2023 ರೊಳಗೆ ದಢಾರ ಮತ್ತು ರುಬೆಲ್ಲಾ ರೋಗ ನಿರ್ಮೂಲನೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಭಾರತವನ್ನು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ರೋಗಮುಕ್ತ ದೇಶವನ್ನಾಗಿಸಲು ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಲಸಿಕಾ ಕಾರ್ಯಪಡೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ಧ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ.

ಕೇಂದ್ರ ಸರ್ಕಾರವು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆಗಾಗಿ ಹಲವು ಚಟುವಟಿಕೆಗಳನ್ನು ತೀವ್ರಗೊಳಿಸಿ 2023ರ ಡಿಸೆಂಬರ್ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ಯಶಸ್ವಿ ನಿರ್ಮೂಲನೆಗಾಗಿ ಅಗತ್ಯ ಕ್ರಮಗಳನ್ನು ವಹಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅರ್ಹ ಮಕ್ಕಳಿಗೆ ದಢಾರ ಮತ್ತು ರುಬೆಲ್ಲಾದ ಎರಡು ಡೋಸ್‌ಗಳ ಕನಿಷ್ಟ ಶೇ.95% ರಷ್ಟು ಲಸಿಕಾಕರಣದ ಪ್ರಗತಿ ಸಾಧಿಸಲು ಸೂಚಿಸಿದರಲ್ಲದೆ, ದಢಾರ ಮತ್ತು ರುಬೆಲ್ಲಾ ಲಸಿಕೆಯ ಮೊದಲನೇ ಡೋಸ್ ಮತ್ತು ಎರಡನೇ ಡೋಸ್‌ಗಳ ಡ್ರಾಪ್‌ಔಟ್‌ರೇಟ್ ಶೂನ್ಯ ಸಾಧಿಸಬೇಕಾಗಿದ್ದು, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ಅಧೀನದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜೇಂದ್ರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಸೀಮಾ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *