ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ: ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)ಮೃತಪಟ್ಟವರು.
ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಸ್ಥಳದಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಮೃತಪಟ್ಟವರು ವಿಜಯಪುರದ ಒಂದೇ ಫ್ಯಾಮಿಲಿ ಯವರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.