ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು- ಸಂಸದ ಡಾ.ಕೆ.ಸುಧಾಕರ್ 

ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ ಮೊದಲನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆದಾಯ ದ್ವಿಗುಣಗೊಳಿಸುವುದು, ಮಹಿಳೆಯರ ಸಬಲೀಕರಣ, ಆರೋಗ್ಯ ಕ್ಷೇತ್ರ, ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರ ಹಾಗೂ ಇತರೆ ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ಹಲವು ಜನಪರ ಯೋಜನೆಗಳು ಜಾರಿಗೆ ತರಲಾಗಿದೆ. ಅಂತಹ ಸರ್ಕಾರದ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಫಲಾನುಭವಿಗೆ ತಲುಪಲು ಅಧಿಕಾರಿಗಳ ಸಮನ್ವಯತೆ ಮತ್ತು ಕಾರ್ಯಕ್ಷಮತೆ ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಿ ಎಂದು ಸೂಚಿಸಿದರು.

*ಜೆ.ಜೆ.ಎಂ ಕಾಮಗಾರಿಯ ಗುಣಮಟ್ಟ ಮತ್ತು ವೇಗ ಕಾಪಾಡಿ*
ದೇಶದ ಪ್ರತಿಯೊಬ್ಬರಿಗೂ ಕುಡಿಯುವ ನೀರು ಕಲ್ಪಿಸುವ ದೃಷ್ಟಿಯಿಂದ ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಇದಾಗಿದೆ. ಕಾಮಗಾರಿ ವಿಳಂಬ ಹಾಗೂ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿದ್ದು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವ ಜತೆಗೆ ಜೆ.ಜೆ.ಎಂ ಕಾಮಗಾರಿಗೆ ಬಳಸುತ್ತಿರುವ ಪೈಪ್ ಗುಣಮಟ್ಟ ಪರಿಶೀಲಿಸಿ. ನಿಯಮಾನುಸಾರ ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

*ಬೆಳೆ ವಿಮೆ ನೋಂದಣಿ ಹೆಚ್ಚಿಸಿ*
ಕೃಷಿ ಇಲಾಖೆಯಡಿ ಬರುವ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಪ್ರಧಾನಮಂತ್ರಿ ಫೈಸಲ್ ಭೀಮಾ ಯೋಜನೆಯಡಿ ಕಳೆದ ವರ್ಷ ಅಂದಾಜು 49,950 ಹೆಕ್ಟೇರ್ ಬೆಳೆ ನಾಶವಾಗಿತ್ತು. 2.55 ಕೋಟಿ ರೂ. ವಿಮೆ ಹಣ ಬಿಡುಗಡೆ ಆಗಿ 2.51 ಕೋಟಿ ವಿಮೆ ಹಣ ರೈತರ ಖಾತೆಗೆ ಜಮೆ ಆಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಬೆಳೆ ವಿಮೆ ಮಾಡಿಸುವುದರಿಂದ ಆಗುವಂತಹ ಅನುಕೂಲಗಳ ಬಗ್ಗೆ ಸಭೆಗಳನ್ನು ಏರ್ಪಡಿಸಿ, ವ್ಯಾಪಕ ಪ್ರಚಾರ ಕೈಗೊಂಡು ನೋಂದಣಿ ಹೆಚ್ಚಿಸಿ. ತೋಟಗಾರಿಕೆ ಬೆಳೆಗಳ ಹವಾಮಾನ ಆಧಾರಿತ ಬೆಳೆ ವಿಮೆಗೆ ಶೇಕಡ 100 ರಷ್ಟು ನೋಂದಣಿ ಮಾಡಲು ಕ್ರಮ ವಹಿಸಿ ಎಂದರು.

ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯಡಿ 16 ನೇ ಕಂತಿನಲ್ಲಿ ಜಿಲ್ಲೆಯಲ್ಲಿ 37.659 ಅರ್ಹ ಫಲಾನುಭವಿಗಳಿಗೆ 6000 ರೂ. ಗಳ ಅರ್ಥಿಕ ನೆರವು ದೊರಕಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಗರ ಪ್ರದೇಶದಲ್ಲಿ ಶೇಕಡ 79% ಪ್ರಗತಿ ಸಾಧಿಸಲಾಗಿದೆ. ನಿರ್ಮಾಣ ಹಂತದ ಮನೆಗಳು, ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಶೀಘ್ರವೇ ಪೂರ್ಣಗೊಳಿಸಲು ಫಲಾನುಭವಿಗಳಿಗೆ ಸೂಚನೆ ನೀಡಿ, ನಿವೇಶನ ಹಾಗೂ ವಸತಿ ರಹಿತ ಫಲಾನುಭವಿಗಳ ಪಟ್ಟಿಯ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರ ಮೂಲಕ ಕಸ ವಿಲೇವಾರಿ ಘಟಕಗಳ ಸದ್ಬಳಕೆ ಆಗಬೇಕು ಎಂದು ಹೇಳಿದರು.

ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರಿಗೂ ತಲುಪವಂತೆ ಕ್ರಮ ವಹಿಸಿ. ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ 5 ಲಕ್ಷ ರೂಪಾಯಿಗಳ ಉಚಿತ ವೈದ್ಯಕೀಯ ಸೌಲಭ್ಯ ಸಿಗುತ್ತದೆ. ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತಾಗಬೇಕು ಎಂದರು.

ಜಿಲ್ಲೆಯಲ್ಲಿ 5200 ಸ್ವಸಹಾಯ ಗುಂಪುಗಳಿದ್ದು, ಸ್ವ ಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಸಬಲೀಕರಣ ಗೊಳಿಸುವ ದೃಷ್ಟಿಯಿಂದ ಸ್ವಸಹಾಯ ಗುಂಪುಗಳಿಗೆ 21 ಕೋಟಿ ರೂಗಳ ಸಾಲ ನೀಡಲಾಗಿದೆ. ಪಿ.ಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಶೀಘ್ರ ತರಬೇತಿ ನೀಡಿ ಎಂದರು.

ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣಗಳು ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆ ಜತೆಗೆ ಪೋಲಿಸ್ ಇಲಾಖೆ ಜಂಟಿಯಾಗಿ ಕಾರ್ಯಪ್ರವೃತರಾಗಿ ಕೆಲಸ ಮಾಡಬೇಕು. ಜಿಲ್ಲೆಯ ವ್ಯಾಪ್ತಿಯಲ್ಲಿ ಗರ್ಭಿಣಿಯರು ಹಾಗೂ ಹೆರಿಗೆಯಾದ ಮಹಿಳೆಯರ ನೋಂದಣಿ ಪ್ರಕ್ರಿಯೆ 100% ರಷ್ಟು ಮಾಡಿಸಿ, ಸರ್ಕಾರದ ಸೌಲಭ್ಯವನ್ನು ಪಡೆಯುವಂತೆ ಜಾಗೃತಿ ಮೂಡಿಸಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರದ ಪೂರೈಕೆಯಾಗಬೇಕು. ಯಾವೊಬ್ಬ ಗರ್ಭಿಣಿಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಒಳಗಾಗದಂತೆ ಗಮನ ಹರಿಸಬೇಕು.
ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ , ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರುವಲ್ಲಿ ಕೆಲಸ ಮಾಡಲಾಗುವುದು ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!