545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ

ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಲಾಗಿದೆ.

ಈ ಹಿನ್ನೆಲೆ 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ನಡೆಸಲು ಅನುವಾಗುವಂತೆ Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಬಿ. ವೀರಪ್ಪ ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred).

545 ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕ್ರರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

Leave a Reply

Your email address will not be published. Required fields are marked *