ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಎಚ್ಚರಿಸಿದರು.
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಮಟ್ಟದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಸಾಯನಿಕ ಬಣ್ಣ ಲೇಪಿತ ಪಿ.ಒ.ಪಿ ಗಣೇಶ ಮೂರ್ತಿಗಳನ್ನು ಬಳಸಬಾರದು. ಗಣೇಶ ಮೂರ್ತಿಯನ್ನು ಕೂರಿಸುವಾಗ ಪರಿಸರ ಸ್ನೇಹಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು. ಅದೇರೀತಿ ಗಣೇಶ ವಿಗ್ರಹಗಳನ್ನು ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಾಗ ಸೂಕ್ತ ಮುಂಜಾಗ್ರತಾ ಅಗತ್ಯ ಕೈಗೊಳ್ಳಬೇಕು. ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು ಉತ್ತಮ. ಯಾವುದೇ ಅನಾಹುತ-ಹಾನಿ ಸಂಭವಿಸದಂತೆ ಕ್ರಮ ವಹಿಸಬೇಕು ಎಂದರು.
ಹಬ್ಬದ ವೇಳೆ ಧ್ವನಿವರ್ಧಕ ಬಳಕೆ, ಶಾಮಿಯಾನ, ಮೆರವಣಿಗೆ ಮಾರ್ಗ, ಗಣೇಶ ಮೂರ್ತಿ ಕೂರಿಸುವುದು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಕೂರಿಸಲು ಕಡ್ಡಾಯವಾಗಿ ಪೊಲೀಸ್ ಇಲಾಖೆ, ಬೆಸ್ಕಾಂ ಇಲಾಖೆ, ನಗರಸಭೆ, ಸ್ಥಳೀಯ ಸಂಸ್ಥೆಗಳು, ಅಗ್ನಿಶಾಮಕ ದಳ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಎಲ್ಲಾ ಇಲಾಖೆಗಳಿಂದ ಒಂದೇ ಸ್ಥಳದಲ್ಲಿ ಅನುಮತಿಯನ್ನು ಪಡೆಯುವ ಸಲುವಾಗಿ ತಾಲೂಕು ಮಟ್ಟದಲ್ಲಿ ಸಿಂಗಲ್ ವಿಂಡೋ ಪದ್ಧತಿಯನ್ನು ಅಳವಡಿಸಲಾಗಿದೆ ಎಂದರು. ಸೋಮವಾರದಿಂದ ಅನುಮತಿ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು.
ಒಟ್ಟಾರೆ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ, ಶಾಂತಿಯುತವಾಗಿ, ಭಕ್ತಿಪೂರ್ವಕವಾಗಿ ಆಚರಣೆ ಮಾಡಬೇಕು ಎಂದು ಹೇಳಿದರು.
ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ಗಣೇಶ ಹಬ್ಬವನ್ನು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಣೆ ಮಾಡಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದರು.
ಧ್ವನಿವರ್ಧಕ ಬಳಕೆಗೆ ಪೊಲೀಸ್ ವೃತ್ತ ನಿರೀಕ್ಷಕರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಮಿತಿ ವತಿಯಿಂದ ಸಿಡಿಮದ್ದು ಪಟಾಕಿ ಮುಂತಾದವುಗಳನ್ನು ಸಿಡಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಜಾಗರೂಕತೆ ವಹಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪೆಂಡಾಲ್ ನಿರ್ಮಿಸಬೇಕು, ಬಲವಂತವಾಗಿ ಚಂದಾ ವಸೂಲಿ ಮಾಡಬಾರದು, ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯಗಳು ಅಶ್ಲೀಲ ಹಾಡುಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಗಣೇಶ ಮೂರ್ತಿಗಳ ವಿಸರ್ಜನೆಯ ಸಂದರ್ಭಗಳಲ್ಲಿ ಮದ್ಯ ಸೇವಿಸದ ಯುವಕರನ್ನು ಬಳಸಿಕೊಳ್ಳಬೇಕು. ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಪೆಂಡಾಲ್ ಗಳನ್ನು ಹಾಕುವಾಗ ಕಡ್ಡಾಯವಾಗಿ ಅಗ್ನಿ ನಿರೋಧಕ ಸಾಮಾಗ್ರಿಗಳನ್ನು ಬಳಸಬೇಕು ಮತ್ತು ಅಗ್ನಿ ಶಾಮಕ ಇಲಾಖೆಯಿಂದ ಪರವಾನಿಗೆ ಪಡೆದುಕೊಳ್ಳಬೇಕೆಂದು ಸಭೆಯಲ್ಲಿ ಮನವಿ ಮಾಡಿದರು.
ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನಿನ ಎಲ್ಲೆ ಮೀರಬಾರದು. ಒಂದು ವೇಳೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಘಟನೆಗಳಲ್ಲಿ ಭಾಗಿಯಾಗುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಡಿವೈಎಸ್ಪಿ ಪಿ.ರವಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರಸಭೆ ಪೌರಾಯುಕ್ತಾ ಕಾರ್ತೀಕೇಶ್ವರ್, ನಗರ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ, ಸೇರಿದಂತೆ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಬೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ಇಲಾಖಾಧಿಕಾರಿಗಳು ಹಾಗೂ ಸಾರ್ವಜನಿಕತರು ಉಪಸ್ಥಿತರಿದ್ದರು.