ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಕರವೇ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಘಟನೆಯಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಐಪಿಎಲ್ ಕಪ್ ವಿಜೇತ ತಂಡ ಆರ್ ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮನ್ನು ಆಯೋಜಿಸಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯಪಾಲರು ಹಾಗೂ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದರೆ ವ್ಯವಸ್ಥಿತವಾಗಿ ಮಾಡಬಹುದಾಗಿತ್ತು. ಆದರೆ, ಸರ್ಕಾರ ನಿರ್ಲಕ್ಷಿಸಿದ ಪರಿಣಾಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿ, ಅವರ ಕುಟುಂಬಗಳು  ಇಂದು ಶೋಕಸಾಗರದಲ್ಲಿ ಮುಳುಗಿವೆ. ಅವರ ಜೀವನ ಏನು ಎಂಬುದನ್ನ ರಾಜ್ಯ ಸರ್ಕಾರ ಯೋಚನೆ ಮಾಡಬೇಕಿದೆ ಎಂದು ಹೇಳಿದರು.

ಪ್ರಚಾರ ಗಿಟ್ಟಿಸಲು ಅವರ ಮಕ್ಕಳು ಹಾಗೂ ಬೇಕಾದವರಿಗೆ ವೇದಿಕೆ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಈ ಪ್ರಕರಣದ ಆರೋಪವನ್ನು ಪೊಲೀಸ್ ಕಮಿಷನರ್ ದಯನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಹಾಕಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಪೊಲೀಸರ ಎಚ್ಚರಿಕೆ ಲೆಕ್ಕಿಸದೇ ಕಾರ್ಯಕ್ರಮವನ್ನು ಆಯೋಜಿಸಿ ಈಗ ಪೊಲೀಸ್ ಅಧಿಕಾರಿಗಳ ಅಮಾನತು  ಮಾಡಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಈ ದಕ್ಷ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಅವರ ಕುಟುಂಬಗಳಿಗೆ ನೇರವಾಗಿ ತಲುಪಬೇಕು ಎಂದು ಕರವೇ ಒತ್ತಾಯಿಸಲಾಗುತ್ತಿದ್ದು, ಸರ್ಕಾರ  ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯದಿದ್ದರೆ ಹಾಗೂ ಘಟನೆಯಲ್ಲಿ ಅನ್ಯಾಯವಾದವರಿಗೆ ನ್ಯಾಯ ದೊರಕಿಸಿಕೊಡದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರವೇ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವತ್ಥ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ, ಮುಖಂಡರಾದ ಶಿವಶಂಕರ್ ಮೊದಲಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *