ಇನ್ನೇನು ಕೆಲ ತಿಂಗಳಲ್ಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಮತದಾರರ ಮನಸ್ಸು ಗೆಲ್ಲಲು ನಾನಾ ರೀತಿಯ ರಣತಂತ್ರ, ಪ್ರತಿತಂತ್ರ ಹೆಣೆದು ಪಾದಯಾತ್ರೆ, ಸಮಾವೇಶ, ಉತ್ಸವ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.
ಜ.24ರಂದು ದೊಡ್ಡಬಳ್ಳಾಪುರದಲ್ಲಿ ಪ್ರಜಾಧ್ವನಿ ಸಮಾವೇಶದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲು ಹೊರಟಿದೆ. ಪ್ರಜಾಧ್ವನಿ ಸಮಾವೇಶಕ್ಕೆ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಗಣ್ಯರ ವೇದಿಕೆ ಸಿದ್ದಪಡಿಸುತ್ತಿದ್ದು, 55 ಸಾವಿರ ಆಸನ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ.
ಕಾಂಗ್ರೆಸ್ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ್ ಮಾತನಾಡಿ, ರಾಜ್ಯಾದ್ಯಂತ ಪ್ರಜಾಧ್ವನಿ ಸಮಾವೇಶಕ್ಕೆ ಸಾಕಷ್ಟು ಜನಮನ್ನಣೆ ಸಿಗುತ್ತಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿಯೂ ಸಹ ಅಭೂತಪೂರ್ವ ಯಶಸ್ಸು ಕಾಣಲಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಈಗಾಗಲೇ ಬೇಸತ್ತು ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನರ ಅಭಿಲಾಷೆ ಆಗಿದೆ. ಆದ್ದರಿಂದ ಜನರ ಒಳಿತಿಗಾಗಿ, ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ನಾವು ಪೂರ್ವತಯಾರಿ ನಡೆಸುತ್ತಿದ್ದೇವೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಯಾವ ರೀತಿ ಅಭಿವೃದ್ಧಿ ಮಾಡಬೇಕು, ಏನೆಲ್ಲಾ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು ಎಂಬುದನ್ನು ಸ್ಥಳೀಯ ನಾಯಕರು, ಶಾಸಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದರೆ ಮೀನುಗಾರರು ಬೋಟ್ ಖರೀದಿಸಲು ಸಬ್ಸಿಡಿ, 500 ಲೀಟರ್ ಸೀಮೆ ಎಣ್ಣೆ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.