
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಸ್ಥಳೀಯ ಜೆಡಿಎಸ್-ಬಿಜೆಪಿ ಪಕ್ಷದ ಮೈತ್ರಿಯಲ್ಲಿ ಒಡಕು ಕಾಣಿಸಿಕೊಂಡಿದೆ.
ಚುನಾವಣಾ ಪ್ರಚಾರ ಸಭೆ, ಮನೆ ಮನೆ ಪ್ರಚಾರ, ಕಾರ್ಯಕ್ರಮ ಸಂಘಟನೆ ಸೇರಿದಂತೆ ಹಲವು ವಿಚಾರಗಳಲ್ಲಿ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಮುಖಂಡರನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮೈತ್ರಿಗೆ ವಿಘ್ನ ಎದುರಾಗಿದೆ ಎನ್ನಲಾಗಿದೆ.
ನಗರದ ಬಹುತೇಕ ವಾರ್ಡ್ ಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಏಕಪಕ್ಷೀಯ ತೀರ್ಮಾನ ಕೈಗೊಂಡು ಜೆಡಿಎಸ್ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಪಕ್ಷದ ಮುಖಂಡರ ಈ ಧೋರಣೆ ಕುರಿತು ಬಿಜೆಪಿ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮತದಾನಕ್ಕೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಬಿಕ್ಕಟ್ಟು ತಲೆದೋರಿರುವುದು ಮೈತ್ರಿ ಧರ್ಮಕ್ಕೆ ಧಕ್ಕೆ ಉಂಟು ಮಾಡುವಂತಿದೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ.
ನಗರದ 31 ವಾರ್ಡ್ ಗಳ ಪೈಕಿ ಬಹುತೇಕ ಕಡೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಪರಸ್ಪರ ಅಸಮಾಧಾನ ತಲೆದೋರಿದೆ. ಬಿಜೆಪಿಯ ಕೆಲ ಕಾರ್ಯಕರ್ತರು ಹಾಗೂ ಮುಖಂಡರು ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಬಹಿರಂಗ ಟೀಕೆಗೆ ಇಳಿದಿದ್ದಾರೆ.
ಚುನಾವಣಾ ಪ್ರಚಾರ ಸಭೆಗಳಲ್ಲಿ ಜೆಡಿಎಸ್ ಕಾರ್ಯಕರ್ತರೇ ಇರುವುದಿಲ್ಲ. ಭಾಗವಹಿಸಿದ ಕೆಲವು ಜೆಡಿಎಸ್ ಕಾರ್ಯಕರ್ತರು ನಕಲಿಗಳು ಎಂಬ ಬರಹ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯೆ ವಾಕ್ಸಮರ, ಪರಸ್ಪರ ಅಸಮಾಧಾನಕ್ಕೆ ಕಾರಣವಾಗಿದೆ.
ಬಿಜೆಪಿಗರ ವರ್ತನೆ ಕುರಿತು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಅವರ ಗಮನಕ್ಕೆ ತಂದರೂ, ಸರಿ ಮಾಡೋಣ ಎಂಬ ಉತ್ತರವಷ್ಟೇ ಬರುತ್ತಿದೆ. ಆದರೆ, ಒಡಕು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಜೆಡಿಎಸ್ ಪಕ್ಷ ಕೆಲ ಅಸಮಾಧಾನಿತ ಮುಖಂಡರು ಆರೋಪಿಸಿದ್ದಾರೆ.
ಒಟ್ಟಾರೆ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿದ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಮತದಾನಕ್ಕೂ ಮುಂಚೆಯೇ ಒಡಕು ಮೂಡಿದ್ದು, ಮತದಾನದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.