87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬಳ್ಳಾರಿ ಈ ಮೂರು ಜಿಲ್ಲೆಗಳಿಂದ ಭಾರೀ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಹೆಸರು ಅಂತಿಮಗೊಳಿಸಿ, ಘೋಷಿಸುವ ಸಾಧ್ಯತೆ ಇದೆ.
ಶನಿವಾರ ನಡೆದ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೂರೂ ಜಿಲ್ಲೆಗಳ ಕಸಾಪ ಜಿಲ್ಲಾ ಅಧ್ಯಕ್ಷರು ತಮ್ಮ ಜಿಲ್ಲೆಯಲ್ಲೇ ಸಮ್ಮೇಳನ ನಡೆಸುವಂತೆ ಹಕ್ಕೊತ್ತಾಯ ಮಂಡಿಸಿದರು.
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಹಳೆ ಮೈಸೂರು ಭಾಗದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಸಮ್ಮೇಳನ ನಡೆಸುವ ಜಿಲ್ಲೆಯ ಕುರಿತು ಚರ್ಚಿಸಲು ಶನಿವಾರ ಸಂಜೆ 7ಕ್ಕೆ ಗೌಪ್ಯ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸೇರಿ ಮೂವತ್ತೂ ಜಿಲ್ಲೆಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಎಲ್ಲಾ ಜಿಲ್ಲಾಧ್ಯಕ್ಷರ ಒಪ್ಪಿಗೆ ಮೇರೆಗೆ ಯಾವ ಜಿಲ್ಲೆಗೆ 87ನೇ ಸಾಹಿತ್ಯ ಸಮ್ಮೇಳನ ಎನ್ನುವುದು ಅಂತಿಮವಾಗಲಿದೆ.