Categories: ಲೇಖನ

7 ನೇ ವೇತನ ಆಯೋಗ ಜಾರಿ……ಅಧಿಕಾರಿಗಳು ಇನ್ನು ಮುಂದೆ ದಕ್ಷತೆ, ಪ್ರಾಮಾಣಿಕ ಸೇವೆಗೆ ಹೆಚ್ಚು ಮಹತ್ವ ನೀಡಲಿ: ಭ್ರಷ್ಟಾಚಾರವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಲಿ

ಏಳನೇ ವೇತನ ಆಯೋಗದ ವರದಿ ಜಾರಿಯಾಗಿದೆ. ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರ ಸಂಬಳ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 20208 ( ಇಪ್ಪತ್ತು ಸಾವಿರದ ಇನ್ನೂರ ಎಂಟು ಕೋಟಿ ) ಹೆಚ್ಚುವರಿ ಒತ್ತಡ ಬೀಳಲಿದೆ…..

ತುಂಬಾ ಸಂತೋಷ ಸಂಬಳ ಹೆಚ್ಚಾಗಿದ್ದಕ್ಕೆ, ಅಭಿನಂದನೆಗಳು ಸುಖವಾಗಿರಿ….

ಆದರೆ ಎಲ್ಲಾ ಸರ್ಕಾರದ ಸಂಬಳ ಪಡೆಯುವ ಅಧಿಕಾರಿಗಳೇ, ಇನ್ನು ಮುಂದಾದರು ನಿಮ್ಮ ಆತ್ಮವನ್ನು ಮುಟ್ಟಿಕೊಂಡು, ಹೃದಯವನ್ನು ತೆರೆದುಕೊಂಡು, ಮನಸ್ಸನ್ನು ಅಪ್ಪಿಕೊಂಡು, ಸ್ವಲ್ಪ ಸ್ವಲ್ಪ ಆತ್ಮಾವಲೋಕನ ಮಾಡಿಕೊಳ್ಳಿ…….

ಎಷ್ಟೊಂದು ಜನ ಎರಡು ಹೊತ್ತಿನ ಊಟ ಬಟ್ಟೆಗೆ ಅಥವಾ ತಾವು ಇಷ್ಟಪಟ್ಟ ಅಡುಗೆ ಮತ್ತು ತೊಡುಗೆ ತೊಡಲು ಎಷ್ಟೊಂದು ಶ್ರಮ ಪಡುತ್ತಾರೆಂದು. ಕೆಲವರಿಗೆ ಅದು ಸಿಗುವುದೇ ಇಲ್ಲ. ಸಣ್ಣಪುಟ್ಟ ಬೀದಿ ವ್ಯಾಪಾರ ಮಾಡುವ ಹಣ್ಣು ತರಕಾರಿ ಹೂವು ದಿನಸಿ ಔಷಧಿ ಮುಂತಾದ ಚಿಲ್ಲರೆ ಅಂಗಡಿಗಳ ಜನರು ಹತ್ತು/ಇಪ್ಪತ್ತು/ಮೂವತ್ತು ಸಾವಿರ ಲಾಭ ಮಾಡಲು ಎಷ್ಟೆಲ್ಲಾ ಕಷ್ಟಪಡುವರೆಂದು. ಕೆಲವೊಮ್ಮೆ ಲಾಭ, ಕೆಲವೊಮ್ಮೆ ನಷ್ಟ, ಅದರಿಂದಾಗಿ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುವರು, ಕೆಲವರು ಊರು ಬಿಡುವರು, ಮತ್ತೆ ಕೆಲವರು ಪರಾರಿಯಾಗುವರು……

ಎಷ್ಟೊಂದು ರೈತರು ಇಡೀ ವರ್ಷ ದುಡಿದರು ಲಕ್ಷ ರೂಪಾಯಿ ನೋಡಲು ಹರಸಾಹಸ ಪಡುವರು. ಕೆಲವರು ಇರುವ ಹಣವನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಗುವವರು. ಈಗಲೂ ಅನೇಕ ಮಹಿಳೆಯರು ತಮ್ಮ ದೇಹವನ್ನು ಮಾರಿಕೊಂಡು ಮಕ್ಕಳು ಮತ್ತು ಕುಟುಂಬದ ನಿರ್ವಹಣೆ ಮಾಡುವ ಪರಿಸ್ಥಿತಿ ಇದೆ. ಎಷ್ಟೋ ಜನ ಬಿಇ, ಎಂಬಿಎ, ಎಂಸಿಎ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಇತ್ಯಾದಿ ಶಿಕ್ಷಣ ಪಡೆದವರು ಸಹ 10/15/20 ಸಾವಿರಕ್ಕೆ ಯಾವುದೇ ಭದ್ರತೆ ಇಲ್ಲದೆ ಈಗಲೂ ದುಡಿಯುತ್ತಿದ್ದಾರೆ….

ಎಷ್ಟೊಂದು ಜನ ಮಕ್ಕಳ ಶಾಲಾ ಫೀಸು ಕಟ್ಟದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ, ಹಣಕಾಸಿನ ತೊಂದರೆಯಿಂದ ಪ್ರತಿದಿನ ನರಳುತ್ತಿರುತ್ತಾರೆ. ಕೆಲವರಂತೂ ಜೀವನಪೂರ್ತಿ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲೇ ಒದ್ದಾಡುತ್ತಿರುತ್ತಾರೆ. ಇಂತಹ ಸಂದರ್ಭ – ಸನ್ನಿವೇಶದಲ್ಲಿ ನೀವೆಷ್ಟು ಅದೃಷ್ಟವಂತರು ಯೋಚಿಸಿ……

ಪ್ರತಿ ತಿಂಗಳು ಹೆಚ್ಚು ಕಡಿಮೆ 30 ನೇ ತಾರೀಕು ನಿಮ್ಮ ಅಕೌಂಟಿಗೆ ಕನಿಷ್ಠವೆಂದರು ಐವತ್ತು ಸಾವಿರದಷ್ಟು ಹಣ ಕಡ್ಡಾಯವಾಗಿ ಜಮೆ ಆಗುತ್ತದೆ. ಇವತ್ತಿನ ಪರಿಸ್ಥಿತಿಯಲ್ಲಿ 50,000 ದಲ್ಲಿ ಒಂದು ಸರಳ ಬದುಕು ಬದುಕುವುದು ಏನು ಕಷ್ಟವಲ್ಲ. ಅನೇಕರಿಗೆ ಸಂಬಳ ಲಕ್ಷ ದಾಟುತ್ತದೆ……

ಹೌದು, ಬೆಲೆ ಏರಿಕೆ, ವಿದ್ಯಾಭ್ಯಾಸ, ಅನಾರೋಗ್ಯ, ಮದುವೆ ಮುಂತಾದ ಸಂದರ್ಭದಲ್ಲಿ ಒಂದಷ್ಟು ಹೆಚ್ಚು ಹಣ ಬೇಕಾಗುತ್ತದೆ. ಹೇಗಿದ್ದರೂ ಒಂದಷ್ಟು ಉಳಿತಾಯಗಳು ಸಹ ಇರುತ್ತದೆ. ಆದ್ದರಿಂದ ಇದೆಲ್ಲವನ್ನು ಗಮನಿಸಿ ಭ್ರಷ್ಟಾಚಾರವನ್ನು, ಲಂಚದ ಹಣ ಸ್ವೀಕರಿಸುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳಿ. ಲಂಚದ ಹಣದಿಂದ ಬದುಕುವುದು ಇನ್ನೊಬ್ಬರ ಹೇಸಿಗೆ, ಎಂಜಲು ತಿನ್ನುವುದು ಎಂದು ಮನಸ್ಸಿಗೆ ಅರ್ಥ ಮಾಡಿಸಿ, ಕುಟುಂಬಗಳಿಗೆ ಅರ್ಥ ಮಾಡಿಸಿ. ಈ ಭ್ರಷ್ಟ ಹಣದಿಂದ ನನ್ನ ಮಕ್ಕಳನ್ನು ನಮ್ಮ ತಂದೆ ತಾಯಿಯನ್ನು ಸಾಕುವುದಿಲ್ಲ ಎಂದು ಅಂತರ್ಯದಲ್ಲಿ ಪ್ರತಿಜ್ಞೆ ಮಾಡಿಕೊಳ್ಳಿ……

ಬೇಕು ಬೇಕು ಎನ್ನುವ ಮನಸ್ಥಿತಿಯಿಂದ ಸಾಕು ಸಾಕು ಎನ್ನುವ ಮನಸ್ಥಿತಿಗೆ ಬನ್ನಿರಿ. ನಿಮಗೆ ಸಿಗುವ ಸಂಬಳಕ್ಕೆ ತೃಪ್ತರಾದ ನಂತರ ನೀವು ಮಾಡಬೇಕಾದ ಕೆಲಸ ಜನರ ಪ್ರಾಮಾಣಿಕ ಮತ್ತು ದಕ್ಷ ಸೇವೆ. ಲಂಚ ಸ್ವೀಕರಿಸಿಲ್ಲ ಎಂದ ಮಾತ್ರಕ್ಕೆ ನೀವು ಪ್ರಾಮಾಣಿಕರೆಂದು ಸೋಮಾರಿಗಳಾಗಬಾರದು. ಎಷ್ಟು ಸಾಧ್ಯವೋ ಅಷ್ಟು ನಿಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಜನರಿಗೆ ಸೇವೆ ಸಲ್ಲಿಸಿ. ಅದರಲ್ಲೂ ಲಂಚವಿಲ್ಲದೆ ಸಾರ್ವಜನಿಕ ಕೆಲಸಗಳು ಆದಾಗ ಆ ವ್ಯಕ್ತಿಗಳು ನಿಮ್ಮ ಬಗ್ಗೆ ತೋರುವ ಅಭಿಮಾನ, ಪ್ರೀತಿ, ವಿಶ್ವಾಸ, ಕೃತಜ್ಞತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿರಿಸಿಕೊಳ್ಳಿ…..

ಮಾನವೀಯ ಸಂಬಂಧಗಳು ಈ ಸಮಾಜದಲ್ಲಿ ಉಳಿಯಲು ಬಹು ಮುಖ್ಯ ಜವಾಬ್ದಾರಿ ಇರುವುದು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ. ಅವರೇನಾದರೂ ಒಂದಷ್ಟು ಪ್ರಾಮಾಣಿಕತೆ ಮತ್ತು ದಕ್ಷತೆ ತೋರಿಸಿದ್ದೇ ಆದರೆ ಖಂಡಿತವಾಗಲು ಈ ಸಮಾಜದ ಮುಂದಿನ ಭವಿಷ್ಯ ಉತ್ತಮ ಮಟ್ಟದಲ್ಲಿರುತ್ತೆ. ನಮ್ಮ ಮಕ್ಕಳು ಸಹ ನೆಮ್ಮದಿಯಿಂದ ಜೀವನ ಮಾಡುವ ಸಾಧ್ಯತೆ ಇದೆ…..

ರಾಜ್ಯ ಬೊಕ್ಕಸದ ಸುಮಾರು ಶೇಕಡ 50% ರಷ್ಟು ಹಣ ಹೆಚ್ಚು ಕಡಿಮೆ ಶಾಸಕಾಂಗ, ಕಾರ್ಯಂಗ ಮತ್ತು ನ್ಯಾಯಾಂಗವೇ ಉಪಯೋಗಿಸುತ್ತದೆ. ಅದಕ್ಕೆ ತಕ್ಕ ಸೇವೆಯನ್ನು ಸಲ್ಲಿಸಿ. ನೀವು ಒಳ್ಳೆಯವರಾದರೆ ಸಹಜವಾಗಿಯೇ ಇಡೀ ಸಮಾಜ ನಿಮ್ಮನ್ನು ಅನುಸರಿಸುತ್ತದೆ‌. ಜನರನ್ನು ಅನಾವಶ್ಯಕವಾಗಿ ಅಲೆದಾಡಿಸಬೇಡಿ. ಮುಂದೆ ಎಂಟನೇ ವೇತನ ಆಯೋಗ ನಿಮಗಾಗಿ ಎಷ್ಟೇ ಹಣ ನೀಡಿದರು ಜನ ಪ್ರಶ್ನಿಸುವುದಿಲ್ಲ. ಏಕೆಂದರೆ ನೀವು ಅವರ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತೀರಿ ಎನ್ನುವ ಭರವಸೆ ಮೂಡಿರುತ್ತದೆ……

ಸಾಧ್ಯವಾದರೆ ಇದನ್ನು ಯಾರಾದರೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ತಲುಪಿಸಿ. ಅವರು ಇನ್ನೊಂದಿಷ್ಟು ಒಳ್ಳೆಯ ಅಂಶಗಳನ್ನು ಸೇರಿಸಿ ಇಡೀ ರಾಜ್ಯದ ಸರ್ಕಾರಿ ನೌಕರರಿಗೆ ಒಂದು ಸುತ್ತೋಲೆ ಹೊರಡಿಸಿ ಇನ್ನು ಮುಂದೆ ದಕ್ಷತೆ, ಪ್ರಾಮಾಣಿಕ ಸೇವೆಗೆ ಹೆಚ್ಚು ಮಹತ್ವ ನೀಡಲಿ. ಭ್ರಷ್ಟಾಚಾರವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಲಿ. ಇದು ಈ ಸಮಾಜಕ್ಕೆ, ಈ ದೇಶಕ್ಕೆ, ಈ ರಾಜ್ಯಕ್ಕೆ ನಾವು ಕೊಡಬಹುದಾದ ಒಂದು ಸಣ್ಣ ಕೊಡುಗೆ ಎನ್ನುವ ಮನಃಪರಿವರ್ತನೆ ಸರ್ಕಾರಿ ಅಧಿಕಾರಿಗಳಲ್ಲಿ ಆಗಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್‌. ಕೆ

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

7 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

12 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

14 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

17 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago