ಘಾಟಿ ಕ್ಷೇತ್ರದಲ್ಲಿ ಜ.16 ರಂದು ನಡೆಯಲಿರುವ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಹಾಗೂ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶುಕ್ರವಾರ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹಾಸನಾಂಬೆ ದೇವಾಲಯ ದರ್ಶನಕ್ಕೆ ಸಾವಿರಾರು ಜನ ಭಕ್ತಾದಿಗಳು ಬಂದಿದ್ದರು. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಗಳು ನಡೆಯದೆ ಸುಗಮ ಸಂಚಾರ ಹಾಗೂ ಇತರೆ ಸೌಲಭ್ಯಗಳನ್ನು ಭಕ್ತಾಧಿಗಳಿಗೆ ಕಲ್ಪಿಸಿಕೊಡಲಾಗಿತ್ತು. ಅದೇ ಮಾದರಿಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಂದೊಂದು ಜವಾಬ್ದಾರಿಗಳನ್ನು ಪಡೆಯುವ ಮೂಲಕ ರಥೋತ್ಸವವನ್ನು ವಿಜೃಂಭಣೆಯಿಂದ ನಡೆಯುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಈಗಾಗಲೇ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲೂ ಸಹ ಸಭೆ ನಡೆಸಲಾಗಿದೆ. ರಥೋತ್ಸವಕ್ಕೆ ಬರುವ ಭಕ್ತರಿಗೆ ಸಾರಿಗೆ, ಊಟ, ಕುಡಿಯುವ ನೀರು ಸೌಕರ್ಯ ಸೇರಿದಂತೆ ಯಾವುದೇ ರೀತಿಯ ನೂಕು ನುಗ್ಗಲು ಇಲ್ಲದಂತೆ ಬಂದು ದೇವರ ದರ್ಶನ ಪಡೆಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳು ಬೆಳಿಗ್ಗೆ 11 ಗಂಟೆಯ ಒಳಗೆ ಮುಕ್ತಾಯವಾಗಬೇಕು. ಪರೇಡ್ ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಒಂದು ದಶಕದಿಂದಲು ತಾಲ್ಲೂಕಿನ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗಣರಾಜ್ಯೋತ್ಸವದಲ್ಲಿ ಅಭಿನಂದಿಸಬೇಕು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಸಂಪ್ರದಾಯವನ್ನು ಆಯ್ಕೆ ಸಮಿತಿ ಮಾಡಲಿದೆ. ಜ.20 ಮತ್ತು 21 ರಂದು ಬಾಶೆಟ್ಟಿಹಳ್ಳಿಯಲ್ಲಿ ನಡೆಯಲಿರುವ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಎಲ್ಲಾ ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಗ್ರೇಡ್ -2 ತಹಶೀಲ್ದಾರ್ ಪ್ರಕಾಶ್, ನಗರಸಭೆ ಪೌರಾಯುಕ್ತ ಪರಮೇಶ್,ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ,ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜ್ ಇದ್ದರು.