ಪ್ರಜ್ವಲ್ ವಿರುದ್ದ ಮೇ.30ರ ಹೋರಾಟದ ಪೋಸ್ಟರ್ ಬಿಡುಗಡೆ

ಕೋಲಾರ: ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಮಹಿಳೆಯರ ಘನತೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆ ಕುರಿತಂತೆ ನಗರದ ನಚಿಕೇತ ನಿಲಯದಲ್ಲಿ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳು ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜನಪರ ಚಳುವಳಿಗಳ ಒಕ್ಕೂಟ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಗೌರವವನ್ನು ಕಳೆದಿರುವ ಘಟನೆ ಇದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದಲೂ ಮಹಿಳಾ, ದಲಿತ, ಕಾರ್ಮಿಕ, ರೈತ, ಅಲ್ಪಸಂಖ್ಯಾತ, ಹಿಂದುಳಿದ, ಲಿಂಗತ್ವ ಅಲ್ಪಸಂಖ್ಯಾತ, ವಿದ್ಯಾರ್ಥಿಗಳು ಹೆಚ್ಚಿನ ರೀತ ಭಾಗವಹಿಸಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಈ ನೀಚ ಕೃತ್ಯವನ್ನು ಸೆರೆಹಿಡಿದವರು, ನಂತರ ಆ ವಿಡಿಯೋಗಳನ್ನು ಪೆನ್ ಡ್ರೈವ್‌ಗಳ ಮೂಲಕ ಹಂಚಿಕೆ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇದೊಂದು ಅಂತಾರಾಷ್ಟ್ರೀಯ ಮಟ್ಟದ ಹೀನ ಕೃತ್ಯವಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಲ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಂತಮ್ಮ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದ್ದು, ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ, ಆರೋಪಿಯನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳುವ ಬದಲಾಗಿ ಸಂತ್ರಸ್ತರನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ. ಅವರನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಅವರ ಕುಟುಂಬಕ್ಕೆ ರಾಜಕೀಯ ಅಧಿಕಾರದಿಂದ ದೂರವಿಡಬೇಕು. ಈ ನಿಟ್ಟಿನಲ್ಲಿ ಮೇ. 30 ರಂದು ಬೃಹತ್ ಹೋರಾಟವನ್ನು ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲು ಜನಪರ ಸಂಘಟನೆಗಳು ತೀರ್ಮಾನಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿ.ಗೀತಾ ಎಂ.ವಿಜಯಕೃಷ್ಣ, ಭೀಮರಾಜ್, ಮಹಮ್ಮದ್ ಮುಸ್ತಫಾ, ಮಂಜುನಾಥ್, ಸಭೀನಾ ಇದ್ದರು

Leave a Reply

Your email address will not be published. Required fields are marked *