ಪ್ರತಿ ತಾಲ್ಲೂಕಿನಲ್ಲಿ 2500 ನಿವೇಶನಗಳನ್ನು ಸಿದ್ದಪಡಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಗುರಿ ಹೊಂದಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆ ನಿಷ್ಪಕ್ಷಪಾತವಾಗಿರಲಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತದ ಭವನದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಶ್ರಯ ಯೋಜನೆಯಡಿ ಪ್ರತಿ ತಾಲ್ಲೂಕಿನಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಈಗಾಗಲೇ ಜಿಲ್ಲೆಯಾದ್ಯಂತ 288 ಎಕರೆ ಸರ್ಕಾರಿ ಜಮೀನು ಗುರ್ತಿಸಿ ನಿವೇಶನ ಸಿದ್ದಪಡಿಸಲಾಗುತ್ತಿದೆ. ದೇವನಹಳ್ಳಿ ತಾಲ್ಲೂಕಿನಲ್ಲಿ 62 ಎಕರೆ ಸರ್ಕಾರಿ ಜಮೀನಿನಲ್ಲಿ 557 ನಿವೇಶನಗಳನ್ನು ಸಿದ್ದಪಡಿಸಲಾಗಿದ್ದು ಮುಂದುವರಿದು ನಿವೇಶನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಆದಷ್ಟು ಬೇಗ ತಾಲ್ಲೂಕಿನಲ್ಲಿ 2500 ನಿವೇಶನ ಸಿದ್ದಪಡಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು.
ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಯಾವುದೇ ಜಾತಿ, ಪಕ್ಷವನ್ನು ನೋಡದೇ ನಿಷ್ಪಕ್ಷಪಾತದಿಂದ ಆಯ್ಕೆ ಮಾಡಿ. ಸ್ಥಳೀಯ ಹಂತದಲ್ಲಿ ಯಾವುದೇ ಸಮಸ್ಯೆ ಇರಲಿ ಯಾರ ಒತ್ತಡಕ್ಕೂ ಮಣಿಯದೆ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ 2500 ಮನೆಗಳನ್ನು ನೀಡುವ ಗುರಿ ಹೊಂದಿದ್ದು, ವಸತಿ ಸಚಿವರಿಂದ ಮಂಜೂರಾತಿ ಸಿಕ್ಕಿದೆ. ಶೀಘ್ರ ವಸತಿ ರಹಿತ ಅರ್ಹರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಪೋಡಿ ಅಭಿಯಾನದಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಅದನ್ನು ಹಾಗೇ ಮುಂದುವರೆದುಕೊಂಡು ಹೋಗುವ ಜವಾಬ್ದಾರಿ ಅಧಿಕಾರಿಗಳ ಕೈಯಲ್ಲಿದೆ. ಮೊದಲು ಪೋಡಿ ಮುಕ್ತ ಗ್ರಾಮಗಳಾಗಬೇಕು.ಹಾಗಾಗಿ ಕಂದಾಯ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ನೋಡಿಕೊಂಡು ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ಕ್ರಮ ವಹಿಸಿ. ಕೆಲವು ಪಂಚಾಯಿತಿ ಅಧ್ಯಕ್ಷರುಗಳ ದೂರಿನ ಮೇರೆಗೆ ಜೆಜೆಎಂ ಕಾಮಗಾರಿಯಿಂದ ಗ್ರಾಮಗಳಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಅಗೆದಿರುವ ರಸ್ತೆಗಳನ್ನು ಶೀಘ್ರ ಮುಚ್ಚಬೇಕು. ಕಳೆದ ಸಾಲಿನಲ್ಲಿ ಶುರುವಾದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಉತ್ತಮ ಫಲಿತಾಂಶ ಬರಲು ಅಧಿಕಾರಿಗಳು, ಶಿಕ್ಷಕರು ಶ್ರಮಿಸಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ಹಾಸ್ಟೆಲ್ ಗಳಲ್ಲಿ ಅವಶ್ಯಕ ಮೂಲಭೂತ ಹಾಗೂ ಇನ್ನಿತರ ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ, ತೋಟಗಾರಿಕೆ ಚಟುವಟಿಕೆಗಳು ಶುರು ಆಗುತ್ತವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ,ಇಒ ಶ್ರೀನಾಥ್ ಗೌಡ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ದೇವನಹಳ್ಳಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.