ಕೋಲಾರ: ಮುಂಬರಲಿರುವ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಸಂಘಟನೆಯಿಂದ ಮಂಗಳವಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿ ಉಪ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ ಶಿಕ್ಷಣ ಕ್ಷೇತ್ರವು ವಿಶಾಲವಾಗಿ ವ್ಯಾಪಿಸಿದ್ದು ದೇಶ, ವಿದೇಶಗಳಿಂದಲೂ ವಿದ್ಯಾರ್ಥಿಗಳು ಬಂದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಗಣನೀಯವಾಗಿ ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ ಎಂದು ಆರೋಪಿಸಿದರು
ಉನ್ನತ ಶಿಕ್ಷಣ ಉಳ್ಳವರ ಪಾಲಾಗುತ್ತಿದೆ. ರೈತ, ಕಾರ್ಮಿಕ, ದಲಿತ, ಹಿಂದುಳಿದವರ ಮಕ್ಕಳು ಇಂದು ಉನ್ನತ ಶಿಕ್ಷಣವನ್ನು ಪಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಗುಣಮಟ್ಟದ ಶಿಕ್ಷಣ ಸಾರ್ವಜನಿಕ ಸಂಸ್ಥೆಗಳಲ್ಲಿ ಕುಂಟಿತವಾಗುತ್ತಿದೆ. ಸರ್ಕಾರ ಸಾರ್ವಜನಿಕ ಶಿಕ್ಷಣವನ್ನು ಬಳಪಡಿಸಲು ಸೂಕ್ತಕ್ರಮ ತೆಗೆದುಕೊಳ್ಳಲು ಮುಂದಾಗಬೇಕಿತ್ತು. ಆದರೆ ಸರ್ಕಾರದ ಬೇಜವಾಬ್ದಾರಿ ತನದ ಪರಿಣಾಮದಿಂದಾಗಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಿ ಬಲಪಡಿಸಲು ಕೂಡಲೆ ಸರ್ಕಾರ ಶಿಕ್ಷಣ ತಜ್ಞರ ಮತ್ತು ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ ಇದರ ಮೂಲಕ ತಳ ಮಟ್ಟದಲ್ಲಿ ಅಧ್ಯಯನ ನಡೆಸಿ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವುದು ಜರೂರಿದೆ ಎಂದರು.
ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಒತ್ತಾಯಿಸಿ ಶೈಕ್ಷಣಿಕ ಸಮಸ್ಯೆಗಳನ್ನು ಗುರುತಿಸಿಕೊಂಡು ಎಸ್.ಎಫ್.ಐ ರಾಜ್ಯದಾಧ್ಯಂತ ಹಗಲಿರುಳು ಹೋರಾಟವನ್ನು ರೂಪಿಸುತ್ತ ಬರುತ್ತಿದೆ. ಆದರೆ ಶಿಕ್ಷಣವನ್ನು ದುರ್ಬಲಗೊಳಿಸುವ ಶಿಕ್ಷಣ ವಿರೋಧಿ ನೀತಿಗಳನ್ನು ಸರ್ಕಾರ ಜಾರಿ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿರುವುದು ಕಂಡು ಬರುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಜೆ.ಶಶಿಕುಮಾರ್ ಮಾತನಾಡಿ, ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಕೈ ಬಿಟ್ಟು ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು ರಾಜ್ಯ ಸರ್ಕಾರ ತನ್ನ ಮುಂಬರುವ ಬಜೆಟ್ನಲ್ಲಿ ಕೊಥಾರೆ ಆಯೋಗದಂತೆ ಶೇ.30ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ರಾಜ್ಯದಲ್ಲಿರುವ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ 3500 ರೂಗಳಿಗೆ ಹೆಚ್ಚಿಸಬೇಕು. ಮತ್ತು ಆರೋಗ್ಯ ಭದ್ರತೆ ನೀಡಬೇಕು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ನೀಡಿ ಬಳಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ, ಉಪಾಧ್ಯಕ್ಷೆ ಲಾವಣ್ಯ, ಜಿಲ್ಲಾ ಸಮಿತಿ ಸದಸ್ಯರಾದ ಲೋಕೇಶ್, ಅರ್ಚನಾ, ನಾಗೇಶ್, ಕಾರ್ತಿಕ್, ಗಗನಶ್ರೀ, ಚಂದನ, ಸೋನಿಯಾ, ರಕ್ಷಿತಾ, ಐಶ್ವರ್ಯ ಮುಂತಾದವರು ಇದ್ದರು.