆ ಕೇಂದ್ರ ಸರ್ಕಾರ ಸೆಸ್ ಮತ್ತು ಸರ್ಜಾರ್ಜ್ ನಲ್ಲಿ ನಮಗೆ ಮಾತ್ರವಲ್ಲ ಯಾವ ರಾಜ್ಯಕ್ಕೂ ಪಾಲು ಕೊಡುವುದಿಲ್ಲ. ಕರ್ನಾಟಕದಿಂದ 2024-25ರಲ್ಲಿ ಒಟ್ಟು 5,41,709 ಕೋಟಿ ಸಂಗ್ರಹವಾಗಿದೆ. 8,084 ಕೋಟಿ ರೂ.ಗಳು ಕರ್ನಾಟಕ್ಕೆ ನಷ್ಟವಾಗಿದೆ. ಸೆಸ್ ಮತ್ತು ಸರ್ಚಾಜ್ ಶೇ.5ನ್ನು ಮೀರಬಾರದು, ಒಂದು ವೇಳೆ 5% ಮೀರಿದರೆ ರಾಜ್ಯಗಳ ತೆರಿಗೆ ಹಂಚಿಕೆಯ ಪಾಲಿನಲ್ಲಿ ಶೇ.50 ರಷ್ಟು ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾದರೆ ಕೇಂದ್ರ ಸರ್ಕಾರದ ಬೆಳವಣಿಗೆಯೂ ಆಗುತ್ತದೆ. ಹಾಗಾಗಿ ನ್ಯಾಯಯುತವಾಗಿ ತೆರಿಗೆ ಹಂಚಿಕೆಯಾಗಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದರು.

ರಾಜ್ಯದ ತಲಾದಾಯವು ಆರು ಜಿಲ್ಲೆಗಳನ್ನು ಹೊರತುಪಡಿಸಿ ಕಡಿಮೆಯಿದೆ. ಕಲ್ಯಾಣ ಕರ್ನಾಟಕದಲ್ಲಿ ಇನ್ನೂ ಕಡಿಮೆಯಿದ್ದು, ಇದು ರಾಜಸ್ಥಾನ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ಸರಿಸಮಾನವಾಗಿದೆ. ರಾಜಸ್ವ ಕೊರತೆ ಇರುವ ರಾಜ್ಯಗಳಿಗೆ ಈ ಕೊರತೆಯನ್ನು ತುಂಬಲು ಅನುದಾನವನ್ನು ನೀಡಲಾಗುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ನಮ್ಮಷ್ಟೇ ನಷ್ಟವಾಗಿರುವ ಕೇರಳಕ್ಕೆ ಕಳೆದ ವರ್ಷ 38,000 ಕೋಟಿಗಳನ್ನು ರಾಜಸ್ವ ಕೊರತೆ ತುಂಬಲು ಒದಗಿಸಲಾಗಿದೆ. ಕರ್ನಾಟಕಕ್ಕೆ ಯಾವುದೇ ರಾಜಸ್ವ ಕೊರತೆ ಅನುದಾನ ಬಂದಿಲ್ಲ ಎಂದರು.

15ನೇ ಹಣಕಾಸಿನ ಆಯೋಗವು ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಒದಗಿಸಬೇಕೆಂದು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಲು ನಿರಾಕರಿಸಿತು. ಇದಲ್ಲದೇ ಪೆರಿಫೆರಲ್ ರಿಂಗ್ ರಸ್ತೆ ಗೆ ₹3,000 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ ₹3,000 ಕೋಟಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ಎರಡೂ ಸೇರಿ 11,495 ಕೋಟಿ ರೂ.ಗಳನ್ನು ಒದಗಿಸಬೇಕೆಂದು 15ನೇ ಹಣಕಾಸಿನ ಆಯೋಗವು ಶಿಫಾರಸ್ಸು ಮಾಡಿತ್ತು. ಈ ಹಣ ಬಂದಿಲ್ಲ ಎಂದು ಹೇಳಿದರು.

ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ನಮ್ಮ ಮನವಿಯಲ್ಲಿ ಕೋರಿರುವಂತೆ ಅನುದಾನವನ್ನು ಒದಗಿಸದೇ ಹೋದರೆ ಬೆಂಗಳೂರು ಅಭಿವೃದ್ಧಿಗೆ 1ಲಕ್ಷದ 15 ಸಾವಿರ ಕೋಟಿ ರೂ.ಗಳನ್ನು ಒದಗಿಸಬೇಕು ಎಂದು ಕೋರಿದ್ದೇವೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಏಳು ಜಿಲ್ಲೆಗಳನ್ನು ಒಳಗೊಂಡಿದ್ದು 5 ಜಿಲ್ಲೆಗಳ ವಾರ್ಷಿಕ ವರಮಾನವು ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ಸರಿಸಮಾನವಿದೆ. ಮಲೆನಾಡು ಪ್ರದೇಶಗಳಲ್ಲಿ ನಮಗೆ ಪ್ರವಾಹ, ಭೂ ಕುಸಿತದಂತಹ ಸಮಸ್ಯೆಗಳು ತಲೆದೋರುತ್ತವೆ. ಅದ್ದರಿಂದ ವಿಶೇಷ ಅನುದಾನ ಒದಗಿಸಬೇಕು ಎಂದು ಕೋರಿದ್ದೇವೆ ಎಂದರು.

ಕೇಂದ್ರ ಸರ್ಕಾರದ ವಿವೇಚನಾ ಅನುದಾನವು 0.3% ಗಿಂತ ಹೆಚ್ಚಾಗಬಾರದು ಎಂದು ಮನವಿ ಮಾಡಲಾಗಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮೂರು ಮಾನದಂಡಗಳ ಪ್ರಕಾರ ನಡೆದುಕೊಂಡಿರುವುದು ಕರ್ನಾಟಕ ರಾಜ್ಯ, ಹಾಗಾಗಿ ಆರ್ಥಿಕವಾಗಿ ರಾಜ್ಯ ಸದೃಢವಾಗಿದೆ ಎಂದು ಆಯೋಗದ ಗಮನಕ್ಕೆ ತರಲಾಗಿದೆ. ಹೆಚ್ಚುವರಿ ಮನವಿಯಲ್ಲಿಯೂ ಹೇಳಲಾಗಿದೆ. ಇದೊಂದು ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸುವ ಕೆಲಸವಾಗಬೇಕು. ಕರ್ನಾಟಕಕ್ಕೆ ಅನ್ಯಾಯವಾಗಬಾರದು ಎಂದು ಕೋರಲಾಗಿದೆ ಎಂದು ಹೇಳಿದರು.

ಕೇರಳ, ತಮಿಳುನಾಡಿಗೂ ನಮ್ಮಷ್ಟೇ ನಷ್ಟವಾಗಿದ್ದರೂ, ಅವರಿಗೆ ರಾಜಸ್ವ ಕೊರತೆ ಅನುದಾನವನ್ನು ನೀಡಲಾಗಿದೆ. ನಮಗೇಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಬಾರದು ಎಂದು ನಾವು ಹೇಳುವುದಿಲ್ಲ. ಆದರೆ ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಮಾಡಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದರು.

ಈ ಬಗ್ಗೆ ಇತರೆ ರಾಜ್ಯಗಳು ಧ್ವನಿ ಎತ್ತಿವೆ. ಸಭೆಯು ಒಂದೂ ಕಾಲ ಗಂಟೆಗಳ ಕಾಲ ಸೌಹಾರ್ದಯುತವಾಗಿ ನಡೆದಿದ್ದು, ಆಯೋಗದ ಅಧ್ಯಕ್ಷರು ನಮ್ಮ ಸಲಹೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ಕೋರಿಕೆಗಳನ್ನು ಈಡೇರಿಸುತ್ತಾರೆ ಎನ್ನುವ ಭರವಸೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

9 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

19 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

20 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago