Categories: ಲೇಖನ

7 ನೇ ವೇತನ ಆಯೋಗ ಜಾರಿ……ಅಧಿಕಾರಿಗಳು ಇನ್ನು ಮುಂದೆ ದಕ್ಷತೆ, ಪ್ರಾಮಾಣಿಕ ಸೇವೆಗೆ ಹೆಚ್ಚು ಮಹತ್ವ ನೀಡಲಿ: ಭ್ರಷ್ಟಾಚಾರವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಲಿ

ಏಳನೇ ವೇತನ ಆಯೋಗದ ವರದಿ ಜಾರಿಯಾಗಿದೆ. ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರ ಸಂಬಳ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 20208 ( ಇಪ್ಪತ್ತು ಸಾವಿರದ ಇನ್ನೂರ ಎಂಟು ಕೋಟಿ ) ಹೆಚ್ಚುವರಿ ಒತ್ತಡ ಬೀಳಲಿದೆ…..

ತುಂಬಾ ಸಂತೋಷ ಸಂಬಳ ಹೆಚ್ಚಾಗಿದ್ದಕ್ಕೆ, ಅಭಿನಂದನೆಗಳು ಸುಖವಾಗಿರಿ….

ಆದರೆ ಎಲ್ಲಾ ಸರ್ಕಾರದ ಸಂಬಳ ಪಡೆಯುವ ಅಧಿಕಾರಿಗಳೇ, ಇನ್ನು ಮುಂದಾದರು ನಿಮ್ಮ ಆತ್ಮವನ್ನು ಮುಟ್ಟಿಕೊಂಡು, ಹೃದಯವನ್ನು ತೆರೆದುಕೊಂಡು, ಮನಸ್ಸನ್ನು ಅಪ್ಪಿಕೊಂಡು, ಸ್ವಲ್ಪ ಸ್ವಲ್ಪ ಆತ್ಮಾವಲೋಕನ ಮಾಡಿಕೊಳ್ಳಿ…….

ಎಷ್ಟೊಂದು ಜನ ಎರಡು ಹೊತ್ತಿನ ಊಟ ಬಟ್ಟೆಗೆ ಅಥವಾ ತಾವು ಇಷ್ಟಪಟ್ಟ ಅಡುಗೆ ಮತ್ತು ತೊಡುಗೆ ತೊಡಲು ಎಷ್ಟೊಂದು ಶ್ರಮ ಪಡುತ್ತಾರೆಂದು. ಕೆಲವರಿಗೆ ಅದು ಸಿಗುವುದೇ ಇಲ್ಲ. ಸಣ್ಣಪುಟ್ಟ ಬೀದಿ ವ್ಯಾಪಾರ ಮಾಡುವ ಹಣ್ಣು ತರಕಾರಿ ಹೂವು ದಿನಸಿ ಔಷಧಿ ಮುಂತಾದ ಚಿಲ್ಲರೆ ಅಂಗಡಿಗಳ ಜನರು ಹತ್ತು/ಇಪ್ಪತ್ತು/ಮೂವತ್ತು ಸಾವಿರ ಲಾಭ ಮಾಡಲು ಎಷ್ಟೆಲ್ಲಾ ಕಷ್ಟಪಡುವರೆಂದು. ಕೆಲವೊಮ್ಮೆ ಲಾಭ, ಕೆಲವೊಮ್ಮೆ ನಷ್ಟ, ಅದರಿಂದಾಗಿ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುವರು, ಕೆಲವರು ಊರು ಬಿಡುವರು, ಮತ್ತೆ ಕೆಲವರು ಪರಾರಿಯಾಗುವರು……

ಎಷ್ಟೊಂದು ರೈತರು ಇಡೀ ವರ್ಷ ದುಡಿದರು ಲಕ್ಷ ರೂಪಾಯಿ ನೋಡಲು ಹರಸಾಹಸ ಪಡುವರು. ಕೆಲವರು ಇರುವ ಹಣವನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಗುವವರು. ಈಗಲೂ ಅನೇಕ ಮಹಿಳೆಯರು ತಮ್ಮ ದೇಹವನ್ನು ಮಾರಿಕೊಂಡು ಮಕ್ಕಳು ಮತ್ತು ಕುಟುಂಬದ ನಿರ್ವಹಣೆ ಮಾಡುವ ಪರಿಸ್ಥಿತಿ ಇದೆ. ಎಷ್ಟೋ ಜನ ಬಿಇ, ಎಂಬಿಎ, ಎಂಸಿಎ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಇತ್ಯಾದಿ ಶಿಕ್ಷಣ ಪಡೆದವರು ಸಹ 10/15/20 ಸಾವಿರಕ್ಕೆ ಯಾವುದೇ ಭದ್ರತೆ ಇಲ್ಲದೆ ಈಗಲೂ ದುಡಿಯುತ್ತಿದ್ದಾರೆ….

ಎಷ್ಟೊಂದು ಜನ ಮಕ್ಕಳ ಶಾಲಾ ಫೀಸು ಕಟ್ಟದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ, ಹಣಕಾಸಿನ ತೊಂದರೆಯಿಂದ ಪ್ರತಿದಿನ ನರಳುತ್ತಿರುತ್ತಾರೆ. ಕೆಲವರಂತೂ ಜೀವನಪೂರ್ತಿ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲೇ ಒದ್ದಾಡುತ್ತಿರುತ್ತಾರೆ. ಇಂತಹ ಸಂದರ್ಭ – ಸನ್ನಿವೇಶದಲ್ಲಿ ನೀವೆಷ್ಟು ಅದೃಷ್ಟವಂತರು ಯೋಚಿಸಿ……

ಪ್ರತಿ ತಿಂಗಳು ಹೆಚ್ಚು ಕಡಿಮೆ 30 ನೇ ತಾರೀಕು ನಿಮ್ಮ ಅಕೌಂಟಿಗೆ ಕನಿಷ್ಠವೆಂದರು ಐವತ್ತು ಸಾವಿರದಷ್ಟು ಹಣ ಕಡ್ಡಾಯವಾಗಿ ಜಮೆ ಆಗುತ್ತದೆ. ಇವತ್ತಿನ ಪರಿಸ್ಥಿತಿಯಲ್ಲಿ 50,000 ದಲ್ಲಿ ಒಂದು ಸರಳ ಬದುಕು ಬದುಕುವುದು ಏನು ಕಷ್ಟವಲ್ಲ. ಅನೇಕರಿಗೆ ಸಂಬಳ ಲಕ್ಷ ದಾಟುತ್ತದೆ……

ಹೌದು, ಬೆಲೆ ಏರಿಕೆ, ವಿದ್ಯಾಭ್ಯಾಸ, ಅನಾರೋಗ್ಯ, ಮದುವೆ ಮುಂತಾದ ಸಂದರ್ಭದಲ್ಲಿ ಒಂದಷ್ಟು ಹೆಚ್ಚು ಹಣ ಬೇಕಾಗುತ್ತದೆ. ಹೇಗಿದ್ದರೂ ಒಂದಷ್ಟು ಉಳಿತಾಯಗಳು ಸಹ ಇರುತ್ತದೆ. ಆದ್ದರಿಂದ ಇದೆಲ್ಲವನ್ನು ಗಮನಿಸಿ ಭ್ರಷ್ಟಾಚಾರವನ್ನು, ಲಂಚದ ಹಣ ಸ್ವೀಕರಿಸುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳಿ. ಲಂಚದ ಹಣದಿಂದ ಬದುಕುವುದು ಇನ್ನೊಬ್ಬರ ಹೇಸಿಗೆ, ಎಂಜಲು ತಿನ್ನುವುದು ಎಂದು ಮನಸ್ಸಿಗೆ ಅರ್ಥ ಮಾಡಿಸಿ, ಕುಟುಂಬಗಳಿಗೆ ಅರ್ಥ ಮಾಡಿಸಿ. ಈ ಭ್ರಷ್ಟ ಹಣದಿಂದ ನನ್ನ ಮಕ್ಕಳನ್ನು ನಮ್ಮ ತಂದೆ ತಾಯಿಯನ್ನು ಸಾಕುವುದಿಲ್ಲ ಎಂದು ಅಂತರ್ಯದಲ್ಲಿ ಪ್ರತಿಜ್ಞೆ ಮಾಡಿಕೊಳ್ಳಿ……

ಬೇಕು ಬೇಕು ಎನ್ನುವ ಮನಸ್ಥಿತಿಯಿಂದ ಸಾಕು ಸಾಕು ಎನ್ನುವ ಮನಸ್ಥಿತಿಗೆ ಬನ್ನಿರಿ. ನಿಮಗೆ ಸಿಗುವ ಸಂಬಳಕ್ಕೆ ತೃಪ್ತರಾದ ನಂತರ ನೀವು ಮಾಡಬೇಕಾದ ಕೆಲಸ ಜನರ ಪ್ರಾಮಾಣಿಕ ಮತ್ತು ದಕ್ಷ ಸೇವೆ. ಲಂಚ ಸ್ವೀಕರಿಸಿಲ್ಲ ಎಂದ ಮಾತ್ರಕ್ಕೆ ನೀವು ಪ್ರಾಮಾಣಿಕರೆಂದು ಸೋಮಾರಿಗಳಾಗಬಾರದು. ಎಷ್ಟು ಸಾಧ್ಯವೋ ಅಷ್ಟು ನಿಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಜನರಿಗೆ ಸೇವೆ ಸಲ್ಲಿಸಿ. ಅದರಲ್ಲೂ ಲಂಚವಿಲ್ಲದೆ ಸಾರ್ವಜನಿಕ ಕೆಲಸಗಳು ಆದಾಗ ಆ ವ್ಯಕ್ತಿಗಳು ನಿಮ್ಮ ಬಗ್ಗೆ ತೋರುವ ಅಭಿಮಾನ, ಪ್ರೀತಿ, ವಿಶ್ವಾಸ, ಕೃತಜ್ಞತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿರಿಸಿಕೊಳ್ಳಿ…..

ಮಾನವೀಯ ಸಂಬಂಧಗಳು ಈ ಸಮಾಜದಲ್ಲಿ ಉಳಿಯಲು ಬಹು ಮುಖ್ಯ ಜವಾಬ್ದಾರಿ ಇರುವುದು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ. ಅವರೇನಾದರೂ ಒಂದಷ್ಟು ಪ್ರಾಮಾಣಿಕತೆ ಮತ್ತು ದಕ್ಷತೆ ತೋರಿಸಿದ್ದೇ ಆದರೆ ಖಂಡಿತವಾಗಲು ಈ ಸಮಾಜದ ಮುಂದಿನ ಭವಿಷ್ಯ ಉತ್ತಮ ಮಟ್ಟದಲ್ಲಿರುತ್ತೆ. ನಮ್ಮ ಮಕ್ಕಳು ಸಹ ನೆಮ್ಮದಿಯಿಂದ ಜೀವನ ಮಾಡುವ ಸಾಧ್ಯತೆ ಇದೆ…..

ರಾಜ್ಯ ಬೊಕ್ಕಸದ ಸುಮಾರು ಶೇಕಡ 50% ರಷ್ಟು ಹಣ ಹೆಚ್ಚು ಕಡಿಮೆ ಶಾಸಕಾಂಗ, ಕಾರ್ಯಂಗ ಮತ್ತು ನ್ಯಾಯಾಂಗವೇ ಉಪಯೋಗಿಸುತ್ತದೆ. ಅದಕ್ಕೆ ತಕ್ಕ ಸೇವೆಯನ್ನು ಸಲ್ಲಿಸಿ. ನೀವು ಒಳ್ಳೆಯವರಾದರೆ ಸಹಜವಾಗಿಯೇ ಇಡೀ ಸಮಾಜ ನಿಮ್ಮನ್ನು ಅನುಸರಿಸುತ್ತದೆ‌. ಜನರನ್ನು ಅನಾವಶ್ಯಕವಾಗಿ ಅಲೆದಾಡಿಸಬೇಡಿ. ಮುಂದೆ ಎಂಟನೇ ವೇತನ ಆಯೋಗ ನಿಮಗಾಗಿ ಎಷ್ಟೇ ಹಣ ನೀಡಿದರು ಜನ ಪ್ರಶ್ನಿಸುವುದಿಲ್ಲ. ಏಕೆಂದರೆ ನೀವು ಅವರ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತೀರಿ ಎನ್ನುವ ಭರವಸೆ ಮೂಡಿರುತ್ತದೆ……

ಸಾಧ್ಯವಾದರೆ ಇದನ್ನು ಯಾರಾದರೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ತಲುಪಿಸಿ. ಅವರು ಇನ್ನೊಂದಿಷ್ಟು ಒಳ್ಳೆಯ ಅಂಶಗಳನ್ನು ಸೇರಿಸಿ ಇಡೀ ರಾಜ್ಯದ ಸರ್ಕಾರಿ ನೌಕರರಿಗೆ ಒಂದು ಸುತ್ತೋಲೆ ಹೊರಡಿಸಿ ಇನ್ನು ಮುಂದೆ ದಕ್ಷತೆ, ಪ್ರಾಮಾಣಿಕ ಸೇವೆಗೆ ಹೆಚ್ಚು ಮಹತ್ವ ನೀಡಲಿ. ಭ್ರಷ್ಟಾಚಾರವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಲಿ. ಇದು ಈ ಸಮಾಜಕ್ಕೆ, ಈ ದೇಶಕ್ಕೆ, ಈ ರಾಜ್ಯಕ್ಕೆ ನಾವು ಕೊಡಬಹುದಾದ ಒಂದು ಸಣ್ಣ ಕೊಡುಗೆ ಎನ್ನುವ ಮನಃಪರಿವರ್ತನೆ ಸರ್ಕಾರಿ ಅಧಿಕಾರಿಗಳಲ್ಲಿ ಆಗಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್‌. ಕೆ

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

11 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

12 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

18 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago